ಶ್ರೀನಿವಾಸಪುರ: ವ್ಯಕ್ತಿತ್ವ ನಿರ್ಮಾಣದಲ್ಲಿ ಪ್ರಾಥಮಿಕ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಅದು ಮುಂದೆ ದೇಶ ನಿರ್ಮಾಣ ಕಾರ್ಯದಲ್ಲಿ ನೆರವಾಗುತ್ತದೆ ಎಂದು ವಿಧಾನ ಸಭೆಯ ಅಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದ ರಾಜಧಾನಿ ಮ್ಯಾಂಗೋ ಮಂಡಿಯಲ್ಲಿ ಶನಿವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಶಿಕ್ಷಣದ ಗುಣಮಟ್ಟ ಕುಸಿದರೆ, ಸಮಾಜದ ಆರೋಗ್ಯ ಕೆಡುತ್ತದೆ. ಬದಲಾದ ಪರಿಸ್ಥಿತಿಯಲ್ಲಿ ಮಕ್ಕಳಿಗೆ ಕೊಡಿಸುವ ಶಿಕ್ಷಣ ಪೋಷಕರ ಆರ್ಥಿಕ ಮಟ್ಟದ ಸೂಚಕವಾಗಿ ಮಾರ್ಪಟ್ಟಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ಸರ್ಕಾರ ಏನೆಲ್ಲ ಸೌಲಭ್ಯ ನೀಡುತ್ತಿದ್ದರೂ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಸರ್ಕಾರಿ ಕನ್ನಡ ಶಾಲೆಗೆ ಮಕ್ಕಳನ್ನು ಸೇರಿಸುವುದು ಅಗೌರವ ಎಂಬ ಭಾವನೆ ಪೋಷಕರಲ್ಲಿ ಬೇರುರುತ್ತಿದೆ. ಮಕ್ಕಳಲ್ಲಿ ಸಾಮಾಜಿಕ ಮೌಲ್ಯಗಳು ಕುಸಿಯುತ್ತಿವೆ. ಇಂಥ ಪರಿಸ್ಥಿತಿಯಲ್ಲಿ ಸರ್ಕಾರಿ ಶಾಲೆ ಶಿಕ್ಷಕರು ಬೋಧನೆಯಲ್ಲಿ ಯಾವುದೆ ಖಾಸಗಿ ಶಾಲೆಗೆ ಕಡಿಮೆ ಇಲ್ಲದಂತೆ ನೋಡಿಕೊಳ್ಳಬೇಕು. ದೆಹಲಿ ಮುಖ್ಯ ಮಂತ್ರಿ ಕೇಜ್ರೀವಾಲ್ ತೆಗೆದುಕೊಂಡ ಸುಧಾರಣಾ ಕ್ರಮಗಳಿಂದಾಗಿ, ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆ ಬಿಡಿಸಿ ಸರ್ಕಾರಿ ಶಾಲೆಗೆ ಸೇರಿಸುತ್ತಿದ್ದಾರೆ ಎಂದು ಹೇಳಿದರು.
ಮಕ್ಕಳು ಟಿವಿಗೆ ದಾಸರಾಗಿ ಕೆಡುತ್ತಿದ್ದಾರೆ. ಅಲ್ಲಿ ಒಳ್ಳೆಯ ಕಾರ್ಯಕ್ರಮಗಳಿಗಿಂತ ಕೆಟ್ಟ ಕಾರ್ಯಕ್ರಮಗಳು ವಿಜೃಂಭಿಸುತ್ತಿವೆ. ಇಂಥ ಸಮಯದಲ್ಲಿ ಶಿಕ್ಷಕರು ಬದ್ಧತೆಯಿಂದ ತಮ್ಮ ಕರ್ತವ್ಯ ನಿರ್ವಹಿಸಬೇಕು. ಗುಣಾತ್ಮಕ ಶಿಕ್ಷಣ ನೀಡಬೇಕು. ಸ್ಪರ್ಧೆ ಇರಲಿ, ವೈಷಮ್ಯ ಬೇಡ. ಪಾಠದ ಜೊತೆಗೆ ಆಟ, ಸಾಂಸ್ಕೃತಿಕ ಚಟುವಟಿಕೆ ಜೊತೆಗೂಡಲಿ. ಶಿಕ್ಷಕ ವೃತ್ತಿಯ ಬಗ್ಗೆ ಕೀಳರಿಮೆ ಬೇಡ. ಸಮಾಜದಲ್ಲಿ ಶಿಕ್ಷಕರಿಗೆ ಹೆಚ್ಚಿನ ಗೌರವವಿದೆ ಎಂಬುದನ್ನು ಮರೆಯಬಾರದು. ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ತಾಲ್ಲೂಕಿನಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚಿನ ಸಂಖ್ಯೆಯ ಸರ್ಕಾರಿ ವಸತಿ ಶಾಲೆಗಳಿವೆ. ಅಗತ್ಯ ಇರುವ ಕಡೆಗಳಲ್ಲಿ ಹೊಸದಾಗಿ ಇನ್ನೂ 8 ಸುಸಜ್ಜಿತ ವಸತಿ ಶಾಲೆಗಳನ್ನು ತೆರೆಯಲಾಗುವುದು. ಅಗತ್ಯವಾದ ಮೂಲ ಸೌಕರ್ಯ ಒದಗಿಸಲಾಗುವುದು. ಇನ್ಫೋಸಿಸ್್ ಸಂಸ್ಥೆ ವತಿಯಿಂದ ರೂ.5 ಕೋಟಿ ವೆಚ್ಚದಲ್ಲಿ ಪ್ರಯೋಗಾಲಯ ನಿರ್ಮಿಸಲಾಗಿದೆ. ಪ್ರೌಢ ಶಾಲೆ ತೆರೆಯಲು ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಕರ ಡಾ. ಎಸ್.ರಾಧಾಕೃಷ್ಣನ್ ಅವರ ಆದರ್ಶ ಪಾಲಿಸಬೇಕು. ಮಕ್ಕಳು ದೇಶ ನಿರ್ಮಾಣ ಕಾರ್ಯದಲ್ಲಿ ತೊಡಗಲು ಪ್ರೇರೇಪಿಸಬೇಕು. ಸಮಾಜ ಶಿಕ್ಷಕರ ಮೇಲೆ ಇಟ್ಟಿರುವ ಭರವಸೆಯನ್ನು ಉಳಿಸಿಕೊಳ್ಳಬೇಕು ಎಂದು ಹೇಳಿದರು.
ಪ್ರಾಧ್ಯಾಪಕ ಡಾ. ಜಿ.ಶಿವಪ್ಪ ಅರಿವು ಅವರು ಶಿಕ್ಷಕರ ದಿನಾಚರಣೆ ಮಹತ್ವ ಕುರಿತು ಮಾತನಾಡಿ, ಶಿಕ್ಷಕರು ಮಕ್ಕಳಿಗೆ ಪ್ರಶ್ನಿಸುವುದನ್ನು ಕಲಿಸಬೇಕು. ಚರ್ಚಿಸುವುದನ್ನು ರೂಢಿ ಮಾಡಿಸಬೇಕು. ಸಮಾಜದಲ್ಲಿನ ಬಡವರ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳನ್ನು ಉಳಿಸಬೇಕು. ಸಾವಿತ್ರಿ ಬಾಯಿ ಪುಲೆ ಅವರ ಶೈಕ್ಷಣಿಕ ಸೇವೆಯನ್ನು ಪರಿಗಣಿಸಬೇಕು ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶಂಷುನ್ನೀಸಾ ಪ್ರಾಸ್ತಾವಿಕ ಭಾಷಣ ಮಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ ಮಾತನಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕಿನ ನಂಬಿಹಳ್ಳಿ ಹಾಗೂ ರೂಣೂರು ಐಟಿಐ ವಿದ್ಯಾರ್ಥಿಗಳಿಗೆ ಎಸ್ಇಪಿ, ಟಿಎಸ್ಪಿ ಯೋಜನೆಯಡಿ ಲ್ಯಾಪ್ ಟ್ಯಾಪ್ಗಳನ್ನು ವಿತರಿಸಲಾಯಿತು. ಉತ್ತಮ ಶಿಕ್ಷಕ, ಉತ್ತಮ ಶಾಲೆ ಪ್ರಶಸ್ತಿ ಪಡೆದ ಹಾಗೂ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದಸ್ವಾಮಿ, ತಹಶೀಲ್ದಾರ್ ಬಿ.ಎಸ್.ರಾಜೀವ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನಾರಾಯಣಸ್ವಾಮಿ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಕೆ.ಎಚ್.ಸಂಪತ್ ಕುಮಾರ್, ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಗೋವಿಂದರೆಡ್ಡಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ನಾಗರಾಜ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜು, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಮುಖಂಡರಾದ ನಂಜುಂಡರೆಡ್ಡಿ, ಎನ್.ಬಿ.ಗೋಪಾಲಗೌಡ, ಕಲಾಶಂಕರ್, ಜಿ.ವಿ.ಚಂದ್ರಪ್ಪ, ಮುರಳಿ ಬಾಬು, ವಿವಿಧ ಶಿಕ್ಷಕ ಸಂಘಟನೆಗಳ ಮುಖಂಡರು ಇದ್ದರು.