ಕುಂದಾಪುರ: ನಾಗೂರಿನಲ್ಲಿ ಸೋಮವಾರ ಸಂಜೆ ಸುಮಾರು ಏಳು ಗಂಟೆಗೆ ನಡೆದ ಸರಣಿ ಅಪಘಾತದಲ್ಲಿ ಲಾರಿ ಚಾಲಕ ಮೃತಪಟ್ಟ ಘಟನೆ ನಡೆದಿದೆ. ಟ್ಯಾಂಕರ್ ಪೆಟ್ರೋಲ್ ತುಂಬಿಸಿಕೊಂಡು ಕುಂದಾಪುರ ಕಡೆಯಿಂದ ಗೋವಾ ಕಡೆಗೆ ಪ್ರಯಾಣಿಸುತ್ತಿತ್ತು. ಎದುರುಗಡೆಯಿಂದ ಬಂದ ಅಂಬಾಜಿ ಎನ್ನುವ ಖಾಸಗೀ ಬಸ್ ಅತೀ ವೇಗವಾಗಿ ಚಲಾಯಿಸಿ ಓವರ್ಟೇಕ್ ಮಾಡಿ ಟ್ಯಾಂಕರ್ಗೆ ಡಿಕ್ಕಿ ಹೊಡೆದಿದೆಯೆನ್ನಲಾಗಿದೆ. ಇದೇ ಸಂದರ್ಭ ಹಿಂದಿನಿಂದ ಬರುತ್ತಿದ್ದ ಬೈಕಿಗೂ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಸ್ಥಳದಲ್ಲಿಯೆ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ. ಬೈಕ್ ಸವಾರನೂ ಸೇರಿದಂತೆ 28 ಜನ ಗಂಭೀರ ಗಾಯಗೊಂಡಿದ್ದಾರೆ.
ಅಪಘಾತದ ತೀವ್ರತೆಗೆ ಲಾರಿ ಹಾಗೂ ಬಸ್ಸಿನ ಮುಂಭಾಗ ಸಂಪೂರ್ಣ ನುಜ್ಜು ಗುಜ್ಜಾಗಿದೆ. ದಿನ ನಿತ್ಯ ಸಂಚರಿಸುತ್ತಿದ್ದ ಖಾಸಗೀ ಬಸ್ ಇಂದು ಇಲ್ಲದೇ ಇರುವ ಕಾರಣಕ್ಕೆ ಅದೇ ಸಮಯಕ್ಕೆ ಬೇರೆ ಬಸ್ ತರಿಸಿ ಓಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಂಚಾರ ತಡವಾದ ಕಾರಣಕ್ಕೆ ಚಾಲಕ ಅತೀ ವೇಗವಾಗಿ ಬಸ್ ಚಲಾಯಿಸುತ್ತಿದ್ದ ಎನ್ನಲಾಗಿದೆ. ಮೃತ ಪಟ್ಟ ಟ್ಯಾಂಕರ್ ಚಾಲಕನನ್ನು ಕುಮದಾಪುರ ಸರ್ಕಾರೀ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಸುಮಾರು ಒಂದೂವರೆ ತಾಸುಗಳ ಕಾಲ ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಬೈಂದೂರು ಪೊಲೀಸರು ಹಾಗೂ ಸಾರ್ವಜನಿಕರು ಪ್ರಯಾಣಿಕರ ರಕ್ಷಣಾ ಕಾರ್ಯದಲ್ಲಿ ಹಾಗೂ ಹೆದ್ದಾರಿ ತೆರವು ಕಾರ್ಯಾಚರಣೆಯಲ್ಲಿ ಸಹಕರಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರದಿಂದ ಕಾರವಾರದವರೆಗೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಕಳೆದ ಕೆಲವು ತಿಂಗಳಿಂದ ಅಪಘಾತಗಳು ಅತೀ ಹೆಚ್ಚಾಗಿ ನಡೆಯುತ್ತಿರುವುದು ಕಂಡು ಬರುತ್ತಿದ್ದು, ಸಂಚಾರ ಸಮಸ್ಯೆ ದಿನೇ ದಿನೇ ಹೆಚ್ಚುತ್ತಿರುವುದು ಆತಂಕ ಸೃಷ್ಟಿಸುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.