ಚೆನ್ನೈ: ತಮಿಳುನಾಡಿನ ವಿರುಧನಗರ ಜಿಲ್ಲೆಯ ಸತ್ತೂರಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 15 ಜನರು ಮೃತಪಟ್ಟಿದ್ದು, 36 ಜನರು ಗಾಯಗೊಂಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಈ ದುರಂತಕ್ಕೆ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ
ಮಧ್ಯಾಹ್ನ 1:30ರ ಸುಮಾರಿಗೆ ದುರಂತ ಸಂಭವಿಸಿದೆ. ರಾಸಾಯನಿಕಗಳನ್ನು ಮಿಶ್ರಗೊಳಿಸುತ್ತಿದ್ದಾಗ ಉಂಟಾದ ಘರ್ಷಣೆ ಸ್ಪೋಟಕ್ಕೆ ಕಾರಣವಾಗಿರುವಂತೆ ಕಂಡು ಬಂದಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೋರ್ವರು ತಿಳಿಸಿದರು.
ವಿವಿಧೆಡೆಗಳಿಂದ ತರಿಸಲಾಗಿದ್ದ 10 ಅಗ್ನಿಶಾಮಕ ವಾಹನಗಳು ಗಂಟೆಗಟ್ಟಲೆ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿವೆ
ಪರಿಹಾರ ಘೋಷಣೆ: ತಮಿಳುನಾಡು ಮುಖ್ಯಮಂತ್ರಿ ಇ.ಪಳನಿಸ್ವಾಮಿ ಅವರು ಮೃತರ ಕುಟುಂಬಗಳಿಗೆ ತಲಾ ಮೂರು ಲಕ್ಷ ರೂ. ಮತ್ತು ತೀವ್ರವಾಗಿ ಗಾಯಗೊಂಡವರಿಗೆ ಒಂದು ಲಕ್ಷ ರೂ.ಪರಿಹಾರವನ್ನು ಘೋಷಿಸಿದ್ದಾರೆ. ಕೇಂದ್ರವು ಮೃತರ ಕುಟುಂಬಗಳಿಗೆ ತಲಾ ಎರಡು ಲ.ರೂ.ಮತ್ತು ಗಾಯಾಳುಗಳಿಗೆ 50,000 ರೂ.ಪರಿಹಾರವನ್ನು ಘೋಷಿಸಿದೆ.