ಕೋಲಾರ,ಜು.12: ಸರ್ಕಾರದ ಯೋಜನೆಗಳನ್ನು ಮಹಿಳೆಯರು ಸದುಪಯೋಗ ಪಡಿಸಿಕೊಂಡು ಸ್ವಯಂ ಉದ್ಯೋಗ ರೂಪಿಸಿಕೊಳ್ಳಲು ಮುಂದಾಗಬೇಕು ಎಂದು ಎಡಿಎಂನ ಹೆಚ್ಚುವರಿ ನಿರ್ದೇಶಕ ಮುನಿರಾಜು ಕರೆ ನೀಡಿದರು.
ನಗರದ ಸೌಂದರ್ಯ ಗ್ರಾಮೀಣ ಹಾಗೂ ಪಟ್ಟಣ ಅಭಿವೃದ್ಧಿ ಸಂಸ್ಥೆಯಲ್ಲಿ ಮಂಗಳವಾರ ನಡೆದ ರಾಜೀವ್ಗಾಂಧಿ ಚೈತನ್ಯ ಯೋಜನೆಯ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರ ಅನುಷ್ಠಾನಗೊಳಿಸುತ್ತಿರುವ ಸೌಕರ್ಯಗಳ ಫಲಾನುಭವಿಗಳಿಗೆ ಮಾಹಿತಿ ನೀಡಬೇಕಾದ ಕೆಲಸ ಅಗಬೇಕಾಗಿದೆ ಎಂದು ಹೇಳಿದರು.
ಸರ್ಕಾರದ ಯೋಜನೆಗಳಿಂದ ಮತ್ತು ಎನ್ಆರ್ಇಜಿ ಯೋಜನೆಯಡಿ ಮಹಿಳೆಯರು ಯಾವ ರೀತಿ ಬದುಕು ರೂಪಿಸಿಕೊಳ್ಳಬಹುದು ಎಂಬುದರ ಬಗ್ಗೆ ಜಿಲ್ಲೆಯಲ್ಲಿ ಹಿಂದೆಯೇ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಇದರಿಂದಲ್ಲೇ ಅನೇಕ ಮಂದಿ ಮಹಿಳೆಯರು ಸ್ವಯಂ ಉದ್ಯೋಗ ನಡೆಸುತ್ತಿದ್ದಾರೆ' ಎಂದರು.
ಐಎಎಸ್ ಅಧಿಕಾರಿ ಮೌನದ್ ಮೀನಾ ಮಾತನಾಡಿ, ಗ್ರಾಮೀಣ ಭಾಗದ ಮಹಿಳೆಯರು ಸರ್ಕಾರದ ಸೌಕರ್ಯಗಳಿಂದ ವಂಚಿತರಾಗುತ್ತಿದ್ದಾರೆ. ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆ ತರಬೇಕಾದ ಕೆಲಸ ಅಗಬೇಕಾಗಿದೆ ಎಂದು ತಿಳಿಸಿದರು.
ಮಹಿಳೆಯರು ಇಡೀ ಕುಟುಂಬ ನಿರ್ವಹಣೆಯ ಜತೆಗೆ ಸಂಪಾದನೆಯಲ್ಲಿ ಭಾಗಿಯಾಗುತ್ತಿರುವುದು ಶ್ಲಾಘನೀಯವಾಗಿದೆ. ಆದರೆ ಸರಿಯಾದ ಅವಕಾಶಗಳು ದೊರೆಯದ ಕಾರಣ ವಂಚನೆಗೆ ಒಳಗಾಗುತ್ತಿದ್ದಾರೆ. ಸರ್ಕಾರದ ಸೌಕರ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕಾಗಿದೆ' ಎಂದರು.
ರಾಜೀವ್ಗಾಂಧಿ ಚೈತನ್ಯ ಯೋಜನೆಯ ಕಾರ್ಯನಿರ್ವಹಾಕ ಅಧಿಕಾರಿ ವೆಂಕಟರಾಮ್ ಮಾತನಾಡಿ, ನಿರುದ್ಯೋಗಿಗಳನ್ನು ಸ್ವಯಂ ಉದ್ಯೋಗಿಗಳನ್ನಾಗಿ ಸೃಷ್ಟಿ ಮಾಡಲು ಸರ್ಕಾರ ರಾಜೀವ್ಗಾಂಧಿ ಚೈತನ್ಯ ಯೋಜನೆಯನ್ನು ಜಾರಿಗೊಳಿಸಿದೆ ಎಂದ ಅವರು ಯೋಜನೆಯಡಿ ತಿಂಗಳಿಗೆ 45 ಮಂದಿ ಮಹಿಳೆಯರಿಗೆ ಉಚಿತವಾಗಿ ಟೈಲರಿಂಗ್ ತರಬೇತಿ ನೀಡಲಾಗುತ್ತಿದ್ದು, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಮಹಿಳೆಯರಿಗೆ ಮತ್ತು ಲೈಂಗಿಕ ಕಾರ್ಯಕರ್ತೆಯರಿಗೆ ಆಧ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಐಎಎಸ್ ಅಧಿಕಾರಿ ನೌಪುರ್ ರಾಶಿ ಪನ್ನ, ಯೋಜನೆಯ ನೋಡಲ್ ಅಧಿಕಾರಿ ಸುನಂದಾ, ಆರೋಗ್ಯಾಧಿಕಾರಿಗಳಾದ ಡಾ.ಸುಂದರೇಶ್, ಹೇಮಲತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ವರದಿ: ಮೊಹಮ್ಮದ್ ಶಬ್ಬೀರ್, ಶ್ರೀನಿವಾಸಪುರ