ಬೆಂಗಳೂರು: ಅಸ್ತಿತ್ವದಲ್ಲಿರುವ ಅಕ್ರಮ ಕಸಾಯಿ ಖಾನೆಗಳನ್ನು ಗುರುತಿಸಿ ಕ್ರಮ ಜರುಗಿಸುವ ಸಂಬಂಧ ಈವರೆಗೆ ಕೈಗೊಂಡ ಕ್ರಮಗಳ ಕುರಿತು ಸೆ.21ರಂದು ಪ್ರಗತಿ ವರದಿ ಸಲ್ಲಿಸುವಂತೆ ರಾಜ್ಯ ಸರಕಾಕ್ಕೆ ಹೈಕೋರ್ಟ್ ತಾಕೀತು ಮಾಡಿದೆ.
ಈ ಸಂಬಂಧ ಕಸಾಯಿಖಾನೆಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ಜಾನುವಾರುಗಳನ್ನು ರಕ್ಷಿಸಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ಗೋ ಗ್ಯಾನ್ ಎಂಬ ಸರಕಾರೇತರ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿತು.
ಅಕ್ರಮ ಕಸಾಯಿ ಖಾನೆಗಳ ವಿರುದ್ಧ ಕ್ರಮ ಜರಗಿಸಲು ನೀಡಲಾಗಿದ್ದ ನಿರ್ದೇಶನಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಸರಕಾರದ ವಿರುದ್ದ ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿ, ಅಕ್ರಮ ಕಸಾಯಿ ಖಾನೆಗಳನ್ನು ಗುರುತಿಸಿ ಕ್ರಮ ಜರುಗಿಸುವ ಸಂಬಂಧ ಈವರೆಗೆ ಕೈಗೊಂಡ ಕ್ರಮಗಳ ಕುರಿತು ಪ್ರಗತಿ ವರದಿ ಸಲ್ಲಿಸುವಂತೆ ಸರಕಾರಕ್ಕೆ ತಾಕೀತು ಮಾಡಿತು.
ಕಾನೂನು ಬಾಹಿರವಾಗಿ ಜಾನುವಾರುಗಳನ್ನು ಹತ್ಯೆ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಇಲಾಖೆಗೆ ಆದೇಶಿಸಿದ್ದರೂ ಏಕೆ ಕ್ರಮ ಕೈಗೊಂಡಿಲ್ಲ. ಅಲ್ಲದೆ, ಪೊಲೀಸರು ಹಾಗೂ ಆರ್ಟಿಒಗಳು ಏಕೆ ಸುಮ್ಮನಿದ್ದಾರೆ ಎಂದು ಪ್ರಶ್ನಿಸಿದ ನ್ಯಾಯಪೀಠವು ನಾಳೆಯೇ ಇದರ ಬಗ್ಗೆ ವರದಿ ಸಲ್ಲಿಸುವಂತೆ ಸರಕಾರಕ್ಕೆ ಸೂಚಿಸಿತು.
ಗೋವುಗಳ ಹತ್ಯೆಗೂ ಮುನ್ನ ಅವುಗಳ ವಯಸ್ಸು, ಅವುಗಳು ಹಾಲು ಕೊಡುತ್ತಿವೆಯೇ, ಕೃಷಿ ಚಟುವಟಿಕೆಗಳಿಗೆ ಯೋಗ್ಯವಾಗಿವೆಯೇ ಎಂಬ ಅಂಶಗಳನ್ನು ಪರಿಗಣಿಸಬೇಕು. ಅಂತಿಮವಾಗಿ ಗೋವುಗಳನ್ನು ಕಸಾಯಿ ಖಾನೆಗೆ ಕಳುಹಿಸುವ ಸಂಬಂಧ ಪಶು ವೈದ್ಯರಿಂದ ದೃಢೀಕರಿಸಿಕೊಳ್ಳಬೇಕು. ಆದರೆ ಬಹುತೇಕ ಸಂದರ್ಭಗಳಲ್ಲಿ ಈ ಕಾನೂನನ್ನು ಪಾಲಿಸಲಾಗುತ್ತಿಲ್ಲ. ಕೇವಲ ಇದೊಂದು ಪ್ರಕರಣವಲ್ಲ. ಹುಬ್ಬಳ್ಳಿ, ಕಲಬುರಗಿ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಜಾನುವಾರುಗಳನ್ನು ಕಾನೂನುಬಾಹಿರವಾಗಿ ಹತ್ಯೆ ಮಾಡಲಾಗುತ್ತಿದೆ. ಇದಕ್ಕೊಂದು ಶಾಶ್ವತ ಪರಿಹಾರದ ಅಗತ್ಯವಿದೆ ಎಂದು ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿತು.
ಅರ್ಜಿದಾರರ ಪರ ವಕೀಲ ಪವನ್ಚಂದ್ರಶೆಟ್ಟಿ ವಾದಿಸಿದರು, ಸರಕಾರದ ಪರ ವಕೀಲ ಚೌಟ್ ಅವರು ವಾದಿಸಿದರು.