ಬೆಂಗಳೂರು: ರಾಜ್ಯ ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಸಿಗದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರಕಾರ ರಚನೆಯಾಗುವುದು ಬಹುತೇಕ ಖಚಿತವಾಗಿದೆ.
ಸರಕಾರ ರಚನೆಗೆ ಜೆಡಿಎಸ್ ಗೆ ಬೆಂಬಲ ಘೋಷಿಸಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ತಿಳಿಸಿದ್ದಾರೆ.
ಈ ನಡುವೆ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೂರವಾಣಿ ಮೂಲಕ ಸಂಪರ್ಕಿಸಿ ಸರಕಾರ ರಚನೆಯ ಬಗ್ಗೆ ಮಾತುಕತೆ ನಡೆಸಿದ್ದಾರೆಂದು ತಿಳಿದು ಬಂದಿದೆ.
ಬಿಜೆಪಿ ಗರಿಷ್ಠ ಸ್ಥಾನಗಳನ್ನು ಜಯಿಸಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ,ಸರಕಾರ ರಚನೆಗೆ ಮ್ಯಾಜಿಕ್ ಸಂಖ್ಯೆ(113) ಗಳಿಸುವಲ್ಲಿ ವಿಫಲವಾಗಿದೆ.
104 ಕ್ಷೇತ್ರಗಳಲ್ಲಿ ಬಿಜೆಪಿ, 78 ಕ್ಷೇತ್ರಗಳಲ್ಲಿ ಕಾಂಗ್ರೆಸ್, 38ರಲ್ಲಿ ಜೆಡಿಎಸ್ , 2ರಲ್ಲಿ ಇತರ ಪಕ್ಷಗಳು ಮೇಲುಗೈ ಸಾಧಿಸಿದೆ. ಇನ್ನೂ 20 ಕ್ಷೇತ್ರಗಳ ಫಲಿತಾಂಶ ಪ್ರಕಟಣೆ ಬಾಕಿ ಇದೆ. ಬದಲಾದ ಪರಿಸ್ಥಿತಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತೆ ಮುಖ್ಯ ಮಂತ್ರಿಯಾಗುವ ಸಾಧ್ಯತೆ ಕಂಡು ಬಂದಿದೆ.
ಬಿಜೆಪಿ ಅಧಿಕ ಸ್ಥಾನಗಳನ್ನು ಗೆದ್ದುಕೊಂಡಿದ್ದರೂ, ಸರಕಾರ ರಚನೆಯ ಕನಸು ದೂರವಾಗಿದೆ. ಕಾಂಗ್ರೆಸ್ -ಜೆಡಿಎಸ್ ನಡೆ ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ.