ಕೋಲಾರ:ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ವಿಶೇಷ ಆಂದೋಲನ
ಕೋಲಾರ, ಜುಲೈ 15: ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳ್ಳದೆ ಹೊರಗುಳಿದಿರುವ 18-21 ವರ್ಷ ವಯಸ್ಸಿನವರೆಗಿನ ಅರ್ಹ ಯುವ ಮತದಾರರನ್ನು ಪಟ್ಟಿಗೆ ಸೇರಿಸಲು ವಿಶೇಷ ಆಂದೋಲನವನ್ನು ಜು.01 ರಿಂದ 31 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ನೂತನ ಮತದಾರರ ಪಟ್ಟಿಗೆ ಸೇರಿಸಲು ಅಗತ್ಯವಿರುವ ನಮೂನೆ 6 ನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮತದಾರರ ನೋಂದಣಾಧಿಕಾರಿಗಳಿಗೆ, ಅಂಚೆ, ಆನ್ಲೈನ್ ಮತ್ತು ಎನ್ವಿಎಸ್ಪಿ ಪೋರ್ಟ್ಲ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಅಧಿಕಾರಿಗಳ ಮೂಲಕ, ಭಾರತ ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ವೋಟರ್ ಸರ್ವೀಸಸ್ ಮೊಬೈಲ್ ಅಪ್ಲಿಕೇಷನ್ ಮೂಲಕ, ನ್ಯಾಷನಲ್ ಕಾಲ್ ಸೆಂಟರ್ “1950” ಮೂಲಕ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಜು. 22 ಮತ್ತು 23 ರಂದು ವಿಶೇಷ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದಿನ ದಿನ ಬಿಎಲ್ಒಗಳು ಮತಗಟ್ಟೆಗಳಲ್ಲಿ ಪೂರ್ತಿ ದಿನ ಹಾಜರಿದ್ದು ಅರ್ಹ ಮತದಾರರ ಅರ್ಜಿಗಳನ್ನು ಸ್ವೀಕರಿಸುವರು.
ಜು.20 ರಂದು ಎಲ್ಲಾ ಸರ್ಕಾರಿ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಲ್ಲಿ ವಿಶೇಷ ಅಭಿಯಾನವನ್ನು ನಡೆಸಲಿದ್ದು ಸ್ಥಳದಲ್ಲಿ ನಮೂನೆ 6 ನ್ನು ಪಡೆದು ಭರ್ತಿ ಮಾಡಿ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿರುತ್ತದೆ.
“No voters to be left behind” “ಯಾವುದೇ ಮತದಾರರನ್ನು ಹಿಂದುಳಿಸಬಾರದು” ಎಂಬ ಧ್ಯೇಯದೊಂದಿಗೆ ಈ ವಿಶೇಷ ಅಭಿಯಾನ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಈ ಅಭಿಯಾನವನ್ನು ಅರ್ಹ ಯುವಕ-ಯುವತಿಯರು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.
ವಿಶೇಷ ಆಂದೋಲನದಲ್ಲಿ ಮೃತ ಮತದಾರರನ್ನೂ ಸಹ ಮತದಾರರ ಪಟ್ಟಿಯಿಂದ ತೆಗೆದು ಹಾಕಲು ಕ್ರಮ ಕೈಗೊಳ್ಳುತ್ತಿದ್ದು, ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ಅವರ ಮೃತ ಸಂಬಂಧಿಕರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲು ನಮೂನೆ-7 ನ್ನು ಸಲ್ಲಿಸುವುದರ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಜು.19 ರಂದು ವಿಶೇಷ ಗ್ರಾಮ ಸಭೆ
ಕೋಲಾರ, ಜುಲೈ 15: ಪ್ರಸಕ್ತ ಸಾಲಿನಲ್ಲಿ ಬಯಲು ಬಹಿರ್ದೆಸೆ ಮುಕ್ತ ಗ್ರಾಮ ಪಂಚಾಯಿತಿಯಾಗಿ ಘೋಷಣೆ ಮಾಡಲು ಗ್ರಾಮ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯಲು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಜು.19 ರಂದು ಬೆಳಗ್ಗೆ 11 ಗಂಟೆಗೆ ಗ್ರಾಮಪಂಚಾಯಿತಿ ಅಧ್ಯಕ್ಷರಾದ ಶೈಲಾರಾಜ್ ಅವರ ಅಧ್ಯಕ್ಷತೆಯಲ್ಲಿ ವಿಶೇಷ ಗ್ರಾಮ ಸಭೆಯನ್ನು ನರಸಾಪುರ ಗ್ರಾಮದಲ್ಲಿ ಏರ್ಪಡಿಸಲಾಗಿದೆ.
ಈ ಸಭೆಗೆ ಎಲ್ಲಾ ಜನ ಪ್ರತಿನಿಧಿಗಳು, ಸಂಘಸಂಸ್ಥೆಗಳು, ಸ್ತ್ರೀಶಕ್ತಿ ಸಂಘಟನೆಗಳು ಹಾಗೂ ಎಲ್ಲಾ ಇಲಾಖಾಧಿಕಾರಿಗಳು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗ್ರಾಮ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದೆ.