ಭಟ್ಕಳ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ನಿಧನ
ಮುಂಜಾಗೃತ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ; ಸ್ವಯಂ ಘೋಷಿತ ಬಂದ್
ಭಟ್ಕಳ: ಪುರಸಭೆ ಅಂಗಡಿ ತೆರವು ಕಾರ್ಯಾಚರಣೆ ಸಂದರ್ಭ ಉದ್ವೇಗಕ್ಕೊಳಗಾಗಿ ಎರಡು ದಿನಗಳ ಹಿಂದೆ ಪುರಸಭೆ ಕಟ್ಟಡದೊಳಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆಸರಕೇರಿಯ ರಾಮಚಂದ್ರಪ್ಪ ನಾಯ್ಕ ಶುಕ್ರವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಶನಿವಾರ ಪುರಸಭೆ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.
ಜಿಲ್ಲಾಡಳಿತ ಘಟನೆಯ ಗಂಭಿರತೆಯನ್ನು ಪರಿಗಣಿಸಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಹಾಕಲಾಗಿದ್ದು, ಬೇರೆ ಜಿಲ್ಲೆಗಳಿಂದಲೂ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.
ರಾಮಚಂದ್ರ ನಾಯ್ಕ ರ ಮೃತದೇಹವನ್ನು ಬೆಳಿಗ್ಗೆ ೯ಗಂಟೆಗೆ ಭಟ್ಕಳ ತರಲಾಗಿದ್ದು ಆಸರಕೇರಿಯ ಅವರ ನಿವಾಸದ ಮುಂದೆ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಶವಸಂಸ್ಕಾರವನ್ನು ನೆರವೇರಿಸಲಾಗಿದೆ. ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದೆ ಪರಿಸ್ಥಿತಿ ಶಾಂತವಾಗಿದೆ. ಪರಿಸ್ಥಿಯನ್ನು ನಿಯಂತ್ರಿಸಲು ಜಿಲ್ಲಾಡಳಿತ ಸಿದ್ದವಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್ ಭಟ್ಕಳದಲ್ಲಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಸಾರ್ವಜನಿಕರು ಯಾವುದೇ ರೀತಿಯ ಭಯಪಡುವ ಅವಶ್ಯಕತೆಯಿಲ್ಲ. ಇಲ್ಲಿ ಪರಿಸ್ಥಿತಿ ತಿಳಿಯಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.