ಲಖನೌ, ಮಾರ್ಚ್: ರಾಜ್ಯದಲ್ಲಿರುವ ಅಕ್ರಮ ಕಸಾಯಿಖಾನೆಗಳ ಮೇಲೆ ಕ್ರಮ ಕೈಗೊಳ್ಳಲು ಪೊಲೀಸ್ ಪಡೆ ಮತ್ತು ಅಧಿಕೃತ ಸಿಬ್ಬಂದಿಗೆ ಮಾತ್ರ ಅವಕಾಶವಿದ್ದು ಅಧಿಕಾರವಿಲ್ಲದ ಯಾರಿಗೂ ಕಾಸಾಯಿಖಾನೆಗಳ ಮೇಲೆ ದಾಳಿ ನಡೆಸಲು ಅವಕಾಶವಿಲ್ಲ, ಮಾಡಿದರೆ ಅವರ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಉತ್ತರ ಪ್ರದೇಶದ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಯೋಗಿ ಆದಿತ್ಯಾನಾಥರವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯದಲ್ಲಿ ಸ್ವಯಂಘೊಷಿತ ಗೋ ರಕ್ಷಕರು ಕಸಾಯಿಖಾನೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಲಖನೌ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿರುವ ಅಕ್ರಮ ಕಸಾಯಿಖಾನೆಗಳ ಮೇಲೆ ಸ್ವಯಂ ಘೊಷಿತ ಗೋ ರಕ್ಷಕರು ದಾಳಿ ನಡೆಸಿದರೆ ಅವರ ಮೇಲೂ ಕ್ರಮ ಜರುಗಿಸಲಾಗುತ್ತದೆ ಎಂದು ಡಿಜಿಪಿ ಜವೇದ್ ಅಹ್ಮದ್ ತಿಳಿಸಿದ್ದಾರೆ.
ಅಧಿಕೃತ ಕಸಾಯಿಖಾನೆಗಳ ಮೇಲೆ ಯಾವುದೇ ದಾಳಿ ನಡೆಸುವುದಿಲ್ಲ. ಯಾವುದೇ ಕಾರಣಕ್ಕೂ ಮುಗ್ಧರ ಮೇಲೆ ಶೋಷಣೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಡಿಜಿಪಿ ಸ್ಪಷ್ಟನೆ ನೀಡಿದ್ದಾರೆ.