ಶಿಡ್ಲಘಟ್ಟ:ವಿ.ಮುನಿಯಪ್ಪ ಅವರ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಪ್ರತಿಕೃತಿ ದಹನದ ಮೂಲಕ ಕೀಳು ರಾಜಕಾರಣ- ಬಿ.ಸಿ.ನಂದೀಶ್ ಟೀಕೆ
ಶಿಡ್ಲಘಟ್ಟ,ಆಗಸ್ಟ್16: ಕ್ವಿಟ್ ಇಂಡಿಯಾ ಚಳುವಳಿಯ 75 ನೇ ವರ್ಷದ ಆಚರಣೆ ಮಾಡುವ ನೆಪದಲ್ಲಿ ಮಾಜಿ ಸಚಿವ ವಿ.ಮುನಿಯಪ್ಪ ಅವರ ನೇತೃತ್ವದಲ್ಲಿ ನಡೆದ ರ್ಯಾಲಿಯ ವೇಳೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಮತ್ತು ಪ್ರಧಾನಿ ನರೇಂದ್ರಮೋದಿ ಅವರ ಪ್ರತಿಕೃತಿಗಳನ್ನು ದಹಿಸುವ ಮೂಲಕ ಕಾಂಗ್ರೇಸ್ ಪಕ್ಷ ಕೀಳಮಟ್ಟದ ರಾಜಕಾರಣ ಮಾಡುತ್ತಿದೆ ಕಾಂಗ್ರೇಸಿಗರ ಕೃತ್ಯವನ್ನು ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದು ತಾಲ್ಲೂಕು ಬಿಜೆಪಿ ಅಧ್ಯಕ್ಷ ಬಿ.ಸಿ.ನಂದೀಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಸುಧ್ಧಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಜನಪರವಾದ ಕಾರ್ಯಕ್ರಮಗಳಿಂದಾಗಿ ರಾಷ್ಟ್ರದಲ್ಲಿ ತೀವ್ರ ಹಿನ್ನಡೆ ಅನುಭವಿಸುತ್ತಿರುವ ಕಾಂಗ್ರೆಸ್ ಪಕ್ಷ, ಹತಾಶೆಯಿಂದ ಇಂತಹ ಕೃತ್ಯಗಳಿಗೆ ಕೈಹಾಕಿದೆ. ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗದಿರುವಷ್ಟರ ಮಟ್ಟಿಗೆ ಕಾಂಗ್ರೆಸ್ ಪಕ್ಷ ಅಳಿವಿನಂಚಿಗೆ ಹೋಗುತ್ತಿದೆ ಎಂದು ಟೀಕಿಸಿದರು.
ಸಚಿವರು ರಾಜಿನಾಮೆ ನೀಡಲಿ: ರಾಜ್ಯ ಸರಕಾರದಲ್ಲಿ ಸಚಿವರಾಗಿರುವ ಡಿ.ಕೆ.ಶಿವಕುಮಾರ್ ಮತ್ತು ಜಾರಕಿಹೋಳಿ, ಲಕ್ಷ್ಮೀಹೆಬ್ಬಾಳ್ಕರ್ ಅವರ ಮನೆಗಳ ಮೇಲೆ ಆದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜನಧನ ಯೋಜನೆ, ಉಜ್ವಲ ಯೋಜನೆಯಡಿ ಬಡಕುಟುಂಬಗಳಿಗೆ ಉಚಿತವಾಗಿ ಗ್ಯಾಸ್ ವಿತರಣೆ, ಜಿ.ಎಸ್.ಟಿ, ಯುವಕರ ಸಬಲೀಕರಣಕ್ಕೆ ಮುದ್ರಾ ಯೋಜನೆ, ರೈತರಿಗೆ ಅನುಕೂಲ ಕಲ್ಪಿಸಲು ಫಸಲ್ ಭೀಮಾಯೋಜನೆ, ಗರ್ಭೀಣಿ ಮಹಿಳೆಯರಿಗೆ ಅನುಕೂಲ ಕಲ್ಪಿಸಲು ಆರೋಗ್ಯ ಕವಚಾ ಯೋಜನೆ, ಗಂಗಾನದಿ ಶುದ್ಧೀಕರಣ, ಸ್ವಚ್ಚ ಭಾರತ ಯೋಜನೆ, ಮೇಕ್ ಇನ್ ಇಂಡಿಯಾ, ಸೇರಿದಂತೆ ಅನೇಕ ಯೋಜನೆಗಳ ಬಗ್ಗೆ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆಗೆ ಒಳಗಾಗುತ್ತಿದ್ದರೂ ಕಾಂಗ್ರೆಸ್ನವರು ಈ ರೀತಿಯಾಗಿ ಅಪಪ್ರಚಾರ ಮಾಡುವುದು ಹಾಸ್ಯಸ್ಪದವಾಗಿದೆ ಎಂದರು.
ಒಳಜಗಳದಲ್ಲಿ ತಲ್ಲೀನರಾಗಿರುವ ಶಾಸಕರು: ಕ್ಷೇತ್ರದ ಪ್ರಗತಿಗಾಗಿ ಆರಿಸಿದ ಶಾಸಕ ರಾಜಣ್ಣನವರು ತಮ್ಮ ಪಕ್ಷದಲ್ಲಿನ ಒಳಜಗಳ ಮತ್ತು ಆಂತರಿಕ ಭಿನ್ನಮತವನ್ನು ಸರಿಪಡಿಸಿಕೊಳ್ಳುವುದರಲ್ಲಿ ನಿರತರಾಗಿದ್ದಾರೆ ಎಂದು ದೂರಿದ ಬಿಜೆಪಿ ಮಂಡಲ ಅಧ್ಯಕ್ಷರು ಜನರ ನಿರೀಕ್ಷೆಗಳನ್ನು ಶಾಸಕರು ಹುಸಿಗೊಳಿಸಿ ಅಭಿವೃದ್ಧಿಯನ್ನು ಮರೆತಿದ್ದಾರೆ ಎಂದು ಆರೋಪಿಸಿದರು.
ನಗರಸಭಾ ಸದಸ್ಯ ರಾಘವೇಂದ್ರ ಮಾತನಾಡಿ, ಮಾಜಿ ಶಾಸಕರು, ಕ್ಷೇತ್ರದ ಬಗ್ಗೆ ಕಾಳಜಿವಹಿಸುವುದರ ಬದಲಿಗೆ ಕೇವಲ ಚುನಾವಣೆಯಲ್ಲಿ ಗೆಲ್ಲುವುದನ್ನೆ ಅಜೆಂಡಾ ಮಾಡಿಕೊಂಡಿದ್ದಾರೆ ಇವರು ಬಿಜೆಪಿ ನಾಯಕರುಗಳ ಬಗ್ಗೆ ಅಪಪ್ರಚಾರ ಮಾಡುವುದು ಸರಿಯಲ್ಲ ಎಂದರು.
ಸುಧ್ಧಿಗಾರ ಪ್ರಶ್ನೆಗೆ ಉತ್ತರಿಸಿ ಭಾಜಪ ಮುಖಂಡರು ಸಚಿವರ ಮನೆಯ ಮೇಲೆ ದಾಳಿ ನಡೆಸಿದ್ದಾಗ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಡಿ.ಕೆ.ಶಿವಕುಮಾರ್ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ತರಾಟೆಗೆ ತೆಗೆದಕೊಂಡ ಮೇಲೆ ಬಿಜೆಪಿ ನಾಯಕರು ಎಚ್ಚೆತ್ತುಕೊಂಡಿದ್ದಾರೆ ಎಂಬುದು ಅರ್ಥರಹಿತ ಇದೇ ತಿಂಗಳ 18 ರಂದು ಸಚಿವರು ರಾಜಿನಾಮೆ ನೀಡಬೇಕೆಂದು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ ಭಾಜಪ ನಾಯಕರು ಶಿಡ್ಲಘಟ್ಟ ತಾಲೂಕಿನಲ್ಲಿ ಮುದ್ರಾ ಯೋಜನೆಗೆ ಸಂಬಂಧಿಸಿದಂತೆ ಫಲಾನುಭವಿಗಳ ಮಾಹಿತಿ ಇಲ್ಲ ಅದನ್ನು ತರಿಸಿಕೊಂಡು ಮಾಹಿತಿ ನೀಡುತ್ತೇವೆ ತಾಲೂಕಿನಲ್ಲಿ 13 ಸಾವಿರ ಬಿಪಿಎಲ್ ಕುಟುಂಬದ ಸದಸ್ಯರಿಗೆ ಉಜ್ವಲ ಯೋಜನೆಯಡಿ ಅಡುಗೆ ಅನಿಲ ವಿತರಿಸಲು ಯೋಜನೆ ರೂಪಿಸಲಾಗಿದೆ ಮತಗಟ್ಟೆವಾರು ಬಿಜೆಪಿ ಕಾರ್ಯಕರ್ತರ ಮೂಲಕ ಫಲಾನುಭವಿಗಳಿಗೆ ಮಾಹಿತಿ ನೀಡಲಾಗುವುದೆಂದರು.
ಸುಧ್ಧಿಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆರ್.ಸುರೇಂದ್ರಗೌಡ, ಶ್ರೀರಾಮರೆಡ್ಡಿ, ತಾಲ್ಲೂಕು ಪ್ರಧಾನಕಾರ್ಯದರ್ಶಿ ಬಾಸ್ಕರ್ರೆಡ್ಡಿ, ರಾಜ್ಯ ಸಮಿತಿ ಸದಸ್ಯ ದಾಮೋದರ್, ಜಿಲ್ಲಾ ಕಾರ್ಯದರ್ಶಿ ಸುಜಾತಮ್ಮ, ರಾಮಕೃಷ್ಣಪ್ಪ, ಎಸ್.ಸಿ.ಮೋರ್ಚಾ ಅಧ್ಯಕ್ಷ ಮುನಿರಾಜು, ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.