ಭಟ್ಕಳ: ಸೋಲು ಎನ್ನುವುದು ಮನುಷ್ಯನಿಗೆ ಗೆಲುವನ್ನು ಅನುಭವಿಸುವಂತೆ ಮಾಡುತ್ತದೆ. ಸೋಲಿನ ನಂತರ ಗೆದ್ದರೆ ಸಿಗುವ ಅನುಭವವೇ ಆನಂದ ಮತ್ತು ಸಂತಸ ತರುವಂತಹದ್ದು ಎಂದು ಭಟ್ಕಳ ಉಪವಿಭಾಗದ ಡಿ.ವೈ.ಎಸ್.ಪಿ ವೆಲಂಟೇನ್ ಡಿ’ಸೋಜಾ ಹೇಳಿದರು.
ಅವರು ಬುಧವಾರ ಹೆಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನ್ಯೂ ಶಮ್ಸ್ ಸ್ಕೂಲ್ ನ ಸೈಯ್ಯದ್ ಅಲಿ ಕ್ಯಾಂಪಸ್ ನಲ್ಲಿ ಆಯೋಜಿಸಿದ್ದ 47ನೇ ಶಾಲಾ ವಾರ್ಷಿಕ ಕ್ರೀಡಾಕೂಟವನ್ನು ಧ್ವಜಾರೋಹಣ ಮಾಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.
ಅಂತರರಾಷ್ಟ್ರೀಯ ಜಿಮ್ ಪಟುವಾಗಿರುವ ಅವರು ತನ್ನ ಸಾಧನೆಗೆ ಮೊದಲ ಸೋಲೇ ಕಾರಣವಾಗಿದ್ದು ತಾನು ಈ ಮಟ್ಟಕ್ಕೆ ಬೆಳೆದು ನಿಲ್ಲಲು ತನ್ನ ವಿದ್ಯಾರ್ಥಿ ಜೀವನದಲ್ಲಿ ಅನುಭವಿಸಿದ ಮೊದಲ ಸೋಲೆ ಕಾರಣವೆಂದರು. ಶಮ್ಸ್ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕ್ರೀಡೆ ಹಾಗೂ ಶಿಕ್ಷಣದ ಜತೆಗೆ ಉತ್ತಮ ಜೀವನ ಮೌಲ್ಯಗಳನ್ನು ನೀಡುತ್ತಿರುವುದು ಉತ್ತಮ ಬೆಳವಣೆಗೆಯಾಗಿದೆ. ಭಾವೈಕ್ಯತೆ, ಸೌಹಾರ್ಧತೆಯನ್ನು ನಾವು ಬೇರೆ ಬೇರೆ ಕಡೆಗಳಲ್ಲಿ ಹುಡುಕುತ್ತೇವೆ. ಆದರೆ ಈ ಸಂಸ್ಥೆಯು ಭಾವೈಕ್ಯತೆ ಭವ್ಯ ಸೌಧವಾಗಿದೆ ಎಂದು ಶ್ಲಾಘಿಸಿದರು.
ವಾಲಿಬಾಲ್ ಕ್ರೀಡಾಂಗಣವನ್ನು ಉದ್ಘಾಟಿಸಿ ಮಾತನಾಡಿದ ರಾಷ್ಟ್ರೀಯ ಕ್ರೀಡಾಪಟು ಹಾಗೂ ಭಟ್ಕಳ ತಾಲೂಕು ಕಬಡ್ಡಿ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಶ್ರೀಧರ್ ನಾಯ್ಕ, ಭಟ್ಕಳದಲ್ಲಿ ಕ್ರೀಡಾಪಟುಗಳಿಗೆ ಕೊರೆತೆಯಿಲ್ಲ. ಅವರಿಗೆ ಸರಿಯಾದ ಮಾರ್ಗದರ್ಶನ ಹಾಗೂ ತರಬೇತಿಯ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ತಾನು ಇಲ್ಲಿ ಕಬಡ್ಡಿ ಕ್ರೀಡಾಪಟುಗಳು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ತರಬೇತಿ ನೀಡುವ ಯೋಜನೆಯಿದೆ ಎಂದು ತಿಳಿಸಿದರು.
ಮುಖ್ಯ ಅಥಿತಿಯಾಗಿ ಉಪಸ್ಥಿತರಿದ್ದ ತಂಝೀಮ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮುಹಿದ್ದೀನ್ ಅಲ್ತಾಫ್ ಖರೂರಿ ಸಂರ್ದಭೋಚಿತವಾಗಿ ಮಾತನಾಡಿದರು.
ಸ್ಕೂಲ್ ಬೋರ್ಡ್ ಚೇರ್ಮನ್ ಕಾದಿರ್ ಮೀರಾ ಪಟೇಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಎಂ.ಆರ್.ಮಾನ್ವಿ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ತಲ್ಹಾ ಸಿದ್ದಿಬಾಪ ಧನ್ಯವಾದ ಅರ್ಪಿಸಿದರು. ವಿದ್ಯಾರ್ಥಿ ಕುಮಾರ್ ಆಸೀಮ್ ಖಯಾಲ್ ಕಾರ್ಯಕ್ರಮ ನಿರೂಪಿಸಿದರು.
ವೇದಿಕೆಯಲ್ಲಿ ಸಂಸ್ಥೆಯ ಪಿ.ಆರ್.ಒ ಕಾರ್ಯದರ್ಶಿ ಮೌಲಾನ ಅಝೀಝುರ್ರಹ್ಮಾನ್ ನದ್ವಿ ರುಕ್ನುದ್ದೀನ್, ಇಸ್ಮಾಯಿಲ್ ಝೋರೇಝ್, ಅಬ್ದುತ್ತವ್ವಾಬ್ ಅಕ್ರಮಿ, ದೈಹಿಕ ಶಿಕ್ಷಣ ಶಿಕ್ಷಕ ಮಹೇಶ್ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು.
ವಿದ್ಯಾರ್ಥಿ ನಾಯಕ ಮುಹಮ್ಮದ್ ನೇತೃತ್ವದಲ್ಲಿ ಆಕರ್ಷಕ ಪಥಸಂಚಲನ ನಡೆಯಿತು.