ಮಂಗಳೂರು: ಕಾಟಿಪಳ್ಳ ವೃತ್ತದ ಬಳಿ ದುಷ್ಕರ್ಮಿಗಳು ಯುವಕನೋರ್ವನನ್ನು ಕಡಿದು ಕೊಲೆ ಮಾಡಿದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಕಾಟಿಪಳ್ಳ ಕೈಕಂಬದ ನಿವಾಸಿ ದೀಪಕ್ ರಾವ್ (22) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.
ಆತ ಖಾಸಗಿ ದೂರ ಸಂಪರ್ಕ ಕಂಪೆನಿಯೊಂದರಲ್ಲಿ ವಿತರಕನಾಗಿ ಉದ್ಯೋಗದಲ್ಲಿದ್ದರು. ಸ್ಥಳೀಯವಾಗಿ ಸಂಘಪರಿವಾರ ಸಂಘಟನೆಯಲ್ಲಿ ಗುರುತಿಸಿ ಕೊಂಡಿದ್ದರು ಎಂದು ತಿಳಿದುಬಂದಿದೆ.
ಮಂಗಳವಾರ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ದೀಪಕ್ ಅವರು ದ್ವಿಚಕ್ರ ವಾಹನದಲ್ಲಿ ಕೃಷ್ಣಾಪುರ-ಕಾಟಿಪಳ್ಳ ರಸ್ತೆಯಲ್ಲಿ ಹೋಗುತ್ತಿದ್ದರು. ಇದೇ ಸಂದರ್ಭದಲ್ಲಿ ಅವರನ್ನು ಕಾರೊಂದು ಹಿಂಬಾಲಿಸಿಕೊಂಡು ಬಂದಿದ್ದು, ಕಾಟಿಪಳ್ಳದ ದೂರದಲ್ಲಿ ಅವರ ವಾಹನವನ್ನು ತಡೆದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪರಿಣಾಮವಾಗಿ ಗಂಭೀರ ಗಾಯಗೊಂಡು ರಸ್ತೆ ಬದಿಯಲ್ಲಿ ಬಿದ್ದಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತಾದರೂ ಅವರು ಅದಾಗಲೇ ಮೃತಪಟ್ಟಿದ್ದರು.
ಈ ಬಗ್ಗೆ ಸುರತ್ಕಲ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಕಮಿಷನರ್ ಭೇಟಿ
ದೀಪಕ್ ಅವರ ಮೃತ ಶರೀರವು ನಗರದ ಖಾಸಗಿ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್, ಎಸಿಪಿ ಉದಯ ನಾಯಕ್ ಮತ್ತಿತರ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದರು.