ಶಿಡ್ಲಘಟ್ಟ,ಜನವರಿ20: ಏಳನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಕನಿಷ್ಠ ಕೂಲಿ ನೀಡಬೇಕೆಂದು ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಐಟಿಯು ಸಂಯೋಜಿತ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ರಾಜ್ಯ ಅಕ್ಷರ ದಾಸೋಹ ನೌಕರರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಪ್ರವಾಸಿಮಂದಿರದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ತಾಲೂಕು ಪಂಚಾಯಿತಿಗೆ ಮುತ್ತಿಗೆ ಹಾಕಿದರು ಹಿಂದಿನ ಸರ್ಕಾರ ಘೋಷಣೆ ಮಾಡಿದ ಹೆಚ್ಚುವರಿ ಸಂಭಾವನೆಯನ್ನು ಇಂದಿನ ಸರ್ಕಾರ ಜಾರಿಗೊಳಿಸಬೇಕು. 45ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸುಗಳನ್ನು ಜಾರಿ ಮಾಡಬೇಕು. ಅಡುಗೆ ಮಾಡುವಾಗ ಸಂಭವಿಸುವ ಅಪಘಾತ ಮೊತ್ತವನ್ನು ಹೆಚ್ಚಿಸಬೇಕು. ಐಸಿಡಿಎಸ್ ಯೋಜನೆಗೆ ಕಡಿತ ಮಾಡಿದ ಅನುದಾನವನ್ನು ಕೇಂದ್ರ ಸರ್ಕಾರ ವಾಪಸ್ ಮಾಡಬೇಕು ಐಸಿಡಿಎಸ್ ಯೋಜನೆಯನ್ನು ಬಲಿಷ್ಠಗೊಳಿಸಬೇಕು. ಕನಿಷ್ಠ ವೇತನ ಮತ್ತು ನಿವೃತ್ತಿ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಸಿ.ಐ.ಟಿ.ಯು ಜಿಲ್ಲಾ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಮುನಿಲಕ್ಷ್ಮಮ್ಮ, ಎಸ್.ಎಂ.ಮಂಜುಳಾ, ಎಂ.ಆರ್.ಗೀತಾ, ಅಶ್ವತ್ಥಮ್ಮ, ಗುಲ್ಜಾರ್, ಟಿ.ಮಂಜುಳಮ್ಮ, ಫಯಾಜುಲ್ಲಾ, ಖಲೀಲ್, ನರಸಿಂಹಪ್ಪ, ವೆಂಕಟರಮಣಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.