ಶ್ರೀನಿವಾಸಪುರ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಗುಣಾತ್ಮಕ ಫಲಿತಾಂಶ ತರುವುದರ ಮೂಲಕ ತಾಲ್ಲೂಕಿನ ಶೈಕ್ಷಣಿಕ ಪರಂಪರೆ ಉಳಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಮ್ಸುನ್ನೀಸಾ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಬುಧವಾರ ಭೇಟಿ ನೀಡಿ 10 ನೇ ತರಗತಿ ವಿದ್ಯಾರ್ಥಿಗಳ ಪ್ರಗತಿ ಪರಿಶೀಲಿಸಿದ ಬಳಿಕ ಪ್ರವೇಶ ಪತ್ರ ವಿತರಿಸಿ ಮಾತನಾಡಿದ ಅವರು, ಕಳೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕು ರಾಜ್ಯದಲ್ಲಿ 4ನೇ ಸ್ಥಾನ ಪಡೆದಿದೆ ಹಾಗೂ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಈ ಬಾರಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಬೇಕು ಎಂದು ಹೇಳಿದರು.
ತಾಲ್ಲೂಕಿನಲ್ಲಿ 2679 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದಾರೆ. 12 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಮಾ.23 ರಿಂದ ಏ.6 ರವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ವಿಶ್ವಾಸದಿಂದ ಎದುರಿಸಬೇಕು. ಭಯ ಪಡಬೇಕಾದ ಅಗತ್ಯವಿಲ್ಲ ಎಂದು ಹೇಳಿದರು.
ತಾಲ್ಲೂಕಿನ ಎಲ್ಲ ಪ್ರೌಢ ಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ. ಸರಣಿ ಪರೀಕ್ಷೆಗಳನ್ನು ನಡೆಸುವುದರ ಮೂಲಕ ಮಕ್ಕಳ ಕಲಿಕಾ ಮಟ್ಟವನ್ನು ಹೆಚ್ಚಿಸಲಾಗಿದೆ. ಮಕ್ಕಳ ಬುದ್ಧಿ ಮತ್ತೆಗೆ ಅನುಗುಣವಾಗಿ, ಎಲ್ಲ ಮಕ್ಕಳೂ ಉತ್ತೀರ್ಣರಾಗುವಂತೆ ಬೋಧಿಸಲಾಗಿದೆ. ಶಿಕ್ಷಕರು ಹೆಚ್ಚಿನ ಶ್ರಮವಹಿಸಿ ಮಕ್ಕಳ ಹಿತಕ್ಕಾಗಿ ದುಡಿಯುತ್ತಿದ್ದಾರೆ ಎಂದು ಹೇಳಿದರು.
ಉಪ ಪ್ರಾಂಶುಪಾಲೆ ಬಿ.ರೇಣುಕಮ್ಮ ಮಾತನಾಡಿ, ವಿದ್ಯಾರ್ಥಿಗಳು ದುರದರ್ಶನ ಹಾಗೂ ಮೊಬೈಲ್ ಫೋನ್ನಿಂದ ದೂರವಿದ್ದು ಪರೀಕ್ಷೆಗೆ ಸಿದ್ಧತೆ ನಡೆಸಬೇಕು. ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಹೇಳಿದರು.
ಶಿಕ್ಷಕಿಯರಾದ ವರಲಕ್ಷ್ಮಿ,, ವಿ.ರಾಮಲಕ್ಷ್ಮಮ್ಮ, ಕೆ.ವಿ.ಶಾರದಮ್ಮ, ಜರೀನಾ ಅಂಜಂ, ಶಿಕ್ಷಕ ಆರ್.ಸುಬ್ರಮಣಿ ಇದ್ದರು.
ಶ್ರೀನಿವಾಸಪುರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಬುಧವಾರ ಬಿಇಒ ಶಂಷುನ್ನೀಸಾ ಭೇಟಿ ನೀಡಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ವಿತರಿಸಿದರು.