ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್
ಶ್ರೀನಿವಾಸಪುರ: ತಾಲ್ಲೂಕಿನ ಗ್ರಾಮೀಣ ಪ್ರದೇಶದ ಜನರ ಅನುಕೂಲಕ್ಕಾಗಿ ಅಗತ್ಯ ಇರುವ ಕಡೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಇದರಿಂದ ಬಡವರ ಆರೋಗ್ಯ ಸುಧಾರಣೆ ಸಾಧ್ಯವಾಗುತ್ತದೆ ಎಂದು ಹೇಳಿದರು.
ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ರೂ.1.70 ಕೋಟಿ ವೆಚ್ಚದಲ್ಲಿ ನೂತನ ಆರೋಗ್ಯ ಕೇಂದ್ರದ ಕಟ್ಟಡವನ್ನು ನಿರ್ಮಿಸಲಾಗುತ್ತಿದೆ. ಸೋಮಯಾಜಲಹಳ್ಳಿ, ಬೈರಗಾನಪಲ್ಲಿ, ಮುದವಾಡಿ, ಮದನಹಳ್ಳಿ ಗ್ರಾಮಗಳಲ್ಲೂ ಇಷ್ಟೇ ವೆಚ್ಚದಲ್ಲಿ ಸುಸಜ್ಜಿತ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಗಳನ್ನು ನಿರ್ಮಿಸಲಾಗುದು ಎಂದು ಹೇಳಿದರು.
ಈ ಆರೋಗ್ಯ ಕೇಂದ್ರದ ನಿರ್ಮಾಣ ಕಾಮಗಾರಿಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ಕಾಮಗಾರಿಯ ಗುಣಮಟ್ಟ ಕೆಡದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು. ಕ್ಷೇತ್ರದಲ್ಲಿ ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು, ಅಗತ್ಯ ಇರುವ ಕಡೆ ಕೊಳವೆ ಬಾವಿ ನಿರ್ಮಿಸಲಾಗುವುದು. ಈಗಾಗಲೇ ಕೊಳವೆ ಬಾವಿಗೆ ಸ್ಥಳ ನಿಗದಿಪಡಿಸುವಂತೆ ಭೂಗರ್ಭ ಶಾಸ್ತ್ರಜ್ಞರಿಗೆ ತಿಳಿಸಲಾಗಿದೆ ಎಂದು ಹೇಳಿದರು.
ಸ್ತ್ರೀ ಶಕ್ತಿ ಸಂಘದ ಸದಸ್ಯರಿಗೆ ತಲಾ ರೂ.1ಲಕ್ಷ ಬಡ್ಡಿ ರಹಿತ ಸಾಲ ನೀಡಲಾಗುವುದು. ಹೊಸದಾಗಿ ಸಂಘ ಕಟ್ಟಿದವರಿಗೂ ಈ ಸೌಲಭ್ಯ ವಿಸ್ತರಿಸಲಾಗುವುದು. ಎಸ್ಸಿ, ಎಸ್ಟಿ ಸಮುದಾಯದ ಫಲಾನುಭವಿಗಳು ಕೃಷಿ ಕೊಳವೆ ಬಾವಿಗಾಗಿ ಮಧ್ಯವರ್ತಿಗಳನ್ನು ಅವಲಂಬಿಸದೆ ನೇರವಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಕೊಡಬೇಕು. 15 ದಿನಗಳ ಒಳಗೆ ಕೊಳವೆ ಬಾವಿ ನಿರ್ಮಾಣ ಕಾರ್ಯ ಪ್ರಾರಂಭಿಸುವಂತೆ ನೊಡಿಕೊಳ್ಳಲಾಗುವುದು ಎಂದು ಹೇಳಿದರು.
ಸಮುದಾಯ ಭವನ ನಿರ್ಮಾಣಕ್ಕೆ ಸರ್ಕಾರದಿಂದ ರೂ.8 ಲಕ್ಷ ನೀಡಲಾಗುವುದು. ಲಕ್ಷ್ಮೀಸಾಗರ ಗ್ರಾಮದಲ್ಲಿ ಎರಡು ಸಮುದಾಯ ಭವನಗಳನ್ನು ನಿರ್ಮಿಸಲಾಗುವುದು. ಕೆಸಿ ವ್ಯಾಲಿ ನೀರಿನ ಸಂಬಂಧ ಕೆಲವರು ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ಆದರೆ ನಾನು ಅದಕ್ಕೆ ಸರಿಯಾದ ಸಮಯದಲ್ಲಿ ಉತ್ತರ ಕೊಡುತ್ತೇನೆ. ಯುಗಾದಿ ಒಳಗೆ ಜಿಲ್ಲೆಯ ಕರೆಗಳಿಗೆ ನೀರು ಹರಿಸಲಾಗುವುದು ಎಂದು ಹೇಳಿದರು.
ಎತ್ತಿನ ಹೊಳೆ ಯೋಜನೆಯಿಂದಲೂ ಜಿಲ್ಲೆಗೆ ನೀರು ಹರಿಸಲಾಗುವುದು. ಮಾಜಿ ಮುಖ್ಯ ಮಂತ್ತಿ ಸಿದ್ದರಾಮಯ್ಯ ಅವರಿಂದ ಯೋಜನೆ ಕಾರ್ಯರೂಪಕ್ಕೆ ಬಂದಿತು. ಅವರನ್ನು ಜಿಲ್ಲೆಯ ಜನತೆ ನೆನೆಯಬೇಕು. ಮತ ಮುಖ್ಯವಲ್ಲ. ಮಾನವೀಯತೆ ಮುಖ್ಯ. ಕ್ಷೇತ್ರವನ್ನು ಗುಡಿಸಲು ಮುಕ್ತಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಮೂಲ ಸೌಲಭ್ಯ ಒದಗಿಸಲಾಗುವುದು.
ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದಸ್ವಾಮಿ, ರಾಜ್ಯ ಎಪಿಎಂಸಿ ನಿರ್ದೇಶಕ ಎನ್.ರಾಜೇಂದ್ರ ಪ್ರಸಾದ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ವಿಜಯ್ ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವಿಜಯ, ಡಾ.ಸರವೋತ್ತಮ್, ಡಾ.ಸೈಯದ್ ಅಬ್ದುಲ್ ಸಲಾಮ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸುಗುಣ ರಾಮಚಂದ್ರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎನ್.ನಾರಾಯಣಸ್ವಾಮಿ, ಗ್ರಾಮ ಪಂಚಾಯತಿ ಅಧ್ಯಕ್ಷ ಜಮೀರ್ ಪಾಷ, ಉಪಾಧ್ಯಕ್ಷೆ ರುಕ್ಮಿಣಿಯಮ್ಮ, ಸದಸ್ಯ ಅಶೋಕ್, ಪಡಿಒ ಕೃಷ್ಣ, ಗುತ್ತಿಗೆದಾರ ಕೆ.ಎಸ್.ರಾಮಚಂದ್ರರೆಡ್ಡಿ, ಎಸ್.ಚಕ್ರಧರ್ ಇದ್ದರು.