ಭಟ್ಕಳ: ತಾಲೂಕಿನಲ್ಲಿ ಜನರು ಹಲವು ರೀತಿಯ ಸಮಸ್ಯೆಯನ್ನು ಎದುರಿಸುತ್ತಿದ್ದು, ನನ್ನ ಶಾಸಕತ್ವದ ಅವಧಿಯಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಒತ್ತನ್ನು ನೀಡುವುದಾಗಿ ಶಾಸಕ ಸುನಿಲ್ ಬಿ. ನಾಯ್ಕ ಹೇಳಿದರು.
ಅವರು ಬುಧವಾರ ಭಟ್ಕಳ ತಾಲೂಕು ಪಂಚಾಯತ ಕಟ್ಟಡದಲ್ಲಿ ನೂತನ ಶಾಸಕರ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು.
ತಾಲೂಕಿನಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗುವುದು. ಇಲ್ಲಿನ ಜನರನ್ನು ಕಾಡುತ್ತಿರುವ ಸಮಸ್ಯೆಗಳಲ್ಲಿ ಅರಣ್ಯ ಭೂಮಿ ಅತಿಕ್ರಮಣ ಸಮಸ್ಯೆ ಒಂದಾಗಿದ್ದು, ಇದರಲ್ಲಿ ಕಾನೂನಿನ ತೊಡಕಿದೆ. ಸಮಸ್ಯೆ ಪರಿಹಾರದ ಹೆಸರಿನಲ್ಲಿ ರಾಜಕಾರಣವೂ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಸಮಸ್ಯೆ ಪರಿಹಾರಕ್ಕಾಗಿ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ವಿದ್ಯುತ್, ರಸ್ತೆ ಸಮಸ್ಯೆ ಇರುವ ಸ್ಥಳಗಳನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ರಾಜ್ಯವನ್ನು ಕೊಳ್ಳೆ ಹೊಡೆಯಲು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಪವಿತ್ರ ಮೈತ್ರಿಯನ್ನು ಮಾಡಿಕೊಂಡಿದ್ದು, ಸರಕಾರ ಕೆಳಗೆ ಇಳಿಯುವ ತನಕ ಬಿಜೆಪಿ ಪ್ರತಿಭಟನೆಯನ್ನು ಮುಂದುವರೆಸಲಿದೆ ಎಂದು ತಿಳಿಸಿದರು.
ಭಟ್ಕಳ ಬಿಜೆಪಿ ಘಟಕದ ಅಧ್ಯಕ್ಷ ರಾಜೇಶ ನಾಯ್ಕ, ಕೃಷ್ಣ ನಾಯ್ಕ ಆಸರಕೇರಿ ಮೊದಲಾದವರು ಉಪಸ್ಥಿತರಿದ್ದರು.