ಮುಂಡಗೋಡ: ತಾಲೂಕಾ ಆಸ್ಪತ್ರೆಯ ಸಭಾಭವನದಲ್ಲಿ ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಹಾಗೂ ತಾಲೂಕಿನ ಎಲ್ಲಾ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಪೋಷಣ ಅಭಿಯಾನ ಯೋಜನೆಯಡಿಯಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ತಾಲೂಕಾ ಆರೋಗ್ಯಾಧಿಕಾರಿ ಪದ್ಮಪ್ರಿಯ ಕಾರ್ಯಕ್ರಮ ಉದ್ಘಾಟಿಸಿದರು. ಸಿಡಿಪಿಒ ಎಚ್.ಬಿ.ಬೇಲಪತ್ತಾರ ಪ್ರಾಸ್ತವಿಕ ಮಾತನಾಡಿ, ರಾಷ್ಟ್ರಾದ್ಯಂತ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಜಾಗೃತಿ ಮೂಡಿಸಿ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಗರ್ಭಿಣಿ, ಬಾಣಂತಿಯರು ಮತ್ತು ಮಕ್ಕಳು ಪೌಷ್ಟಿಕ ಆಹಾರವಿಲ್ಲದೇ ಮರಣ ಹೊಂದುತ್ತಿರುವ ಬಗ್ಗೆ ಕೇಳಿಬರುತ್ತಿರುವುದರಿಂದ ಕೇಂದ್ರ ಸರ್ಕಾರವು ಎಲ್ಲರಿಗೂ ಪೌಷ್ಟಿಕ ಆಹಾರ ಸಿಗುವಂತಾಗಲು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ತಮ್ಮ ಭಾಗದಲ್ಲಿರುವ ಗರ್ಭಿಣಿ ಮತ್ತು ಬಾಣಂತಿಯರಿಗೆ ಊಟದ ಪದ್ದತಿಯನ್ನು ತಿಳಿಹೇಳಬೇಕು ಎಂದರು ಮತ್ತು ತಾಲೂಕಿನಲ್ಲಿ 428ಫಲಾನುಭವಿಗಳು ಮಾತೃವಂದನಾ ಯೋಜನೆಯ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ ಹಾಗೂ ಮಾತೃಪೂರ್ಣ ಯೋಜನೆಯಲ್ಲಿ ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಶೇ.80ರಷ್ಟು ಪೌಷ್ಟಿಕ ಆಹಾರ ನೀಡಲಾಗಿದೆ ಎಂದರು.
ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಎಸ್.ಪಟ್ಟಣಶೆಟ್ಟಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಹತ್ತು ಗರ್ಭಿಣಿಯರಿಗೆ ಉಡಿ ತುಂಬುವ ಮೂಲಕ ಪೌಷ್ಟಿಕ ಆಹಾರ ಸೇವನೆಯ ಬಗ್ಗೆ ತಿಳಿಸಲಾಯಿತು. ಕಾರ್ಯಕ್ರಮದಲ್ಲಿ ಅಂಗನವಾಡಿ ಮಕ್ಕಳ ಛದ್ಮವೇಷ ರೂಪಕಗಳು ಗಮನ ಸೆಳೆದವು.
ಈ ವೇಳೆ ವೈದ್ಯ ಬಿರಾದಾರ, ಶ್ಯಾಮಲಾ ನಾಯ್ಕ, ಮೇಲ್ವಿಚಾರಕಿಯರಾದ ಸುರೇಖಾ ಮಲ್ಲಾಪುರ, ದೀಪಾ ಬಂಗೇರ, ಪುಷ್ಪಾ ಹಂಚಗಿ, ಪೂರ್ಣಿಮಾ ದೊಡ್ಡಮನಿ, ರೂಪಾ ಅಂಗಡಿ ಮತ್ತು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಕಸ್ತೂರಿ ಹರಿಜನ ಪ್ರಾರ್ಥಿಸಿದರು. ರೂಪಾ ಅಂಗಡಿ ಸ್ವಾಗತಿಸಿದರು. ದೀಪಾ ಬಂಗೇರ ವಂದಿಸಿದರು.