ಕೋಲಾರ, ಆಗಸ್ಟ್ 08:ತಾಲ್ಲೂಕನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸಲು ಎಲ್ಲರೂ ಹೆಚ್ಚಿನ ಕಾಳಜಿಯನ್ನು ವಹಿಸಬೇಕಲ್ಲದೆ ಏಳು ದಿನಗಳ ಒಳಗಾಗಿ ಶೌಚಾಲಯಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸುವ ಕಡೆಗೆ ಎಲ್ಲರ ನಡೆ ಇರಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸೂಲೂರು ಎಂ. ಆಂಜಿನಪ್ಪ ಅವರು ತಿಳಿಸಿದರು.
ಕೋಲಾರ ತಾಲ್ಲೂಕು ಪಂಚಾಯಿತಿಯಲ್ಲಿ ಇಂದು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಅತಿ ಹೆಚ್ಚು ಶೌಚಾಲಯಗಳನ್ನು ನಿರ್ಮಿಸಿದ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.
ಶೌಚಾಲಯ ನಿರ್ಮಾಣ ಕಾರ್ಯವನ್ನು ಚಾಲೆಂಜ್ ಆಗಿ ತೆಗೆದುಕೊಂಡು ಆಗಸ್ಟ್ 15 ರೊಳಗಾಗಿ ತಾಲ್ಲೂಕನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸಲು ಹೆಚ್ಚು ಕಾಳಜಿ ವಹಿಸಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಕಾರಾತ್ಮಕ ಮನೋಭಾವನೆಯಿಂದ ಶ್ರಮವಹಿಸಿದ್ದೇ ಆದರೆ ಗುರಿ ತಲುಪುವುದು ಕಷ್ಟವೇನು ಅಲ್ಲ ಎಂದರು.
ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶೌಚಾಲಯ ನಿರ್ಮಾಣ ಕಾರ್ಯವನ್ನು ಮಾಡಬೇಕು. ಬೆಳಗಿನ ಸಮಯದಲ್ಲಿ ಗ್ರಾಮಗಳಿಗೆ ಭೇಟಿ ನೀಡಿ ಶೌಚಾಲಯ ನಿರ್ಮಾಣಕ್ಕೆ ಪ್ರೇರೇಪಿಸಬೇಕು. ನಿಗಧಿತ ಅವಧಿಯಲ್ಲಿ ಗುರಿ ಸಾಧಿಸಿದರೆ ಇಷ್ಟು ದಿನದ ಕಷ್ಟಕ್ಕೆ ಸಾರ್ಥಕತೆ ಸಿಗುತ್ತದೆ ಎಂದು ಹೇಳಿದರು.
ತಾಲ್ಲೂಕಿನ ಒಟ್ಟು 36 ಗ್ರಾಮಪಂಚಾಯಿತಿಗಳಲ್ಲಿ ಈಗಾಗಲೇ ಚೆನ್ನಸಂದ್ರ, ಕ್ಯಾಲನೂರು, ನರಸಾಪುರ ಗ್ರಾಮ ಪಂಚಾಯಿತಿಗಳನ್ನು ಬಯಲು ಬಹಿರ್ದೆಸೆ ಮುಕ್ತ ಪಂಚಾಯಿತಗಳನ್ನಾಗಿ ಘೋಷಣೆ ಮಾಡಲಾಗಿದೆ. ಇನ್ನು ಐದಾರು ಪಂಚಾಯಿತಿಗಳನ್ನು ಹೊರತು ಪಡಿಸಿದರೆ ಉಳಿದೆಲ್ಲಾ ಪಂಚಾಯಿಗಳು ಶೇ.90 ಕ್ಕೂ ಹೆಚ್ಚು ಸಾಧಿಸಿದೆ. ಒಟ್ಟಾರೆ ಆಗಸ್ಟ್ 15 ಕ್ಕೆ ಕೋಲಾರ ತಾಲ್ಲೂಕನ್ನು ಬಯಲು ಬಹಿರ್ದೆಸೆ ಮುಕ್ತಗೊಳಿಸುವ ಗುರಿ ಹೊಂದಲಾಗಿದೆ.
ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಪ್ಪ ಅವರು ಮಾತನಾಡಿ, ಶೌಚಾಲಯಗಳ ನಿರ್ಮಾಣದಲ್ಲಿ ಎಲ್ಲಾ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಪಂಚಾಯಿತಿ ವ್ಯಾಪ್ತಿಯಲ್ಲಿ ಎಷ್ಟು ಶೌಚಾಲಯಗಳ ನಿರ್ಮಾಣ ಕಾರ್ಯ ಬಾಕಿ ಇದೆ ಎಂಬ ಕುರಿತು ಸೂಕ್ತ ಅಂಕಿ ಅಂಶಗಳನ್ನು ನೀಡಬೇಕು. ತಪ್ಪು ಮಾಹಿತಿ ನೀಡಿದರೆ ಅದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಲಕ್ಷ್ಮೀ ಸೇರಿದಂತೆ ವಿವಿಧ ಪಂಚಾಯಿಗಳ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.