ಭಟ್ಕಳ: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಂಸ್ಕಾರವನ್ನು ಅಳವಡಿಸಿಕೊಂಡಲ್ಲಿ ಯಶಸ್ಸು ಸಾಧ್ಯ ಎಂದು ಶಾಸಕ ಸುನೀಲ ನಾಯ್ಕ ಹೇಳಿದರು.
ಅವರು ಇಲ್ಲಿನ ಸರಕಾರಿ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಚಂದ್ರಕಾಂತ ಜಿ. ಗಾಂವಕರ ಅವರಿಗೆ ಬೀಳ್ಕೊಡುಗೆ ಹಾಗೂ ನೂತನ ಮುಖ್ಯಾಧ್ಯಾಪಕರಿಗೆ ಅಭಿನಂದನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಾಲೆಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮುಖ್ಯಾಧ್ಯಾಪಕರ ಪಾತ್ರ ಮುಖ್ಯವಾಗಿದ್ದು, ಈ ಶಾಲೆಯಲ್ಲಿ 5 ವರ್ಷ ಸೇವೆ ಸಲ್ಲಿಸಿ ಅಂಕೋಲಾ ಪ್ರೌಢಶಾಲೆಗೆ ವರ್ಗಾವಣೆಗೊಂಡಿರುವ ಮುಖ್ಯಾಧ್ಯಾಪಕ ಚಂದ್ರಕಾಂತ ಜಿ. ಗಾಂವಕರ ಅವರು ಓರ್ವ ಚಿಂತಕರಾಗಿದ್ದು, ತಮ್ಮ ಜವಾಬ್ದಾರಿಯನ್ನು ಶ್ರದ್ಧೆಯಿಂದ ನಿರ್ವಹಿಸಿದ್ದಾರೆ. ಅವರ ಮುಂದಿನ ವೃತ್ತಿ ಜೀವನವು ಅವರಿಗೆ ಇನ್ನಷ್ಟು ಯಶಸ್ಸನ್ನು ತಂದು ಕೊಡಲಿ ಎಂದು ಆಶಯ ವ್ಯಕ್ತಪಡಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಮುಖ್ಯಾಧ್ಯಾಪಕ ಚಂದ್ರಕಾಂತ ಜಿ. ಗಾಂವಕರ, ಪ್ರೌಢಶಾಲೆಯು ಈ ನಿಟ್ಟಿನಲ್ಲಿ ಅಭಿವೃದ್ಧಿ ಕಾಣಲು ಶಾಲೆಯ ಶಿಕ್ಷಕ ವೃಂದ ಪ್ರಮುಖ ಕಾರಣವಾಗಿದೆ. ಶಾಲೆಯ ಅಭಿವೃದ್ಧಿಗೆ ದಾನಿಗಳಾದ ಸದಾಶಿವ ಆಚಾರ್ಯ ಅವರ ಕೊಡುಗೆ ಅಪಾರವಾಗಿದೆ. ಹಿಂದಿನ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿದ್ದ ಮಾಜಿ ಶಾಸಕ ಮಂಕಾಳ ವೈದ್ಯರ ಸಹಕಾರವನ್ನೂ ಸ್ಮರಿಸಿಕೊಳ್ಳುತ್ತಿರುವುದಾಗಿ ತಿಳಿಸಿದರು. ನೂತನ ಮುಖ್ಯೋಪಾಧ್ಯಾಯಿನಿ ಸವಿತಾ ನಾಯಕ ಅವರನ್ನು ಇದೇ ಸಂದರ್ಭದಲ್ಲಿ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ಬೆಳಕೆ ಪಂಚಾಯತ ಅದ್ಯಕ್ಷ ರಮೇಶ ನಾಯ್ಕ ನೂಜ, ಶಾಲೆಯ ದಾನಿ ಕೆ.ಸದಾಶಿವ ಆಚಾರ್ಯ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು ಮುಂತಾದವರು ಉಪಸ್ಥಿತರಿದ್ದರು.