ಕೇರಳ: ಸಿಸ್ಟರ್ ಅಭಯ ಕೊಲೆ ಪ್ರಕರಣಕ್ಕೆ ಮರುಜೀವ

Source: sonews | By Staff Correspondent | Published on 22nd January 2018, 7:58 PM | National News | Don't Miss |

ತಿರುವನಂತಪುರಂ: ಕೇರಳದಲ್ಲಿ ಸುದೀರ್ಘ ಅವಧಿಯಿಂದ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಸಿಸ್ಟರ್ ಅಭಯ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಬ್ರಾಂಚ್   ನ ನಿವೃತ್ತ ಪೊಲೀಸ್ ವರಿಷ್ಟಾಧಿಕಾರಿ ಕೆ.ಟಿ ಮೈಕಲ್ ಅವರನ್ನು ಸಾಕ್ಷ್ಯಾಧಾರ ನಾಶಗೊಳಿಸಿದ ಆರೋಪದಲ್ಲಿ ವಿಚಾರಣೆ ನಡೆಸಬೇಕು ಎಂದು ಸಿಬಿಐ ನ್ಯಾಯಾಲಯ ತನಿಖಾ ಸಂಸ್ಥೆಗೆ ಸೋಮವಾರ ಆದೇಶಿಸಿದೆ.
1992ರ ಮಾರ್ಚ್ 27ರಂದು ಸಿಸ್ಟರ್ ಅಭಯ ಅವರ ಮೃತದೇಹ ಕೊಟ್ಟಾಯಂನ ಪಾಯಸ್ ಟೆನ್ ಕಾನ್ವೆಂಟ್ ನ ಬಾವಿಯಲ್ಲಿ ಪತ್ತೆಯಾಗಿತ್ತು. ಮೊದಲಿಗೆ ಈ ಪ್ರಕರಣವನ್ನು ಆತ್ಮಹತ್ಯೆ ಎಂದು ತಿಳಿಯಲಾಗಿದ್ದರೂ ನಂತರ ಇದೊಂದು ಕೊಲೆ ಎಂದು ದೃಢಪಟ್ಟ ಹಿನ್ನೆಲೆಯಲ್ಲಿ 2008ರಲ್ಲಿ ಸಿಬಿಐ ಇಬ್ಬರು ಪಾದ್ರಿಗಳು ಮತ್ತು ಒಬ್ಬರು ನನ್ ವಿರುದ್ಧ ದೋಷಾರೋಪ ಪಟ್ಟಿ ಸಿದ್ಧಪಡಿಸಿತ್ತು.
ಸಾಮಾಜಿಕ ಕಾರ್ಯಕರ್ತರಾದ ಜೊಮೊನ್ ಪುತನ್ ಪುರಕ್ಕಳ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವೇಳೆ ನ್ಯಾಯಾಲಯವು ನಿವೃತ್ತ ಎಸ್ ಪಿ ಕೆ.ಟಿ ಮೈಕಲ್ ಅವರನ್ನು ಪ್ರಕರಣದ ಸಾಕ್ಷ್ಯನಾಶಕ್ಕೆ ಸಂಬಂಧಿಸಿದಂತೆ ಆರೋಪಿಯೆಂದು ಹೆಸರಿಸಬೇಕೆಂದು ತನಿಖಾ ಸಂಸ್ಥೆಗೆ ಸೂಚಿಸಿದೆ.
ಆರಂಭದಲ್ಲಿ ಈ ಪ್ರಕರಣದ ತನಿಖೆ ನಡೆಸಿದ ಕೆ.ಟಿ ಮೈಕಲ್ ಇದೊಂದು ಆತ್ಮಹತ್ಯೆ ಎಂದು ವರದಿ ಸಲ್ಲಿಸಿದ್ದರು. ಆದರೆ ನಂತರ ಸ್ಥಳೀಯ ನ್ಯಾಯಾಲಯಕ್ಕೆ ಸಿಸ್ಟರ್ ಅಭಯ ಅವರ ಬಟ್ಟೆ ಮತ್ತು ಡೈರಿಯನ್ನು ಒಪ್ಪಿಸಲಾಗಿತ್ತು. ಆದರೆ ನಂತರ ಸಿಬಿಐ ಈ ಪ್ರಕರಣವನ್ನು ಕೈಗೆತ್ತಿಕೊಳ್ಳುವುದಕ್ಕೂ ಮುನ್ನ ಈ ವಸ್ತುಗಳನ್ನು ನಾಶಗೊಳಿಸಲಾಗಿತ್ತು. ಇದೀಗ ನ್ಯಾಯಾಲಯವು ಕೆ.ಟಿ ಮೈಕಲ್ ಅವರನ್ನು ಆರೋಪಿಯೆಂದು ಪರಿಗಣಿಸಿ ಫೆಬ್ರವರಿ ಒಂದರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಶವದ ಮಹಜರು ನಡೆಸಿದ್ದ ಹೆಚ್ಚುವರಿ ಉಪನಿರೀಕ್ಷಕರಾದ ವಿ.ವಿ ಆಗಸ್ಟೀನ್ ಅವರ ಮೃತದೇಹ 2008ರಲ್ಲಿ ಅವರ ಮನೆಯಲ್ಲಿ ಮಣಿಗಂಟಿನ ನರ ತುಂಡರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಸಿಬಿಐ ದೋಷಾರೋಪ ಪಟ್ಟಿಯಲ್ಲಿ ದಾಖಲಾಗಿರುವ ಪ್ರಕಾರ, 1992ರ ಮಾರ್ಚ್ 27ರಂದು ಅಭಯ ಓದಲೆಂದು ಮುಂಜಾನೆ ಬೇಗ ಎದ್ದಿದ್ದರು. ಆಕೆ ಅಡುಗೆ ಕೋಣೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಇಬ್ಬರು ಪಾದ್ರಿಗಳು ಮತ್ತು ಒಬ್ಬ ನನ್ ಜೊತೆಯಾಗಿ ಮಲಗಿರುವುದನ್ನು ಕಂಡಿದ್ದರು. ಇದರಿಂದ ತಮ್ಮ ರಹಸ್ಯ ಬಯಲಾಗುತ್ತದೆ ಎಂಬ ಭೀತಿಯಿಂದ ಆರೋಪಿತ ಪಾದ್ರಿಗಳು ಮತ್ತು ನನ್ ಸೇರಿ ಅಭಯರನ್ನು ಕತ್ತಿಯಿಂದ ಕಡಿದು ಹತ್ಯೆ ಮಾಡಿ ನಂತರ ಮೃತದೇಹವನ್ನು ಬಾವಿಗೆ ಎಸೆದಿದ್ದರು.
ಈ ಪ್ರಕರಣ ರಾಜ್ಯದಲ್ಲಿ ಕೋಲಾಹಲವನ್ನೇ ಎಬ್ಬಿಸಿದರೂ ಚರ್ಚ್ ಮಾತ್ರ ಆರೋಪಿಗಳ ಪರವಾಗಿ ನಿಂತು ಅವರೆಲ್ಲರೂ ಅಮಾಯಕರು ಎಂದು ಘೋಷಿಸಿತ್ತು. ಕಾಂಗ್ರೆಸ್ ನ ಓರ್ವ ಹಿರಿಯ ಮುಖಂಡ ಮತ್ತು ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರೊಬ್ಬರು ಈ ಪ್ರಕರಣದ ತನಿಖೆಯನ್ನು ವಜಾಗೊಳಿಸಲು ಪ್ರಯತ್ನಿಸಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...