ಧಾರವಾಡ : ಶುಕ್ರವಾರ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಕಲು ಎಸಗಿದ 7 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್ ಸಿದ್ಧಲಿಂಗಯ್ಯ ಹಿರೇಮಠ ತಿಳಿಸಿದ್ದಾರೆ.
ನಕಲು ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ಧಾರವಾಡ ಜಿಲ್ಲೆಯ 6 ವಿದ್ಯಾರ್ಥಿಗಳು ಹಾಗೂ ಬಾಗಲಕೋಟ ಜಿಲ್ಲೆಯ ಒಬ್ಬ ವಿದ್ಯಾರ್ಥಿಯನ್ನು ಪರೀಕ್ಷೆ ಬರೆಯದಂತೆ ಅನರ್ಹಗೊಳಿಸಲಾಗಿದೆ ಎಂದರು. ಬೆಳಗಾವಿ ವಿಭಾಗದ ವಿಜಯಪೂರ, ಬಾಗಲಕೋಟ, ಬೆಳಗಾವಿ, ಉತ್ತರಕನ್ನಡ, ಧಾರವಾಡ, ಹಾವೇರಿ, ಹಾಗೂ ಗದಗ ಕಂದಾಯ ಜಿಲ್ಲೆಗಳು ಮತ್ತು ಶಿರಸಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳ ವ್ಯಾಪ್ತಿಯಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡ 2,13,057 ವಿದ್ಯಾರ್ಥಿಗಳ ಪೈಕಿ ಪರೀಕ್ಷೆಯ ಮೊದಲ ದಿನ 1,08711 ಬಾಲಕರು ಮತ್ತು 98,582 ಬಾಲಕಿಯರು ಸೇರಿದಂತೆ ಒಟ್ಟು 2,07293 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 3865 ಬಾಲಕರು ಹಾಗೂ 1899 ಬಾಲಕಿಯರು ಸೇರಿ ಒಟ್ಟು 5764 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಉಳಿದ್ದಾರೆ ಎಂದು ಅವರು ವಿವರಿಸಿದ್ದಾರೆ.