26ನೇ ರಾಷ್ಟ್ರೀಯ ಯುವಜನೋತ್ಸವ. ಜ.12 ರ ಪ್ರಧಾನಮಂತ್ರಿಗಳ ಕಾರ್ಯಕ್ರಮ ಹಾಗೂ ಯುವಜನೋತ್ಸವ ಯಶಸ್ವಿಯಾಗಿ ಸಂಘಟಿಸಿ : ಸಿಎಂ ಬಸವರಾಜ ಬೊಮ್ಮಾಯಿ

Source: SO News | By Laxmi Tanaya | Published on 10th January 2023, 10:12 PM | State News |

ಧಾರವಾಡ : ಕರ್ನಾಟಕದ ಕೀರ್ತಿ ಹೆಚ್ಚಿಸಲು ಮತ್ತು ರಾಜ್ಯದ ವೈಶಿಷ್ಠ್ಯತೆಯನ್ನು ರಾಷ್ಟ್ರಕ್ಕೆ ಪರಿಚಯಿಸಲು ಉತ್ತಮ ಅವಕಾಶವಾಗಿರುವ 26ನೇ ರಾಷ್ಟ್ರೀಯ ಯುವಜನೋತ್ಸವವನ್ನು ಯಶಸ್ವಿಯಾಗಿ ಸಂಘಟಿಸಬೇಕು. ಜನವರಿ 12 ರಂದು ಹುಬ್ಬಳ್ಳಿಯಲ್ಲಿ ಆಯೋಜಿಸಿರುವ ಪ್ರಧಾನ ಮಂತ್ರಿಗಳಿಂದ ಯುವಜನೋತ್ಸವ ಉದ್ಘಾಟನಾ ಕಾರ್ಯಕ್ರಮವು ಅತ್ಯಂತ ಶಿಸ್ತು ಮತ್ತು ಯಾವುದೇ ಗೊಂದಲಗಳಿಗೆ ಅವಕಾಶವಾಗದಂತೆ ಸಂಘಟಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

 ಅವರು  ಧಾರವಾಡ ಸರ್ಕಿಟ್ ಹೌಸ್‍ನಲ್ಲಿ ರಾಷ್ಟ್ರೀಯ ಯುವಜನೋತ್ಸವದ ಸಿದ್ಧತೆಗಳ ಕುರಿತು ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ಜರುಗಿಸಿ ಮಾತನಾಡಿದರು. 

 ಜನವರಿ 12 ರಂದು ಸಾಯಂಕಾಲ ಹುಬ್ಬಳ್ಳಿಯ ರೈಲ್ವೆ ಮೈದಾನದಲ್ಲಿ ಜರುಗುವ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಗಳು ಭಾಗವಹಿಸುತ್ತಿರುವುದರಿಂದ ಸೂಕ್ತ ಭದ್ರತೆ ಹಾಗೂ ಅಗತ್ಯ ಸಿದ್ಧತೆಗಳನ್ನು ಪೂರ್ಣ ಪ್ರಮಾಣದಲ್ಲಿ ಮಾಡಿಕೊಳ್ಳಬೇಕು. ಕಾರ್ಯಕ್ರಮ ವೇದಿಕೆ ನಿರ್ಮಾಣ, ನಿರಂತರ ವಿದ್ಯುತ್ ಸರಬರಾಜು, ಧ್ವನಿವರ್ಧಕ, ಆಸನ ವ್ಯವಸ್ಥೆಗಳನ್ನು ನಿರ್ದಿಷ್ಟ ಶಿಷ್ಟಾಚಾರದಂತೆ ಮಾಡಿಕೊಳ್ಳಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.

 ಪ್ರಧಾನ ಮಂತ್ರಿಗಳೇ ಯುವಜನೋತ್ಸವವನ್ನು ಉದ್ಘಾಟಿಸುತ್ತಿರುವುದರಿಂದ ಧಾರವಾಡ ಜಿಲ್ಲೆಯೂ ಸೇರಿದಂತೆ ಸುತ್ತಲಿನ ಜಿಲ್ಲೆಗಳ ಯುವಕರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಯುವಸೇವಾ ಪಾಸ್ ಮೂಲಕ  30 ಸಾವಿರಕ್ಕೂ ಹೆಚ್ಚು ಯುವಕ-ಯುವತಿಯರು ಆ್ಯಪ್ ಮೂಲಕ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಕೊಂಡಿದ್ದು, ಹೆಚ್ಚಿನ ಜನದಟ್ಟಣೆ ಆಗುವ ಸಾಧ್ಯತೆ ಇದೆ. ಆದ್ದರಿಂದ ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಅಗತ್ಯ ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗಳು ಮಹಾನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದರು.

 ಕಾರ್ಯಕ್ರಮಕ್ಕೆ ಆಗಮಿಸುವ ಯುವಕರಿಗೆ ಹಾಗೂ ಸಾರ್ವಜನಿಕರಿಗೆ ಅಗತ್ಯವಿರುವ ಕುಡಿಯುವ ನೀರು, ಉಪಾಹಾರ ಮತ್ತು ಶೌಚಾಲಯಗಳ ಸೌಲಭ್ಯವನ್ನು ಕಲ್ಪಿಸಬೇಕು. ಕಾರ್ಯಕ್ರಮ ನಡೆಯುವ ಸ್ಥಳದ ಸಮೀಪದ ಸ್ಥಳಗಳಲ್ಲಿ ಉಪಾಹಾರ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಮುಖ್ಯಮಂತ್ರಿಗಳು ಜಿಲ್ಲಾಡಳಿತಕ್ಕೆ ನಿರ್ದೇಶಿಸಿದರು. 

 ಜನವರಿ 12 ರಿಂದ 16 ರ ವರೆಗೆ ಜರುಗುವ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮವು ಯಾವುದೇ ಗೊಂದಲ, ಲೋಪ ಮತ್ತು ಸೌಲಭ್ಯಗಳ ಕೊರತೆಯಾಗದಂತೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಅಗತ್ಯವಿರುವ ಸಿಬ್ಬಂದಿಗಳನ್ನು ನೇಮಿಸಿಕೊಂಡು ರಾಷ್ಟ್ರದಾದ್ಯಂತ ವಿವಿಧ ರಾಜ್ಯಗಳಿಂದ ಆಗಮಿಸುವ ಅತಿಥಿಗಳಿಗೆ ಯಾವುದೇ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. ಸ್ಪರ್ಧಾಳುಗಳು ಮತ್ತು ಅತಿಥಿಗಳು ಉಳಿದುಕೊಳ್ಳುವ, ಸಂಚರಿಸುವ ಮತ್ತು ಕಾರ್ಯಕ್ರಮ ಸ್ಥಳಗಳಲ್ಲಿ ಸ್ವಯಂ ಸೇವಕರನ್ನು, ಪೊಲೀಸ್‍ರನ್ನು ನೇಮಿಸಿ ಜನದಟ್ಟಣೆಯಾಗದಂತೆ ಮುಂಜಾಗೃತಾ ಕ್ರಮಗಳನ್ನು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗಳು ಹೇಳಿದರು.

ಯುವಜನೋತ್ಸವದ ಸ್ಪರ್ಧೆ ಮತ್ತು ಕಾರ್ಯಕ್ರಮಗಳು ನಗರದ ವಿವಿಧ ಸ್ಥಳಗಳಲ್ಲಿ ಜರುಗುವುದರಿಂದ ಸರಿಯಾದ ಸಮಯಕ್ಕೆ ಊಟ, ಉಪಾಹಾರ, ಚಹಾ ಮತ್ತು ನೀರಿನ ವ್ಯವಸ್ಥೆಯನ್ನು ಮಾಡಬೇಕು. ತಡರಾತ್ರಿಯವರೆಗೆ ಕಾರ್ಯಕ್ರಮಗಳು ನಡೆಯುವುದರಿಂದ ಅತಿಥಿಗಳು ಸೇರಿದಂತೆ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕೆಂದು ಮುಖ್ಯಮಂತ್ರಿಗಳು ತಿಳಿಸಿದರು. 

ಧಾರವಾಡದ ಸಾಹಿತ್ಯ, ಸಂಸ್ಕೃತಿ, ಕಲೆ, ಚಿತ್ರಕಲೆ ಮತ್ತು ಜಾನಪದ ಸಿರಿಯನ್ನು ರಾಷ್ಟ್ರವ್ಯಾಪಿ ಪ್ರಚುರಪಡಿಸಲು ರಾಷ್ಟ್ರೀಯ ಯುವಜನೋತ್ಸವ ಒಂದು ಉತ್ತಮ ವೇದಿಕೆಯಾಗಿದೆ. ಧಾರವಾಡ ಜಿಲ್ಲಾಡಳಿತ ಮತ್ತು ಇಲ್ಲಿನ ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಸಂಘಟಿಸಬೇಕು. ಯುವಜನೋತ್ಸವಕ್ಕೆ ಈಗಾಗಲೇ ರಾಜ್ಯ ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡಿದೆ. ಇನ್ನೂ ಹೆಚ್ಚಿನ ಅನುದಾನ ಅಗತ್ಯವಿದ್ದಲ್ಲಿ ಬಿಡುಗಡೆ ಮಾಡಲಾಗುವುದು. ಒಟ್ಟಾರೆಯಾಗಿ ಸಮ್ಮೇಳನವನ್ನು ಸ್ಮರಣೀಯವಾಗಿ ಸಂಘಟಿಸುವುದು ನಿಮ್ಮ ಜವಾಬ್ದಾರಿ ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಯುವಜನೋತ್ಸವ ಹಾಗೂ ಪ್ರಧಾನ ಮಂತ್ರಿಗಳ ಕಾರ್ಯಕ್ರಮದ ಕುರಿತು ಸಿದ್ಧತೆಗಳನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು. 

ವಿವಿಧ ರಾಜ್ಯಗಳಿಂದ ಇವತ್ತಿನ (ಜ.10) ವರೆಗೆ ಒಟ್ಟು 5,702 ಜನ ಅತಿಥಿಗಳು ಜಿಲ್ಲೆಗೆ ಆಗಮಿಸಿದ್ದಾರೆ. ನಾಳೆ ಸಂಜೆಯೊಳಗೆ ಬಹುತೇಕ ಸ್ಪರ್ಧಾಳುಗಳು ಮತ್ತು ಅತಿಥಿಗಳು ಆಗಮಿಸುವ ನಿರೀಕ್ಷೆ ಇದೆ. ಯುವಜನೋತ್ಸವದ ಭಾಗಿದಾರರ ಸುಗಮ ಸಂಚಾರಕ್ಕಾಗಿ 250 ಕ್ಕೂ ಹೆಚ್ಚು ಬಸ್‍ಗಳನ್ನು ವ್ಯವಸ್ಥೆ ಮಾಡಲಾಗಿದೆ. ಮತ್ತು 150 ಕ್ಕೂ ಹೆಚ್ಚು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. 

ಯುವಜನೋತ್ಸವದ ವಿವಿಧ ಕಾರ್ಯಕ್ರಮ ಹಾಗೂ ಕಾರ್ಯಚಟುವಟಿಕೆಗಳಿಗಾಗಿ ನಗರದ ಐದು ಆಡಿಟೋರಿಯಂ ಮತ್ತು ಏಳು ಮೈದಾನಗಳನ್ನು ಗುರುತಿಸಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅತಿಥಿಗಳ ಮತ್ತು ಸ್ಪರ್ಧಾಳುಗಳ ಅನುಕೂಲಕ್ಕಾಗಿ ಸಹಾಯವಾಣಿ ಸಂಖ್ಯೆಗಳನ್ನು ನೀಡಿ ಕಂಟ್ರೋಲ್ ಮತ್ತು ಕಮಾಂಡಿಂಗ್ ಘಟಕವನ್ನು ಜಿಲ್ಲಾಧಿಕಾರಿಗಳ ಕಚೇರಿ ಹತ್ತಿರ ಈಗಾಗಲೇ ಸ್ಥಾಪಿಸಲಾಗಿದೆ. 

ಕಾರ್ಯಕ್ರಮ ಸ್ಥಳ, ಅತಿಥಿಗಳು ವಾಸಿಸುವ ವಸತಿ ನಿಲಯಗಳಲ್ಲಿ ಸ್ವಚ್ಛತೆ ಹಾಗೂ ನೈರ್ಮಲ್ಯಕ್ಕೆ ಆಧ್ಯತೆ ನೀಡಲಾಗಿದೆ. ಶುದ್ಧ ಕುಡಿಯುವ ನೀರು, ಉತ್ತಮ ಗುಣಮಟ್ಟದ ಆಹಾರ, ಉಪಾಹಾರ ಪೂರೈಸಲು ಕ್ರಮ ವಹಿಸಲಾಗಿದೆ. ಸರ್ಕಾರಿ ಕಟ್ಟಡಗಳಿಗೆ ಆಯಾ ಇಲಾಖೆಗಳೇ ದೀಪಾಲಂಕಾರ ಮಾಡಿದ್ದು, ಅವಳಿ ನಗರದ ಪ್ರಮುಖ ರಸ್ತೆ, ವೃತ್ತಗಳು, ಮರಗಳು ಸೇರಿದಂತೆ ಮುಖ್ಯವಾಗಿ ಜನಸಂದಣಿ ಹೆಚ್ಚಿರುವ ಸ್ಥಳಗಳಲ್ಲಿ ಹೆಸ್ಕಾಂದಿಂದ ಉಚಿತವಾಗಿ ದೀಪಾಲಂಕಾರ ಮಾಡಲು ಕ್ರಮ ವಹಿಸಲಾಗಿದೆ. ಕಾಲೇಜು ರಸ್ತೆಯ ಮುಖ್ಯ ಗೋಡೆಗಳಿಗೆ ಪ್ರಧಾನಿಯವರ ಆಶಯದ ಯೂಥ್ ಥೀಮ್ ಇರುವ ಗೋಡೆ ಚಿತ್ರಗಳನ್ನು ಬಿಡಿಸಲಾಗುತ್ತಿದೆ. ಯುವಜನೋತ್ಸವದ ಯಶಸ್ವಿಗೆ ಸಾರ್ವಜನಿಕ ಸಹಭಾಗಿತ್ವ ಸಾಧಿಸಲು ವಿವಿಧ ಖಾಸಗಿ ಕಂಪನಿಗಳು ವಸ್ತು ಸ್ವರೂಪದ ಕಾಣಿಕೆಗಳನ್ನು ನೀಡಿದ್ದು, ಮುಖ್ಯವಾಗಿ ಸ್ವಾಗತ ಕಿಟ್ ತಯಾರಿಸುವಲ್ಲಿ ಸರ್ಕಾರೇತರ ಸಂಸ್ಥೆಗಳ ನೆರವು ಪಡೆಯಲಾಗಿದೆ ಎಂದು ಅವರು ಹೇಳಿದರು. 

ಅತಿಥಿ ಹಾಗೂ ಸ್ಪರ್ಧಾಳುಗಳ ಆರೋಗ್ಯ ಸುರಕ್ಷತೆ ದೃಷ್ಟಿಯಿಂದ ಕರ್ನಾಟಕ ಕಾಲೇಜು, ಕರ್ನಾಟಕ ವಿಶ್ವವಿದ್ಯಾಲಯ ಮತ್ತು ಕೃಷಿ ವಿಶ್ವವಿದ್ಯಾಲಯದಲ್ಲಿ ವಿಶೇಷ ಮೆಡಿಕಲ್ ಸೆಂಟರ್‍ಗಳನ್ನು ತೆರೆಯಲು ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. 

ಮಹಾನಗರ ಪೊಲೀಸ್ ಆಯುಕ್ತ ರಮಣ ಗುಪ್ತಾ ಅವರು ಮಾತನಾಡಿ, ಪ್ರಧಾನ ಮಂತ್ರಿಗಳಿಂದ ಜರುಗುವ ಯುವಜನೋತ್ಸವ ಉದ್ಘಾಟನಾ ಕಾರ್ಯಕ್ರಮಕ್ಕೆ ಸೂಕ್ತ ಸಂಚಾರಿ ವ್ಯವಸ್ಥೆ ಮತ್ತು ಪೊಲೀಸ್ ಬಂದೋಬಸ್ತ್ ಮಾಡಲು ಅಗತ್ಯ ಕೈಗೊಳ್ಳಲಾಗಿದೆ. ಜಿಲ್ಲೆಯಿಂದ ಒಂದು ಸಾವಿರ ಹಾಗೂ ಪಕ್ಕದ ಜಿಲ್ಲೆಗಳಿಂದ 1,500 ಸೇರಿದಂತೆ ಒಟ್ಟು 2,500 ಪೊಲೀಸ್ ಹಾಗೂ ಅಧಿಕಾರಿಗಳನ್ನು ಸೂಕ್ತ ಭದ್ರತೆಗಾಗಿ ನೇಮಿಸಲಾಗುತ್ತಿದೆ. 

ಸಂಚಾರ ದಟ್ಟಣೆಯಾಗದಂತೆ ಮುಂಜಾಗೃತವಾಗಿ ಸಂಚಾರ ದಟ್ಟಣೆಯ ಮಾರ್ಗಗಳನ್ನು ಗುರುತಿಸಿ, ವಾಹನ ಸಂಚಾರಕ್ಕೆ ಅಗತ್ಯ ನಿರ್ಬಂಧ ಮತ್ತು ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ. ಕಾರ್ಯಕ್ರಮ ಜರುಗುವ ಸ್ಥಳಕ್ಕೆ ತಲುಪಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬ್ಯಾರಿಕೇಡ್‍ಗಳನ್ನು ಅಳವಡಿಸಿ, ಸೂಕ್ತ ತಪಾಸಣೆಯೊಂದಿಗೆ ತೆರಳುವಂತೆ ಮಾಡಲಾಗುತ್ತಿದೆ. 

ಒಟ್ಟಾರೆಯಾಗಿ ಹುಬ್ಬಳ್ಳಿಯಲ್ಲಿ ಜರುಗುವ ಪ್ರಧಾನಮಂತ್ರಿಗಳ ಕಾರ್ಯಕ್ರಮ ಮತ್ತು ಧಾರವಾಡದಲ್ಲಿ ನಡೆಯುವ ರಾಷ್ಟ್ರೀಯ ಯುವಜನೋತ್ಸವದಲ್ಲಿ ಸಂಚಾರ ದಟ್ಟಣೆ, ಯಾವುದೇ ತೊಂದರೆಯಾಗದಂತೆ ಸೂಕ್ತ ಭದ್ರತೆಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು. 

ಸಭೆಯಲ್ಲಿ ಯುವಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ. ನಾರಾಯಣಗೌಡ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ, ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರಾದ ಅಮೃತ ದೇಸಾಯಿ, ಅರವಿಂದ ಬೆಲ್ಲದ, ಮಹಾಪೌರ ವೀರೇಶ ಅಂಚಟಗೇರಿ, ಕರ್ನಾಟಕ ರಾಜ್ಯ ಜಂಗಲ್ ಲಾಡ್ಜ್‍ಸ್ ಮತ್ತು ರೆಸಾರ್ಟ್‍ನ ಅಧ್ಯಕ್ಷ ರಾಜೇಶ ಕೋಟೇನ್ನವರ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಮುಲ್ಲೈ ಮುಹಿಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ್, ಜಿಲ್ಲಾಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುರೇಶ್ ಇಟ್ನಾಳ, ನೆಹರು ಯುವ ಕೇಂದ್ರದ ರಾಜ್ಯ ನಿರ್ದೇಶಕ ನಟರಾಜ, ಕವಿವಿ ಕುಲಪತಿ ಪ್ರೊ: ಕೆ.ಬಿ. ಗುಡಸಿ, ಕುಲಸಚಿವ ಯಶಪಾಲ್ ಕ್ಷೀರಸಾಗರ, ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ.ಪಿ.ಎಲ್. ಪಾಟೀಲ, ಕುಲಸಚಿವ ಶಿವಾನಂದ ಕರಾಳೆ, ಕೆಎಸ್‍ಆರ್‍ಟಿಸಿ ಎಂಡಿ ಭರತ್, ಹೆಸ್ಕಾಂ ಎಂಡಿ ಭಾರತಿ, ಸ್ಮಾರ್ಟ್ ಸಿಟಿ ಎಂಡಿ ಪ್ರಿಯಾಂಗಾ, ಮಹಾನಗರ ಪಾಲಿಕೆಯ ಆಯುಕ್ತ ಡಾ. ಗೋಪಾಲಕೃಷ್ಣ ಬಿ., ಉಪ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವೃಷ್ಣಿ, ಉಪ ಪೊಲೀಸ್ ಆಯುಕ್ತರಾದ ಸಾಹಿಲ್ ಬಾಗ್ಲಾ, ಡಾ.ಗೋಪಾಲ ಬ್ಯಾಕೋಡ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಡಾ: ಮುರಳಿಧರ ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...