ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ಜನರು ಪ್ರಾಥಮಿಕ ಆರೋಗ್ಯ ಕೇಂದ್ರದ ಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕು. ಆರೋಗ್ಯ ಕೆಡದಂತೆ ಎಚ್ಚರ ವಹಿಸಬೇಕು ಎಂದು ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ಯಲ್ದೂರು ಗ್ರಾಮದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಈ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಿನದ 24 ಗಂಟೆ ಚಿಕಿತ್ಸೆ ನೀಡಲಾಗುವುದು. ಸುತ್ತಮುತ್ತಲಿನ ಗ್ರಾಮಸ್ಥರು ಸಾಮಾನ್ಯ ಕಾಯಿಲೆಗಳಿಗೆ ದೂರದ ಪಟ್ಟಣಕ್ಕೆ ಹೋಗಿ ಚಿಕಿತ್ಸೆ ಪಡೆಯಬೇಕಾದ ಅಗತ್ಯ ಇಲ್ಲ ಎಂದು ಹೇಳಿದರು.
ಈ ಕಟ್ಟಡವನ್ನು ರೂ.2.25 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ದಾನಿ ನಾರಾಯಣಸ್ವಾಮಿ ಅವರು 2.24 ಎಕರೆ ಜಮೀನನ್ನು ಉಚಿತವಾಗಿ ನೀಡಿದ್ದಾರೆ. ಅವರ ಔದಾರ್ಯವನ್ನು ಜನ ಸ್ಮರಿಸಬೇಕು. ಆಸ್ಪತ್ರೆಗೆ ಕಾಂಪೌಂಡ್ ಹಾಗೂ ರಸ್ತೆ ನಿರ್ಮಿಸಲಾಗುವುದು. ಆಸ್ಪತ್ರೆಗೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯ ಕಲ್ಪಿಸಲಾಗುವುದು. ಆಸ್ಪತ್ರೆಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಯಾವುದೇ ಅಕ್ರಮಕ್ಕೆ ಅವಕಾಶ ಇರುವುದಿಲ್ಲ ಎಂದು ಹೇಳಿದರು.
ಈ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಾವು ಹಾಗೂ ನಾಯಿ ಕಡಿತಕ್ಕೆ ಅಗತ್ಯವಾದ ಔಷಧ ಲಭ್ಯವಿರುತ್ತದೆ. ರಕ್ತಪರೀಕ್ಷೆ ಮಾಡಲಾಗುತ್ತದೆ. ಮಧುಮೇಹ ಹಾಗೂ ವಿಷ ಸೇವನೆ ಮಾಡಿದ್ದಲ್ಲಿ ಚಿಕಿತ್ಸೆ ನೀಡಲಾಗುವುದು. ಒಂದು ತಿಂಗಳಲ್ಲಿ ಆಂಬ್ಯುಲೆನ್ಸ್ ಸೇವೆ ಪ್ರಾರಂಭಿಸಲಾಗುವುದು. ಜಿಲ್ಲೆಗೆ ಆಗತ್ಯವಿರುವ 108 ಆಂಬ್ಯುಲೆನ್ಸ್ಗಳನ್ನು ಮಂಜೂರು ಮಾಡಿಸಲಾಗುವುದು ಎಂದು ಹೇಳಿದರು.
‘ವಿಧಾನ ಸಭಾ ಚುನಾವಣೆ ಬಳಿಕ ನಾನು ಕ್ಷೇತ್ರ ಪ್ರವಾಸ ಮಾಡುತ್ತಿದ್ದೇನೆ. ಜನರ ಕುಂದು ಕೊರತೆ ವಿಚಾರಿಸುತ್ತಿದ್ದೇನೆ. ರಾಜಕೀಯ ವ್ಯಾಪಾರವಲ್ಲ. ಶುದ್ಧ ಮನಸ್ಸಿನಿಂದ ಸಾರ್ವಜನಿಕರ ಸೇವೆ ಮಾಡಬೇಕು. ನನ್ನ ಸೇವೆಯನ್ನು ಗಮನಿಸಿ ಮತದಾರರು ಆಶೀರ್ವಾದ ಮಾಡಿದ್ದಾರೆ. ಜನರ ಋಣ ತೀರಿಸುವ ಜವಾಬ್ದಾರಿ ನನ್ನದಾಗಿದೆ. ನಾನು ನಿಮ್ಮ ಸೇವಕನಂತೆ ಕೆಲಸ ಮಾಡುತ್ತೇನೆ. ನಾನು ಯಾರಿಗೂ ಹೆದರುವುದಿಲ್ಲ. ನನಗೆ ಯಾರೂ ಪಾಳೇಗಾರರಿಲ್ಲ. ನಾನು ಜನರಿಗೆ ಮಾತ್ರ ಹೆದರುತ್ತೆನೆ. ಅವರಿಗಾಗಿ ಶ್ರಮಿಸುತ್ತೆನೆ ಎಂದು ಹೇಳಿದರು.
ಕ್ಷೇತ್ರದಲ್ಲಿ ಕುಡಿಯುವ ನೀರು ಪೂರೈಕೆ, ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ. ಪಕ್ಷಾತೀತವಾಗಿ ಅರ್ಹ ಫಲಾನುಭವಿಗಳಿಗೆ ಮನೆಗಳನ್ನು ನಿರ್ಮಿಸಿಕೊಡಲಾಗುವುದು. ಹೊಗಳಗೆರೆ ಗ್ರಾಮದ ರೂ.15 ಲಕ್ಷ ವೆಚ್ಚದಲ್ಲಿ ಎರಡು ಸಮುದಾಯ ಭವನ ನಿರ್ಮಿಸಲಾಗುವುದು. ಗಂಗಾ ಕಲ್ಯಾಣ ಯೋಜನೆಯಡಿ 4 ಕೊಳವೆ ಬಾವಿ ನಿರ್ಮಿಸಲಾಗುವುದು, ಪೆನ್ಸ್ನ್ ಅದಾಲತ್ ಮೂಲಕ ಸಮಸ್ಯೆ ಬಗೆಹರಿಸಲಾಗುವುದು. ಅಧಿಕಾರಿಗಳು ಯಾವುದೇ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದಸ್ವಾಮಿ, ತಹಶೀಲ್ದಾರ್ ಬಿ.ಎಸ್.ರಾಜೀವ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿ.ನಾರಾಯಣಸ್ವಾಮಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಜಯಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಜಿ.ಶ್ರೀನಿವಾಸನ್, ಡಾ.ಪ್ರದೀಪ್ ಕುಮಾರ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಕೆ.ಕೆ.ಮಂಜು, ಸುಧಾಕರ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಎನ್.ನರಸೇಗೌಡ, ಗೌರಮ್ಮ ಇದ್ದರು.