ಸಾವಿನ ಸಂಖ್ಯೆ ಹೆಚ್ಚಳ, ಲಸಿಕೆ ನೀಡಿಕೆ ಇಳಿಮುಖ: ರಾಹುಲ್ ಟೀಕೆ
ನವದೆಹಲಿ: ‘ಕೇಂದ್ರ ಸರ್ಕಾರವು ಜನರ ಗಮನವನ್ನು ನಿಜವಾದ ಸಮಸ್ಯೆಗಳಿಂದ ಬೇರೆಡೆಗೆ ಸೆಳೆಯುವ ಪ್ರಯುತ್ನ ಮಾಡುತ್ತಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಆರೋಪಿಸಿದ್ದಾರೆ.
‘ದೇಶದಲ್ಲಿ ಕೋವಿಡ್ ಲಸಿಕೆಯನ್ನು ನೀಡುತ್ತಿರುವ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. ಇನ್ನೊಂದೆಡೆ ಕೋವಿಡ್ ಸಾವುಗಳು ಹೆಚ್ಚಾಗುತ್ತಿವೆ. ಸುಳ್ಳನ್ನು ಹರಡುವುದು, ಜನರ ಗಮನವನ್ನು ಬೇರೆಡೆ ಸೆಳೆಯುವುದು, ಸತ್ಯವನ್ನು ಮರೆಮಾಚುವ ಮೂಲಕ ಗದ್ದಲವನ್ನು ಸೃಷ್ಟಿಸುವುದು ಕೇಂದ್ರ ಸರ್ಕಾರದ ನೀತಿ’ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಇದರೊಂದಿಗೆ ಸಂಬಂಧಿಸಿದ ಗ್ರಾಫ್ವೊಂದನ್ನು ಹಂಚಿಕೊಂಡಿದ್ದಾರೆ.
‘ಭಾರತದಲ್ಲಿ ಒಂದೇ ದಿನ 4,529 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆಯು 2,83,248ಕ್ಕೆ ಏರಿಕೆಯಾಗಿದೆ. ಇದೇ ಸಂದರ್ಭದಲ್ಲಿ 2.67 ಲಕ್ಷ ಹೊಸ ಪ್ರಕರಣಗಳು ವರದಿಯಾಗಿವೆ. ಭಾರತದ ಒಟ್ಟು ಪ್ರಕರಣಗಳ ಸಂಖ್ಯೆಯು 2,54,96,330ಕ್ಕೆ ಹೆಚ್ಚಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಬುಧವಾರ ಹೇಳಿದೆ.