ಕೋಲಾರ: ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಆರೋಗ್ಯ ಕರ್ನಾಟಕ ಯೋಜನೆಯಡಿ ಆರೋಗ್ಯ ಕಾರ್ಡ್ಗಳನ್ನು ವಿತರಿಸಿ ಎಲ್ಲಾ ವರ್ಗದ ಜನರಿಗೂ ಉಚಿತ ಆರೋಗ್ಯವನ್ನು ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಆರ್. ರಮೇಶ್ ಕುಮಾರ್ರವರು ತಿಳಿಸಿದರು.
ಇಂದು ತಾಲ್ಲೂಕಿನ ಮದನಹಳ್ಳಿ ಕ್ರಾಸ್ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನಿರ್ಮಿಸಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು ನಾನು ಸರ್ಕಾರದಲ್ಲಿ 20 ತಿಂಗಳು ಆರೋಗ್ಯ ಸಚಿವನಾಗಿ ಆತ್ಮಸಾಕ್ಷಿ ಉಪ್ಪುವ ಹಾಗೆ ಕರ್ತವ್ಯ ನಿರ್ವಹಿಸಿದ್ದೇನೆ. ಜಿಲ್ಲೆಗೆ ಉತ್ತಮ ಗುಣಮಟ್ಟದ ರಸ್ತೆಗಳು, ಶುದ್ದ ಕುಡಿಯುವ ನೀರಿನ ಘಟಕಗಳು, ಪಶು ಅಸ್ಪತ್ರೆಗಳು ಮುಂತಾದ ಸೌಕರ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಜನರ ಮೂಲಭೂತ ಅವಶ್ಯಕತೆಗಳಾದ ಆರೋಗ್ಯ, ಶುದ್ದ ಕುಡಿಯುವ ನೀರು, ಶಿಕ್ಷಣ ಹಾಗೂ ವಸತಿ ಇವುಗಳನ್ನು ಒದಗಿಸುವುದು ಜನಪ್ರತಿನಿದಿಗಳಾದ ನಮ್ಮ ಜವಬ್ದಾರಿ ಎಂದರು.
ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ವಿದದ ಚಿಕಿತ್ಸೆಗಳು ಹಾಗೂ ಔಷದಿಗಳು ಉಚಿತವಾಗಿ ದೊರೆಯುತ್ತವೆ. ಯಾವ ಸರ್ಕಾರಿ ಆಸ್ಪತ್ರೆಗಳಲ್ಲೂ ಚೀಟಿ ಬರೆದು ಔಷದಿಯನ್ನು ಹೊರಗಿನಿಂದ ತರುವಂತೆ ಹೇಳುವಂತಿಲ್ಲ ಇದು ಅಕ್ಷಮ್ಯ ಅಪರಾದ. ಕೆಲವು ಚಿಕಿತ್ಸೆಗಳು ಸರ್ಕಾರಿ ಆಸ್ಪತ್ರೆಯಲ್ಲಿ ಲಭ್ಯವಿಲ್ಲದಿದ್ದರೆ ಸರ್ಕಾರಿ ಆಸ್ಪತ್ರೆಯ ವೈದ್ಯರ ಶಿಪಾರಸ್ಸಿನ ಮೇರೆಗೆ ಚಿಕಿತ್ಸೆಯನ್ನು ಖಾಸಗಿ ಆಸ್ಪತ್ರೆಗಳಲ್ಲಿ ಪಡೆದುಕೊಳ್ಳಬಹುದು ಚಿಕತ್ಸೆಯ ವೆಚ್ಚವನ್ನು ಸರ್ಕಾರವೆ ನೀಡುತ್ತದೆ. ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಯಲ್ಲಿ ಸಿ.ಟಿ ಸ್ಕ್ಯಾನ್ ಹಾಗೂ ಎಂ.ಆರ್.ಐ ಸ್ಕ್ಯಾನ್ ಸೌಲಭ್ಯವನ್ನು ಉಚಿತವಾಗಿ ಕಲ್ಪಿಸಲಾಗಿದೆ ಇದರಿಂದ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಜನರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅದ್ಯಕ್ಷರಾದ ಬ್ಯಾಟಪ್ಪ, ಜಿಲ್ಲಾ ಪಂಚಾಯಿತಿಯ ಸದಸ್ಯರು ಹಾಗೂ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ನಂಜುಂಡಪ್ಪ, ಮುಖಂಡರಾದ ವೆಂಕಟಮಣಿ, ಅನಿಲ್ ಕುಮಾರ್, ಎಸ್.ಎನ್ ಮಂಜುನಾಥ್, ವೆಂಕಟಕೃಷ್ಣಯ್ಯ, ತಾಲ್ಲೂಕು ಪಂಚಾಯಿತಿಯ ಸದಸ್ಯರಾದ ಪದ್ಮಾವತಿ ಚಂದ್ರೇಗೌಡರು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾಂತಮ್ಮ ಮುನಿಸ್ವಾಮಪ್ಪ, ಉಪಾಧ್ಯಕ್ಷರಾದ ಗೋಪಾಲರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ವಿಜಯ್ ಕುಮಾರ್ ಸೇರಿದಂತೆ ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.