ಉಡುಪಿ :ಉಡುಪಿ ಜಿಲ್ಲೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ. ವನಿತಾ ತೊರವಿ ತಿಳಿಸಿದ್ದಾರೆ.
ಅವರು ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರಿ ಶಾಲೆಗಳ ಉನ್ನತೀಕರಣ ಮತ್ತು ಜಾಗೃತಿ ಕಾರ್ಯಕ್ರಮದಡಿಯಲ್ಲಿ, ಜಿಲ್ಲೆಯ ತಾಲೂಕುಮಟ್ಟದ ಸರ್ಕಾರಿ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳಿಂದ ಹಳೆ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಕಾರ್ಯಕ್ರಮ ಮತ್ತು ಶಾಲೆಯ ಬೆಳವಣಿಗೆಗೆ ಕೊಡುಗೆ ನೀಡಿರುವ ಸಂಘಕ್ಕೆ ಸನ್ಮಾನ ನೀಡಿವ ಕಾರ್ಯಕ್ರಮ ನಡೆಯಲಿದೆ, ಜಿಲ್ಲಾಮಟ್ಟದಲ್ಲಿ ನಾ ಕಲಿತ ಶಾಲೆಯ ತೀರಿಸುವೆ ಋಣವ- ಇದು ನನ್ನ ಜವಾಬ್ದಾರಿ ಎಂಬ ಕಾರ್ಯಕ್ರಮದಡಿ, ಪ್ರತಿ ಶಾಲೆಯ ಹಳೆ ವಿದ್ಯಾರ್ಥಿಗಳ ಸಂಘಗಳ ಸದಸ್ಯರನ್ನು ಆಹ್ವಾನಿಸಿ, ಸಂಘದ ಜವಾಬ್ದಾರಿ ಮತ್ತು ಕರ್ತವ್ಯಗಳ ಕುರಿತಂತೆ ಕಾರ್ಯಕ್ರಮದಲ್ಲಿ ಚರ್ಚಿಸಲಾಗುವುದು, ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಿಸಲು, ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು, ಕನ್ನಡ ಭಾಷೆಯನ್ನು ಬೆಳಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ವನಿತ ತೊರವಿ ತಿಳಿಸಿದರು.
ಮಕ್ಕಳ ಸ್ನೇಹಿ ಮಾಧ್ಯಮ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯ ಎಲ್ಲಾ ಪತ್ರಿಕಾ ಮತ್ತು ದೃಶ್ಯ ಮಾಧ್ಯಮಮಿತ್ರರಿಗೆ ಮಕ್ಕಳ ಹಕ್ಕುಗಳ ಕುರಿತಾದ ಕಾಯ್ದೆಗಳ ಕುರಿತು ಕಾರ್ಯಾಗಾರ ಏರ್ಪಡಿಸಲಾಗುವುದು ಎಂದು ಹೇಳಿದರು.
ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ಜಿಲ್ಲೆಯ ಎಲ್ಲಾ ಕಾನೂನು ಶಾಲೆಯ ವಿದ್ಯಾರ್ಥಿಗಳು, ಪತ್ರಿಕೋದ್ಯಮ ಕಾಲೇಜುಗಳ ವಿದ್ಯಾರ್ಥಿಗಳು, ಎಂಎಸ್ಡಬ್ಲ್ಯೂ ವಿದ್ಯಾರ್ಥಿಗಳಿಂದ ಬೃಹತ್ ಜಾಥಾ ಕಾರ್ಯಕ್ರಮ ನಡೆಯಲಿದ್ದು, ಈ ಜಾಥಾ ಕಾರ್ಯಕ್ರಮದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಮಕ್ಕಳ ಹಕ್ಕುಗಳ ಕುರಿತು ಅರಿವು ಮೂಡಿಸುವ ‘ಸಂದಿಗ್ಧ” ಚಲನಚಿತ್ರದಲ್ಲಿ ನಟಿಸಿರುವ ಮಕ್ಕಳು ಮತ್ತು ಚಿತ್ರದ ನಟ ನಟಿಯರು ಭಾಗವಹಿಸಲಿದ್ದಾರೆ, ಜಾಥಾ ನಂತರ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳು, ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಯಂ ಸೇವ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಲಿದ್ದು, ‘ಸಂದಿಗ್ಧ” ಚಲನಚಿತ್ರ ಪ್ರದರ್ಶನ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ತೊರವಿ ಹೇಳಿದರು.
ಪೊಲೀಸ್ ಅಧಿಕಾರಿಗಳಿಗೆ ಮಕ್ಕಳ ಹಕ್ಕುಗಳ ಕಾಯ್ದೆಗಳಿಗೆ ಸಂಬಂದಿಸಿದಂತೆ ತರಬೇತಿ ಮತ್ತು ಮಕ್ಕಳ ಕಲ್ಯಾಣ ಸಮಿತಿ ಮತ್ತು ಸರ್ಕಾರೇತರ ಸಂಘ ಸಂಸ್ಥೆಗಳೊಂದಿಗೆ ಸಮನ್ವಯತೆ ಸಾಧಿಸಲು ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗುವುದು ಮತ್ತು ಜಿಲ್ಲೆಯ ಎಲ್ಲಾ ಇಲಾಖೆಗಳಲ್ಲಿ ಮಕ್ಕಳಿಗೆ ಸಂಬಂದಿಸಿದಂತೆ ಸಮಸ್ಯೆಗಳ ಕುರಿತು, ಮಕ್ಕಳಿಂದ ಅಹವಾಲು ಸ್ವೀಕರಿಸಿ, ಎಲ್ಲಾ ಅಧಿಕಾರಿಗಳ ಸಮ್ಮುಖದಲ್ಲಿ ಅಹವಾಲುಗಳಿಗೆ ಸೂಕ್ತ ಪರಿಹಾರ ಒದಗಿಸುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ವನಿತಾ ತೊರವಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.