ಕೋಲಾರ ಆ.11: ಮಕ್ಕಳ ವಿದ್ಯಾಭ್ಯಾಸಕ್ಕಾಗಿ ರಾಜ್ಯದಲ್ಲಿ 23 ಸಾವಿರ ಕೋಟಿ ವೆಚ್ಚ ಮಾಡುತ್ತಿದ್ದು, ಒಬ್ಬ ವಿದ್ಯಾರ್ಥಿಗೆ ವರ್ಷಕ್ಕೆ 21 ಸಾವಿರ ವ್ಯಯವಾಗುತ್ತಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸೂಲೂರು ಎಂ. ಆಂಜಿನಪ್ಪ ತಿಳಿಸಿದರು.
ತಾಲ್ಲೂಕಿನ ಹರಟಿ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿಂದು ಏರ್ಪಡಿಸಿದ್ದ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ವಿದ್ಯಾರ್ಥಿಗಳು ಶಾಲೆಗೆ ಹೋಗಲು ಕಷ್ಟಸಾಧ್ಯ ಸ್ಥಿತಿಯನ್ನು ಕಂಡ ಸರ್ಕಾರ ವಿದ್ಯಾರ್ಥಿಗಳು ಶಾಲೆಗೆ ನಿಯಮಿತವಾಗಿ ಹಾಜರಾಗುವಂತೆ ಗುಣಮಟ್ಟದ ಶಿಕ್ಷಣ ಪಡೆಯಸಲು, ಶಿಕ್ಷಣದಿಂದ ವಂಚಿತರಾಗದಿರಲು 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಸೈಕಲ್ ನೀಡುತ್ತಿರುವುದು ಸ್ವಾಗತಾರ್ಹ ಸಂಗತಿ ಎಂದರು.
ವಿದ್ಯಾರ್ಥಿಗಳಿಗೆ ಸರ್ಕಾರ ಈಗಾಗಲೇ ನೀಡಿರುವ ಸಮವಸ್ತ್ರ, ಪಠ್ಯಪುಸ್ತಕದಂತೆ ಸೈಕಲ್ನ್ನು ಜೋಪಾನ ಮಾಡಬೇಕು. ಸೈಕಲ್ನಲ್ಲಿ ಶಾಲೆಗೆ ಬಂದು ಶಿಕ್ಷಣದ ಗುರಿ ಮುಟ್ಟಬೇಕು ಎಂದರು.
ಸರ್ಕಾರಿ ಶಾಲೆಗಳು ಇಂದು ಯಾವುದರಲ್ಲೂ ಕಡಿಮೆಯಿಲ್ಲ. ಉತ್ತಮ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಶಿಕ್ಷಕರು ಜ್ಞಾನವಂತರಾಗಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಮಹಾನ್ ವ್ಯಕ್ತಿಗಳು ದೇಶದ ಉನ್ನತ ಸ್ಥಾನಗಳಲ್ಲಿದ್ದಾರೆ. ಸರ್ಕಾರಿ ಶಾಲೆಯಿಂದ ಕಲಿತವರು ವಿಜ್ಞಾನಿಗಳು, ಐ.ಎ.ಎಸ್. ಅಧಿಕಾರಿಗಳು ಆಗಿದ್ದಾರೆ. ಈ ಹಿನ್ನಲೆಯಲ್ಲಿ ವಿದ್ಯೆ ಯಾರ ಸ್ವತ್ತು ಅಲ್ಲ. ಸರ್ಕಾರಿ ಶಾಲೆಯಲ್ಲಿ ಸರ್ಕಾರಿ ಸೌಲಭ್ಯಗಳನ್ನು ಪಡೆದು ಉನ್ನತ ಜ್ಞಾನವನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಉತ್ತಮ ಸಮಾಜ ನಿರ್ಮಾಣವಾಗಬೇಕಾದರೆ, ಮೊದಲು ಶಿಕ್ಷಣ ಪಡೆಯಬೇಕು. ವಿಧ್ಯೆ ಪಡೆದು ಆದರ್ಶಪ್ರಾಯರಾಗುವಂತೆ ಸರ್ಕಾರಿ ಪ್ರೌಢ ಶಾಲಾ ಮುಖ್ಯೋಪಾದ್ಯಾಯಿನಿ ಶಶಿವಧನ ಅಭಿಪ್ರಾಯಪಟ್ಟರು.
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಕೆ. ವೆಂಕಟರಾಮಪ್ಪ ಮಾತನಾಡಿ ವಿದ್ಯಾರ್ಥಿಗಳು ಕಲಿಯುವಾಗ ಕೊರಗದೆ, ಸೊರಗದೆ ಶಾಲೆಯ ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ಸರ್ಕಾರ ತಮ್ಮ ಮೇಲೆ ಇಟ್ಟಿರುವ ನಂಬಿಕೆ ಅರ್ಹರಾಗುವ ಮೂಲಕ ಉತ್ತಮ ಸಾಧನೆ ಮಾಡುವಂತೆ ಹೇಳಿದರು.
ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಗೋಪಾಲಕೃಷ್ಣ ಮುಖಂಡರಾದ ನಾಗಭೂಷಣ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಶಾಲಾ ಮುಖ್ಯೋಪಾದ್ಯಾಯ ಜಿ. ಶ್ರೀನಿವಾಸ್, ಸಮೂಹ ಸಂಪನ್ಮೂಲ ವ್ಯಕ್ತಿ ವಿ. ಮುನೇಗೌಡ, ಸಹ ಶಿಕ್ಷಕರುಗಳಾದ ಕೃಷ್ಣಪ್ಪ, ಗೋವಿಂದಪ್ಪ, ಮೀನಾ, ಮಂಜುಳ, ಮಮತ, ಮುನಿಯಪ್ಪ ಮತ್ತಿತರರು ಉಪಸ್ಥಿತರಿದ್ದು, ಇದಕ್ಕೂ ಮುನ್ನ ಭಾರತ ಸ್ವಾತಂತ್ರ್ಯ ಗಳಿಸಿ 70 ವರ್ಷ ಪೂರೈಸಿದ ಸಂದರ್ಭದಲ್ಲಿ ‘ಸಂಕಲ್ಪದಿಂದ ಸಿದ್ಧಿ’ ಪ್ರಮಾಣ ವಚನದಲ್ಲಿ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
(ಜಿ. ಶ್ರೀನಿವಾಸ್)
ಕೋಲಾರ.
ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ