ಬೆಂಗಳೂರು: ಬಿಜೆಪಿ ನಾಯಕರಾದ ಅನಂತಕುಮಾರ್ ಹೆಗಡೆ, ಬಿ.ಎಸ್.ಯಡಿಯೂರಪ್ಪ, ಈಶ್ವರಪ್ಪ ಸಾರ್ವಜನಿಕ ಬದುಕಿನಲ್ಲಿರುವುದಕ್ಕೆ ನಾಲಾಯಕ್ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ವಾಗ್ದಾಳಿ ನಡೆಸಿದರು.
ರವಿವಾರ ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಪ್ರಧಾನ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 100ನೆ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ಮುಖಂಡರು ಹತಾಶ ಮನೋಭಾವದಿಂದ ಮಾತನಾಡುತ್ತಿದ್ದಾರೆ. ಆರೆಸ್ಸೆಸ್ನಿಂದ ಕಲಿತದ್ದು ಈ ಸಂಸ್ಕೃತಿಯನ್ನೇ ಎಂದು ವ್ಯಂಗ್ಯವಾಡಿದರು.
ಡಿಸೆಂಬರ್ನಿಂದ ಮತ್ತೆ 'ಮನೆಗೆ ಮನೆಗೆ ಕಾಂಗ್ರೆಸ್' ಕಾರ್ಯಕ್ರಮವನ್ನು ಮುಂದುವರೆಸಲಾಗುವುದು. 'ಮನೆ ಮನೆಗೆ ಕಾಂಗ್ರೆಸ್' ಕಾರ್ಯಕ್ರಮದಲ್ಲಿ ಮಹಿಳಾ ಕಾರ್ಯಕರ್ತೆಯರಿಂದ ಇಂದಿರಾಗಾಂಧಿ ಫೋಟೊ ಇಟ್ಟು 100 ದೀಪಗಳನ್ನು ಹಚ್ಚುವ ಮೂಲಕ ಅವರಿಗೆ ನಮನ ಸಲ್ಲಿಸಲು ಸೂಚಿಸಲಾಗಿದೆ ಎಂದು ಪರಮೇಶ್ವರ್ ನುಡಿದರು.
ಕೇಂದ್ರದ ಮಾಜಿ ಸಚಿವ ಜಾಫರ್ ಶರೀಫ್ ಮಾತನಾಡಿ, ಸೇಡಿನ ರಾಜಕಾರಣ ಮಾಡುವುದನ್ನು ಮೊದಲು ನಿಲ್ಲಿಸಬೇಕು. ಅನಗತ್ಯವಾಗಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡುವುದನ್ನು ಬಿಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಜನರಿಗಾಗಿ ಅತ್ಯುತ್ತಮ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.ಇಂತಹ ಯೋಜನೆಗಳ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಸಾರ್ವಜನಿಕರಿಗೆ ಮಾಹಿತಿ ನೀಡುವ ಕೆಲಸ ಮಾಡಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎಸ್.ಆರ್.ಪಾಟೀಲ್, ದಿನೇಶ್ ಗುಂಡೂರಾವ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.