ಕಾರವಾರ: ಅ.2ರಂದು ಟ್ಯಾಗೋರ್ ಕಡಲತೀರದಲ್ಲಿ ``ಗಾಂಧೀಜಿಗೆ ನಮನ”
ಕಾರವಾರ: ಮಹಾತ್ಮ ಗಾಂಧೀಜಿಯವರ 150ನೇ ವರ್ಷಾಚರಣೆ ಅಂಗವಾಗಿ ಅಕ್ಟೋಬರ್ 2ರಂದು ಸಂಜೆ 6ಗಂಟೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ``ಗಾಂಧೀಜಿಗೆ ನಮನ” ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಅಕ್ಟೋಬರ್ 2ರಂದು ಸಂಜೆ 6ಗಂಟೆಗೆ ಡಾ ರವೀಂದ್ರನಾಥ ಟ್ಯಾಗೋರ್ ಕಡಲತೀರದ ಮಕ್ಕಳ ಆಟದ ಮೈದಾನದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿಯವರ ಅಪೂರ್ವ ಛಾಯಾಚಿತ್ರ ಪ್ರದರ್ಶನ, ಬೃಹತ್ ಎಲ್ಇಡಿ ಪರದೆಯಲ್ಲಿ ಗಾಂಧೀಜಿಯವರ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ, ಕಾರವಾರದ ಖ್ಯಾತ ಗಾಯಕ ರಾಮಾ ಬಾಂದೇಕರ್ ಅವರಿಂದ ಗಾಂಧೀಜಿಗೆ ಪ್ರಿಯವಾದ ಭಜನೆ ಹಾಗೂ ಉತ್ತಮ ಸೇವೆ ಸಲ್ಲಿಸಿದ ಕಾರವಾರದ ಐವರು ಪೌರಕರ್ಮಿಕರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಗೌರವಾನ್ವಿತ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಂದಾಯ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವರಾದ ಆರ್.ವಿ.ದೇಶಪಾಂಡೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ ಅವರ ಗೌರವ ಉಪಸ್ಥಿತಿಯಿರಲಿದ್ದು ಕಾರವಾರ ಶಾಸಕಿ ರೂಪಾಲಿ ಎಸ್.ನಾಯ್ಕ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ ಸೇರಿದಂತೆ ಜಿಲ್ಲೆಯ ಎಲ್ಲ ಶಾಸಕರು, ಜನಪ್ರತಿನಿಧಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ರೋಷನ್, ಜಿಲ್ಲಾ ಪೊಲೀಸ್ ಅಧೀಕ್ಷಕ ವಿನಾಯಕ್ ವಿ.ಪಾಟೀಲ್ ಅವರು ವಿಶೇಷ ಆಹ್ವಾನಿತರಾಗಿದ್ದಾರೆ.
ಗಾಂಧೀ ಜಯಂತಿ ಅಂಗವಾಗಿ ಅಂದು ಮುಂಜಾನೆ 6ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆ ಅವರ ನೇತೃತ್ವದಲ್ಲಿ ಮಾಜಾಳಿ ಕಡಲತೀರದಲ್ಲಿ ನಡೆಯುವ ಸ್ವಚ್ಚತಾ ಕಾರ್ಯಕ್ರಮ ನಂತರ ಸಂಜೆ 6ಗಂಟೆಗೆ ಈ ಕಾರ್ಯಕ್ರಮ ನಡೆಯಲಿದ್ದು ಸಾರ್ವಜನಿಕರು, ವಿದ್ಯಾರ್ಥಿಗಳು, ಗಾಂಧೀಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕರಾದ ಎಚ್.ಬಿ.ದಿನೇಶ್, ಅಪರ ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ್, ಜಿಲ್ಲಾ ವಾರ್ತಾಧಿಕಾರಿ ಹಿಮಂತರಾಜು ಜಿ ಅವರು ಕೋರಿದ್ದಾರೆ.