ಕಾರವಾರ: ಡಿಸೆಂಬರ್ ೧೦ರಿಂದ ಆರಂಭವಾಗಲಿರುವ ಕರಾವಳಿ ಉತ್ಸವ ಸಂದರ್ಭದಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ, ಸುಗಮ ಸಂಚಾರ ಮತ್ತು ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಹೇಳಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರಾವಳಿ ಉತ್ಸವ ಪೂರ್ವ ಸಿದ್ಧತಾ ಉಪಸಮಿತಿ ಸಭೆಯಲ್ಲಿ ಈ ಕುರಿತು ಸೂಚನೆ ನೀಡಿದರು.
ಉತ್ಸವ ಸಂದರ್ಭದಲ್ಲಿ ಭದ್ರತೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಉತ್ಸವ ನಡೆಯುವ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗುವುದು. ವಾಹನಗಳ ಸುಗಮ ಸಂಚಾರಕ್ಕಾಗಿ ರಾಷ್ಟ್ರೀಯ ಹೆದ್ದಾರಿಯ ಮೇಲಿನ ಸಂಚಾರವನ್ನು ನಿರ್ಬಂಧಿಸಲಾಗುವುದು. ಸುಮಾರು ೫೦೦ಕ್ಕೂ ಅಧಿಕ ಪೊಲೀಸ್ ಅಧಿಕಾರಿ ಸಿಬ್ಬಂದಿ ಉತ್ಸವ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಪೊಲೀಸ್ ವರಿಷ್ಟಾಧಿಕಾರಿ ವಂಶಿಕೃಷ್ಣ ಅವರು ಮಾಹಿತಿ ನೀಡಿದರು.
ವಾಹನಗಳ ಪಾರ್ಕಿಂಗ್ಗೆ ಸೂಕ್ತ ಸ್ಥಳಗಳನ್ನು ಗುರುತಿಸಲಾಗಿದೆ. ಪಾರ್ಕಿಂಗ್ ಸೂಚನಾ ಫಲಕ ಹಾಕಿದ ಸ್ಥಳದಲ್ಲಿ ಮಾತ್ರ ವಾಹನಗಳ ನಿಲುಗಡೆ ಮಾಡಬೇಕು. ಕರಾವಳಿ ಉತ್ಸವದ ಕಾರ್ಯಕ್ರಮಗಳು ಮುಖ್ಯವಾಗಿ ಮಯೂರವರ್ಮ ವೇದಿಕೆ, ಜಿಲ್ಲಾಧಿಕಾರಿ ಕಚೇರಿ ಆವರಣ, ಠಾಗೋರ್ ಕಡಲತೀರ, ರಂಗಮಂದಿರ ಮತ್ತು ಮಾಲಾದೇವಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಎಲ್ಲಾ ಸ್ಥಳಗಳಲ್ಲಿ ಕಾರ್ಯಕ್ರಮಗಳು ಸುಗಮವಾಗಿ ನಡೆಯಲು ವ್ಯವಸ್ಥೆ ಮಾಡಬೇಕಾಗಿದೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಮುಖ್ಯ ವೇದಿಕೆಯಲ್ಲಿ ಕಾರ್ಯಕ್ರಮಗಳು ನಿಗದಿತ ಸಮಯಕ್ಕೆ ಆರಂಭವಾಗಿ ಮುಕ್ತಾಯವಾಗಬೇಕು. ಮಯೂರವರ್ಮ ವೇದಿಕೆಯಲ್ಲಿ ಕಾರ್ಯಕ್ರಮ ನೀಡುವ ಪ್ರತಿ ಕಲಾತಂಡಗಳಿಗೆ ಸಮನ್ವಯ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಪ್ರವೇಶದ್ವಾರದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತು ಇರುವುದು. ಸಮನ್ವಯ ಅಧಿಕಾರಿಗಳು ಯಾವುದೇ ಗೊಂದಲಕ್ಕೆ ಆಸ್ಪದವಾಗದಂತೆ ಪೊಲೀಸರೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಅಡಿಷನಲ್ ಎಸ್ಪಿ ಆರ್.ದೇವರಾಜ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಆಕರ್ಷಕ ಫಲಪುಷ್ಪ ಪ್ರದರ್ಶನ ಮತ್ತು ಚಿತ್ರಕಲಾ ಪ್ರದರ್ಶನ
ಈ ಬಾರಿಯ ಕರಾವಳಿ ಉತ್ಸವ ಸಂದರ್ಭದಲ್ಲಿ ಫಲಪುಷ್ಪ ಪ್ರದರ್ಶನ ಪ್ರಮುಖ ಆಕರ್ಷಣೆಯಾಗಲಿದೆ. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸ್ಥಳಾವಕಾಶ ನೀಡಲಾಗಿದ್ದು, ಡಿಸೆಂಬರ್ ೧೦ರಂದು ಫಲಪುಷ್ಪ ಪ್ರದರ್ಶನದ ಉದ್ಘಾಟನೆ ನಡೆಯಲಿದೆ.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಿತ್ರಕಲಾ ಪ್ರದರ್ಶನ ಸಹ ನಡೆಯಲಿದೆ. ಕರಾವಳಿ ಉತ್ಸವ ಅಂಗವಾಗಿ ಆಯೋಜಿಸಲಾಗಿದ್ದ ಚಿತ್ರಕಲಾ ಶಿಬಿರದಲ್ಲಿ ನಾಡಿನ ಖ್ಯಾತ ಕಲಾವಿದರು ‘ಸ್ವಾತಂತ್ರ್ಯ ಸಂಗ್ರಾಮ’ ಕುರಿತಾಗಿ ಹಲವಾರು ಸುಂದರ ಚಿತ್ರಗಳನ್ನು ರಚಿಸಿದ್ದು, ಅವುಗಳನ್ನು ಈ ಸಂದರ್ಭದಲ್ಲಿ ಮೂರು ದಿನಗಳ ಕಾಲ ಪ್ರದರ್ಶಿಸಲಾಗುವುದು.
ಕರಾವಳಿ ಉತ್ಸವ ಕ್ರೀಡಾ ಸ್ಪರ್ಧೆ
ಕಾರವಾರ: ಕರಾವಳಿ ಉತ್ಸವ ಅಂಗವಾಗಿ ರವೀಂದ್ರನಾಥ ಕಡಲತೀರದಲ್ಲಿ ವಾಲಿಬಾಲ್, ಹಗ್ಗ ಜಗ್ಗಾಟ, ಹಾಗೂ ಬೋಟಿಂಗ್ ಸ್ಪರ್ಧೆಗಳು ನಡೆಯಲಿದ್ದು ಆಸಕ್ತರು ಡಿಸೆಂಬರ್ ೮ ರೊಳಗೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಹೆಸರು ನೋಂದಣಿ ಮಾಡಲು ಕೋರಲಾಗಿದೆ.
ಡಿ.೧೪ ರಂದು ಕೆ.ಡಿ.ಪಿ. ಸಭೆ
ಕಾರವಾರ: ಜಿಲ್ಲಾ ಪಂಚಾಯತ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಡಿಸೆಂಬರ್ ೧೪ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಕೆ.ಡಿ.ಪಿ. ಸಭೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಲ್.ಚಂದ್ರಶೇಖರ ನಾಯಕ ತಿಳಿಸಿದ್ದಾರೆ.