ಶ್ರೀನಿವಾಸಪುರ: ಬಿಜೆಪಿ ಕಾರ್ಯಕರ್ತರು ಪಕ್ಷದ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರತಿ ಮತಗಟ್ಟೆ ಮಟ್ಟದಲ್ಲಿ ಮತದಾರರನ್ನು ಸಂಪರ್ಕಿಸಿ ಒಲವು ಗಳಿಸಬೇಕು. ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದು ದೆಹಲಿ ಬಿಜೆಪಿ ಅಧ್ಯಕ್ಷ ಸತೀಶ್ ಉಪಾಧ್ಯಾಯ ಹೇಳಿದರು.
ಪಟ್ಟಣದ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಶನಿವಾರ ಏರ್ಪಡಿಸಿದ್ದ ಬಿಜೆಪಿ ಬೂತ್ ಮಟ್ಟದ ಅಧ್ಯಕ್ಷರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಕೈಗೊಳ್ಳುವುದರ ಮೂಲಕ ಮತದಾರರ ಮನ ಗೆದ್ದಿದೆ. ಪ್ರಧಾನಿ ಮೋದಿ ಅವರ ಆಡಳಿತ ಜನರಿಗೆ ಮೆಚ್ಚಿಗೆಯಾಗಿದೆ. ಮೋದಿ ಅವರ ಕಾರ್ಯಕ್ರಮಗಳನ್ನು ಇಡೀ ಜಗತ್ತು ಗಮನಿಸಿ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ಹೇಳಿದರು.
ರಾಜ್ಯದಲ್ಲಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ದುರಾಡಳಿತ ಕೊನೆಗೊಳ್ಳಲು ಜನರು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು. ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಸಹಕರಿಸಬೇಕು. ದಕ್ಷಿಣ ಭಾರದಲ್ಲಿ ಕರ್ನಾಟಕದ ಮತದಾರರು ಹೆಚ್ಚು ಪ್ರಬುದ್ಧರು. ಅವರು ಸರಿಯಾದ ಸಮಿಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ. ಬಿಜೆಪಿ ಕಾರ್ಯಕರ್ತರು ಮತದಾರರ ಮನೆಗೆ ಭೇಟಿ ನೀಡಿ ಕೇಂದ್ರದಲ್ಲಿ ಬಿಜೆಪಿ ಸಾಧನೆ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.
ತಾಲ್ಲೂಕು ಬಿಜೆಪಿ ಮುಖಂಡ ಡಾ. ಕೆ.ಎನ್.ವೇಣುಗೋಪಾಲ್ ಮಾತನಾಡಿ, ರಾಜ್ಯ ಸರ್ಕಾರ ಕೇಂದ್ರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ತನ್ನದೆಂದು ಬಿಂಬಿಸುತ್ತಿದೆ. ಮತದಾರರು ನಿಜವನ್ನು ಅರಿಯಬೇಕು. ರಾಜ್ಯ ಸರ್ಕಾರ ಪ್ರಕಟಿಸುರುವ ಬೇರೆ ಬೇರೆ ಭಾಗ್ಯಗಳ ಬಲ ಕೇಂದ್ರ ಸರ್ಕಾರವಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಜನಪರ ಯೋಜನೆಗಳನ್ನು ಜಾರಿಗೆ ತಂದಿತ್ತು. ಆ ಯೋಜನೆಗಳು ಇನ್ನೂ ಮತದಾರರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿವೆ ಎಂದು ಹೇಳಿದರು.
ಯುವ ಮತದಾರರು ಬಿಜೆಪಿ ಪರ ಒಲವು ಹೊಂದಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಗಾಳಿ ಬೀಸುತ್ತಿದೆ. ಸ್ಥಳೀಯ ಬಿಜೆಪಿ ಕಾರ್ಯಕರ್ತರಿಗೆ ವಿರೋಧ ಪಕ್ಷದವರು ವಿನಾ ಕಾರಣ ತೊಂದರೆ ಕೊಡುತ್ತಿದ್ದಾರೆ. ಇನ್ನು ಮುಂದೆ ಅದು ನಡೆಯುವುದಿಲ್ಲ ಎಂದು ಹೇಳಿದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ವೆಂಕಟಮುನಿಯಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಿಜೆಪಿ ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಮಂಜುಶ್ರೀ, ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಗೌಡ, ಮುಖಂಡರಾದ ಸತ್ಯನಾರಾಯಣ, ಎಂ.ಲಕ್ಷ್ಮಣಗೌಡ, ನಿರ್ಮಲ, ಸಚ್ಚಿದಾನಂದ ಮೂರ್ತಿ, ರಮೇಶ್, ನಾಗರಾಜ್, ರಾಮಾಂಜಿ, ನಾರಾಯಣಸ್ವಾಮಿ ಇದ್ದರು.