ಕಾರವಾರ: ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯಿದೆ ೨೦೦೫ ನಿಯಮದ ಡಿಯಲ್ಲಿ ದಾಖಲಾದ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ತಪಡಿಸಲು ಅಧಿಕಾರಿಗಳು ಮುತುವರ್ಜಿ ವಹಿಸಬೇಕೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಳಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಅಧಿನಿಯಮ ಅನ್ವಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಕುಟುಂಬಗಳಲ್ಲಿ ನಡೆಯುವ ದೌರ್ಜನ್ಯಗಳು ಹೆಚ್ಚಿನ ಸಂದರ್ಭಗಳಲ್ಲಿ ಮರ್ಯಾದೆ ಕಾರಣಕ್ಕೆ ಬೆಳಕಿಗೆ ಬರುವುದಿಲ್ಲ. ಬೆಳಕಿಗೆ ಬಂದಂತಹ ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ಸೂಕ್ತ ವಕೀಲರನ್ನು ನೇಮಕ ಮಾಡಿ ಸಾಧ್ಯವಾದಷ್ಟು ಬೇಗನೆ ಇತ್ಯರ್ಥಪಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಸಭೆಯಲ್ಲಿ ಮಾಹಿತಿ ನೀಡಿ ಜಿಲ್ಲೆಯಲ್ಲಿ ಪ್ರತಿ ತಾಲೂಕಿಗೆ ಒಂದರಂತೆ ೧೧ ಮಹಿಳಾ ಸಾಂತ್ವನ ಕೇಂದ್ರಗಳಿವೆ. ಸಾಂತ್ವನ ಕೇಂದ್ರಗಳಲ್ಲಿ ಕೌಟುಂಬಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳು ದಾಖಲಾಗುತ್ತವೆ. ಅದೆ ರೀತಿ ಚಿಕಿತ್ಸಾ ಘಟಕದಲ್ಲೂ ಕೂಡಾ ಗಂಬೀರ ಸ್ವರೂಪದ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ದಾಖಲಾಗುತ್ತವೆ. ಇಲ್ಲಿ ಆಪ್ತಸಮಾಲೋಚಕರು, ಎರಡು ಜನ ಸಮಾಜ ಸೇವಕರು, ಎರಡು ಜನ ವಕೀಲರು ಮಹಿಳಾ ಪೊಲೀಸ್ ಪೇದೆ ಕಾರ್ಯನಿರ್ವಹಿಸುತ್ತಾರೆ. ಜಿಲ್ಲೆಯ ೧೧ ಮಹಿಳಾ ಸಾಂತ್ವನ ಕೇಂದ್ರಗಳಲ್ಲಿ ಜನವರಿ ೨೦೧೬ ರಿಂದ ಜನವರಿ ೨೦೧೭ ರವರೆಗೆ ಕೌಟುಂಬಿಕ ಹಿಂಸೆಗೆ ಸಂಬಂಧಪಟ್ಟಂತೆ ಒಟ್ಟು ೨೨೮ ಪ್ರಕರಣಗಳು ದಾಖಲಾಗಿರುತ್ತವೆ. ಇದರಲ್ಲಿ ೧೫೯ ಪ್ರಕರಣಗಳು ಇತ್ಯರ್ಥಗೊಂಡಿರುತ್ತವೆ. ೫೮ ಪ್ರಕರಣಗಳು ಸಂರಕ್ಷಣಾಧಿಕಾರಿಗಳಲ್ಲಿ ಮತ್ತು ೧೧ ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿಯಿವೆ ಎಂದು ತಿಳಿಸಿದರು.
ಬಾಲ್ಯ ವಿವಾಹ ನಿಗಾವಹಿಸಬೇಕು: ಜಿಲ್ಲೆಯಲ್ಲಿ ಬಾಲ್ಯ ವಿವಾಹ ಪ್ರಕರಣಗಳ ಮೇಲೆ ನಿಗಾ ವಹಿಸಿ ತಡೆಯಬೇಕು. ಸಾಮೂಹಿಕ ವಿವಾಹ ಸಮಾರಂಭಗಳಲ್ಲಿ ಬಾಲ್ಯ ವಿವಾಹ ನಡೆಯದಂತೆ ಮುನ್ನಚ್ಚರಿಕೆ ವಹಿಸಬೇಕು. ಬಾಲ್ಯ ವಿವಾಹ ನಡೆದ ಬಳಿಕ ಸಹ ಪ್ರಕರಣವನ್ನು ದಾಖಲಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎಲ್. ಚಂದ್ರಶೇಖರ ನಾಯಕ ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ದೇವೇಂದ್ರ ಪಂಡಿತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.
ಬುಧವಾರ ವಿದ್ಯುತ್ ವ್ಯತ್ಯಯ
ಕಾರವಾರ: ಫೆಬ್ರವರಿ ೨೨ ರಂದು ಕಾರವಾರ ಎನ್.ಎಚ್.ರಸ್ತೆ ಅಗಲೀಕರಣ ನಿಮಿತ್ತ ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೫.೩೦ ವರೆಗೆ ಕಾಜುಬಾಗ, ವಿಜಯನಗರ, ಕೋಡಿಬಾಗ, ಅಳವೇವಾಡ, ಸಾಯಿಕಟ್ಟಾಕ್ರಾಸ್, ಪಂಚರಾಸಿವಾಡ, ಸರ್ವೋದಯ ನಗರ, ವಿವೇಕಾನಂದ ನಗರ ಸೇರಿದಂತೆ ವಿವಿದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.