ಭಟ್ಕಳ: ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ಬುಧವಾರ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ರಾಜ್ಯಮಟ್ಟದ ಅಥ್ಲೆಟಿಕ್ಸ್ ನಲ್ಲಿ ಭಟ್ಕಳದ ಅಂಜುಮನ್ ಹಾಮಿಯೇ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಇಸ್ಲಾಮಿಯಾ ಆಂಗ್ಲೋ ಉರ್ದು ಪ್ರೌಢಶಾಲೆಯ ವಿದ್ಯಾರ್ಥಿ ಸೈಯ್ಯದ್ ಮುಬೀನ್ ಸೈಯ್ಯದ್ ಸುಲ್ತಾನ್ ಎಸ್.ಎಂ. ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ ಎಂದು ದೈಹಿಕ ಶಿಕ್ಷಣ ಶಿಕ್ಷಕ ರಾಜಾಸಾಬ್ ಮಂಡ್ಯದಿಂದ ದೂರವಾಣಿ ಮೂಲಕ ವಾರ್ತಾಭಾರತಿಗೆ ಮಾಹಿತಿ ನೀಡಿದ್ದಾರೆ.
ಸದರಿ ವಿದ್ಯಾರ್ಥಿ ವಲಯ, ತಾಲೂಕು ಹಾಗೂ ಜಿಲ್ಲಾಮಟ್ಟದ ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದನು. ಬುಧವಾರ ಆದಿಚುಂಚನಗಿರಿಯಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆಯುವುದರ ಮೂಲಕ ಡಿ 24ರಿಂದ ದೆಹಲಿಯಲ್ಲಿ ಜರಗುವ ರಾಷ್ಟ್ರೀಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆರ್ಹತೆಯನ್ನು ಪಡೆದುಕೊಂಡಿದ್ದಾಗಿ ಮಾಹಿತಿ ನೀಡಿದ ಅವರು ಅಲ್ಲಿಯೂ ಉತ್ತಮ ಪ್ರದರ್ಶನ ನೀಡುವದರ ಮೂಲಕ ರಾಜ್ಯ ಹಾಗೂ ಜಿಲ್ಲೆಗೆ ಖ್ಯಾತಿ ತರಲಿದ್ದಾನೆ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿರುವ ಸಂಸ್ಥೆಯ ಅಧ್ಯಕ್ಷ ಜುಕಾಕೋ ಅಬ್ದುಲ್ ರಹೀಮ್, ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಸಿದ್ದೀಖ್, ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಇಸ್ಹಾಖ್ ಶಾಬಂದ್ರಿ ಹಾಗೂ ಶಾಲೆಯ ಮುಖ್ಯಾಧ್ಯಾಪಕ ಶಬ್ಬಿರ್ ಆಹ್ಮದ್ ದಫೆದಾರ್ ತರಬೇತುದಾರರಾದ ಫಾರೂಖ್ ಘನಿ ಹಾಗೂ ರಾಜಾಸಾಬ್ ರನ್ನು ಅಭಿನಂದಿಸಿದ್ದಾರೆ.