ಸುಗ್ರೀವಾಜ್ಞೆ ಮೂಲಕ ಮಂದಿರ ನಿರ್ಮಾಣಕ್ಕೆ ಪೇಜಾವರ ಶ್ರೀ ಆಗ್ರಹ
ಶಿವಮೊಗ್ಗ: ಸುಗ್ರೀವಾಜ್ಞೆ ಅಥವಾ ಸಾರ್ವತ್ರಿಕ ಮತಗಣನೆ ಮೂಲಕ, ರಾಮ ಮಂದಿರ ನಿರ್ಮಾಣಕ್ಕೆ ಮುಂದಾಗಬೇಕು. ಈ ವಿಷಯದಲ್ಲಿ ಸರಕಾರ ಪತನವಾದರೂ ಚಿಂತಿಸಬಾರದು ಎಂದು ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ. ರವಿವಾರ ಸಂಜೆ ನಗರದ ಕೋಟೆ ರಸ್ತೆಯ ವಾಸವಿ ಶಾಲೆ ಆವರಣದಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ರಾಮ ಮಂದಿರ ನಿರ್ಮಾಣಕ್ಕೆ ಬೃಹತ್ ಜನಾಗ್ರಹ ಸಭೆಯಲ್ಲಿ ಅವರು ಮಾತನಾಡಿದರು.
ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ವಿರೋಧಿಸುವುದಿಲ್ಲ. ಒಂದು ವೇಳೆ ವಿರೋಧಿಸಿದರೆ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಲಾಭವಾಗದಿರುವ ಸಾಧ್ಯತೆಯೂ ಇದೆ ಎಂದು ಹೇಳಿದರು. ರಾಮ ಮಂದಿರ ನಿರ್ಮಾಣಕ್ಕೆ ಮುಸ್ಲಿಮರು ಕೂಡ ಅವಕಾಶ ಮಾಡಿಕೊಡಬೇಕು. ಇದರಿಂದ ಹಿಂದೂಗಳ ಜೊತೆ ಬಾಂಧವ್ಯದೊಂದಿಗೆ ಬದುಕಲು ಒಳ್ಳೆಯ ಅವಕಾಶ ಲ್ಯವಾಗಲಿದೆ. ಕೇಂದ್ರ ಸರಕಾರ ಸೂಕ್ತ ನಿರ್ಣಯ ಕೈಗೊಳ್ಳುವ ಮೂಲಕ ಕಾಲಮಿತಿಯಲ್ಲಿ ರಾಮಮಂದಿರ ನಿರ್ಮಿಸಬೇಕು. ಈ ಬಗ್ಗೆ ದೃಢ ನಿರ್ಧಾರ ಕೈಗೊಳ್ಳಬೇಕು ಎಂದು ತಿಳಿಸಿದರು. ನಿರ್ಣಯ: ರಾಮ ಮಂದಿರ ನಿರ್ಮಾಣದ ಬಗ್ಗೆ ಸುಪ್ರೀಂ ಕೋರ್ಟ್ ನಿಗದಿತ ಸಮಯದಲ್ಲಿ ತೀರ್ಮಾನಿಸಲು ಸಾಧ್ಯವಾಗದಿದ್ದರೆ, ಕೇಂದ್ರ ಸರಕಾರ ಸುಗ್ರೀವಾಜ್ಞೆ ಮೂಲಕ ಅನುಮತಿ ಕೊಡಿಸಬೇಕೆಂದು ಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಯಿತು. ಜನಾಗ್ರಹ ಸಭೆಯಲ್ಲಿ ಭಾಗವಹಿಸಿದ್ದ ಸಂಸದ ಬಿ.ವೈ.ರಾಘವೇಂದ್ರ ಮೂಲಕ ಕೇಂದ್ರ ಸರಕಾರಕ್ಕೆ ನಿರ್ಣಯದ ಮನವಿಯನ್ನು ಸ್ವಾಮೀಜಿ ಸಲ್ಲಿಸಿದರು.