ಶಿಡ್ಲಘಟ್ಟ: ನಂದಿ ಕ್ರಾಸ್ ಬಳಿ 150 ಕೋಟಿ ರೂಗಳ ವೆಚ್ಚದಲ್ಲಿ ನಿರ್ಮಿಸುತ್ತಿರುವ ಮೆಗಾಡೈರಿಯಿಂದ ಭವಿಷ್ಯದಲ್ಲಿ ಹೆಚ್ಚಿನ ಲಾಭ-ನಾಗರಾಜ್
ಶಿಡ್ಲಘಟ್ಟ,ಆಗಸ್ಟ್29: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಯ ಹಾಲು ಉತ್ಪಾದಕರು ಗುಣಮಟ್ಟದ ಹಾಲು ಉತ್ಪಾದನೆಯಲ್ಲಿ ಅಗ್ರಸ್ಥಾನವನ್ನು ಹೊಂದಿದ್ದಾರೆ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಕ್ರಾಸ್ ಬಳಿ 150 ಕೋಟಿ ರೂಗಳ ವೆಚ್ಚದಲ್ಲಿ ನಿರ್ಮಿಸುತ್ತಿರುವ ಮೆಗಾಡೈರಿಯಿಂದ ಭವಿಷ್ಯದಲ್ಲಿ ಹೆಚ್ಚಿನ ಲಾಭವಾಗಲಿದೆ ಎಂದು ಕೋಚಿಮುಲ್ ನಿರ್ದೇಶಕ ಕೆ.ವಿ.ನಾಗರಾಜ್ ಹೇಳಿದರು.
ತಾಲೂಕಿನ ಮಳ್ಳೂರು ಹಾಲು ಉತ್ಪಾದಕರ ಸಹಕಾರ ಸಂಘದ ಪದಾಧಿಕಾರಿಗಳಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ 850 ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಗುಣಮಟ್ಟದ ಹಾಲು ಪೂರೈಕೆಯಾಗುತ್ತಿದೆ ಎಲ್ಲಾ ಸಂಘಗಳು ಲಾಭದಾಯಕವಾಗಿ ನಡೆಯುತ್ತಿದೆ ಎಂದರಲ್ಲದೆ ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಕಳೆದ 30 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ದೆಹಲಿಯ ಇಂಟರ್ನ್ಯಾಷನಲ್ ಫ್ರೇಂಡ್ಶಿಪ್ ಸಹಕಾರ ಸಂಘದ ಮೂಲಕ ನೀಡಿರುವ ಭಾರತ ಜ್ಯೋತಿ ಪ್ರಶಸ್ತಿ ಉಭಯ ಜಿಲ್ಲೆಯ ಹಾಲು ಉತ್ಪಾದಕರಿಗೆ ಸಲ್ಲಿಸಿರುವ ಗೌರವ ಎಂದರಲ್ಲದೆ ಬದುಕಿರುವ ತನಕ ಅವಿಭಜಿತ ಕೋಲಾರ ಜಿಲ್ಲೆಯ ಹಾಲು ಉತ್ಪಾದಕರಿಗೆ ಚಿರಋಣಿಯಾಗಿರುತ್ತೇನೆ ಎಂದರು.
ಸತತ ಬರಗಾಲದಿಂದ ತತ್ತರಿಸುತ್ತಿರುವ ಅವಿಭಜಿತ ಕೋಲಾರ ಜಿಲ್ಲೆಯ ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸರಕಾರ ರಿಯಾಯಿತಿ ದರದಲ್ಲಿ ಪಶು ಆಹಾರ ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ ಅವರು ಕೃಷಿಯೊಂದಿಗೆ ಹೈನುಗಾರಿಕೆಯನ್ನು ಪರ್ಯಾಯ ಕಸುಬು ಆಗಿ ಹೆಚ್ಚು ಒತ್ತು ನೀಡಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಎಂಪಿಸಿಎಸ್ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಎನ್.ಗೋವಿಂದರಾಜು, ಮಳ್ಳೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಶ್ರೀಧರ್, ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ ಮಂಜುನಾಥ್ಬಾಬು,ಮಾಜಿ ನಿರ್ದೇಶಕ ಸೋಮಣ್ಣ,ಕಾರ್ಯದರ್ಶಿ ದೇವರಾಜ್ ಮತ್ತಿತರರು ಉಪಸ್ಥಿತರಿದ್ದರು.