ಗಂಗೊಳ್ಳಿಯಲ್ಲಿ ಭೀಕರ ಅಗ್ನಿ ದುರಂತ; 9ಅಕ್ಕೂ ಅಧಿಕ ಮೀನುಗಾರಿಕಾ ಬೋಟ್‌ಗಳು ಬೆಂಕಿಗಾಹುತಿ; 10 ಕೋ.ರೂ.ಗೂ ಅಧಿಕ ನಷ್ಟ; 3 ಬೈಕ್‌ಗಳೂ ಭಸ್ಮ

Source: SO News | By MV Bhatkal | Published on 13th November 2023, 12:43 PM | Coastal News | Don't Miss |

ಕುಂದಾಪುರ: ಗಂಗೊಳ್ಳಿಯ ಮ್ಯಾಂಗನೀಸ್ ರಸ್ತೆಯ ವಾರ್ಪ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಲಂಗರು ಹಾಕಿದ್ದ ಒಂಭತ್ತಕ್ಕೂ ಅಧಿಕ ಮೀನುಗಾರಿಕಾ ಬೋಟ್‌ಗಳು, ದೋಣಿ, ದ್ವಿಚಕ್ರ ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಇದರಿಂದ ಸುಮಾರು 10 ಕೋಟಿ ರೂ.ಗೂ ಅಧಿಕ ಮೊತ್ತ ನಷ್ಟವಾಗಿರುವ ಬಗ್ಗೆ ವರದಿಯಾಗಿದೆ.

ಮಳೆಗಾಲಕ್ಕೂ ಮೊದಲು ಲಂಗರು ಹಾಕಿದ್ದ ಬೋಟೊಂದರಲ್ಲಿ ಇಂದು ಬೆಳಗ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿತೆನ್ನಲಾಗಿದೆ. ಬೆಂಕಿಯ ಕೆನ್ನಾಲಿಗೆ ಒಂದಕ್ಕೊಂದು ತಾಗಿಸಿಕೊಂಡು ನಿಲ್ಲಿಸಿದ್ದ ಬೋಟ್ ಗಳಿಗೆ ವ್ಯಾಪಿಸಿದ್ದರಿಂದ ಹಲವು ಬೋಟ್‌ಗಳು ಬೆಂಕಿಗೆ ಆಹುತಿಯಾಗಿವೆ.

ಬೆಂಕಿ ಅವಘಡದಿಂದ ಸುಟ್ಟ 9 ಬೋಟ್‌ಗಳಲ್ಲಿ ಪರ್ಸಿನ್, 370 ಮೊದಲಾದ ದುಬಾರಿ ಬೋಟ್‌ ಗಳಿದ್ದು ಉಳಿದಂತೆ ಸಣ್ಣ ದೋಣಿಗಳು, ಬಲೆಗಳು, ವಾರ್ಪ್ ಪ್ರದೇಶದಲ್ಲಿ ಶೆಡ್‌ನಲ್ಲಿ ಇರಿಸಿದ್ದ ಮೂರಕ್ಕೂ ಅಧಿಕ ಬೈಕ್‌ಗಳ ಸಹಿತ ವಿವಿಧ ಪರಿಕರಗಳು ಸುಟ್ಟು ಹೋಗಿವೆ ಎಂದು ಮೂಲಗಳು ತಿಳಿಸಿವೆ.

ಗಂಗೂಳ್ಳಿಯಲ್ಲಿ ನಡೆದ ಬೆಂಕಿ ಅನಾಹುತದ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಿಂದ ಸಂಪೂರ್ಣ ಮಾಹಿತಿ ಪಡೆದು, ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಿದ್ದೇನೆ. ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ವೈದ್ಯರೊಂದಿಗೂ ಮಾತನಾಡಿದ್ದೇನೆ.
ಲಕ್ಷ್ಮೀ ಹೆಬ್ಬಾಳಕರ್, ಉಸ್ತುವಾರಿ ಸಚಿವರು, ಉಡುಪಿ ಜಿಲ್ಲೆ

ಪ್ರಾಥಮಿಕ ಮಾಹಿತಿ ಪ್ರಕಾರ ಶ್ರೀಗುರು, ಮೂಕಾಂಬಿಕಾ, ಪ್ರಿಯದರ್ಶಿನಿ, ಯಕ್ಷೇಶ್ವರಿ, ಶ್ರೀಮಂಜುನಾಥ, ಸೀ ಫರ್ಲ್, ಮಧುಶ್ರೀ, ಗುರುಪ್ರಸಾದ್, ಜಲರಾಣಿ ಹೆಸರಿನ ಬೋಟುಗಳು ಅಗ್ನಿಗಾಹುತಿಯಾಗಿವೆ. ಅಣ್ಣಪ್ಪ ಸ್ವಾಮಿ ಹೆಸರಿನ ದೋಣಿಗೆ ಸಂಬಂಧಿಸಿದ 50 ಲಕ್ಷ ರೂ. ಮೌಲ್ಯದ ಬಲೆ ಸೆಟ್ ಹಾಗೂ ಒಂದಷ್ಟು ಸಣ್ಣ ದೋಣಿಗಳು ಹಾನಿಗೀಡಾಗಿವೆ ಎಂದು ತಿಳಿದುಬಂದಿದೆ. ಈ ದುರಂತದಿಂದ ಮೇಲ್ನೋಟಕ್ಕೆ 10 ಕೋಟಿ ರೂ.ಗೂ ಅಧಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಬೆಂಕಿ ನಂದಿಸುವ ಕಾರ್ಯಾಚರಣೆಗೆ ಹರಸಾಹಸ:
ಬೆಂಕಿ ದುರಂತ ಸಂಭವಿಸಿದ ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಈ ಮಧ್ಯೆ ಸ್ಥಳೀಯರೇ ಸೇರಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದರು.

ಬಳಿಕ ಬೆಳಗ್ಗೆ 10:30ರ ಸುಮಾರಿಗೆ ಕುಂದಾಪುರ, ಬೈಂದೂರು, ಉಡುಪಿಯಿಂದ ಅಗ್ನಿಶಾಮಕ ದಳದ ಮೂರು ವಾಹನಗಳು ಆಗವಿಮಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿತು. ಬೆಂಕಿ ಭೀಕರವಾಗಿ ಹರಡುತ್ತಿದ್ದ ಪರಿಣಾಮ ಅಗ್ನಿಶಾಮಕದಳ ವಾಹನಗಳಲ್ಲಿದ್ದ ನೀರು ಸಾಕಾಗದೆ, 4 ಪಂಸ್‌ ಸೆಟ್‌ಗಳ ಮೂಲಕ ನದಿಯಿಂದ ನೀರು ಬಿಟ್ಟು ನಂದಿಸುವ ಕಾರ್ಯ ಮಾಡಲಾಯಿತು. ಇಲ್ಲದಿದ್ದರೆ ಇಡೀ ಪ್ರದೇಶವೇ ಸುಟ್ಟು ಬೂದಿಯಾಗುವ ಸಂಭವವಿತ್ತು ಎಂದು ಸ್ಥಳೀಯ ಮೀನುಗಾರರು ಹೇಳುತ್ತಾರೆ.

ಮೀನುಗಾರರು, ಸಾರ್ವಜನಿಕರು, ಪೊಲೀಸರು ಖಾಸಗಿ ವಾಹನಗಳಲ್ಲಿ ಟ್ಯಾಂಕ್ ಮೂಲಕ ನೀರು ಬಳಸಿ ಅಗ್ನಿ ಹತೋಟಿಗೆ ತರಲು ಹರಸಾಹಸ ಪಟ್ಟರು. ಇದರಲ್ಲಿ ಸರ್ವಧರ್ಮೀಯರು ಕೈಜೋಡಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು. ಅಪರಾಹ್ನ 2:30ರ ಸುಮಾರಿಗೆ ಬೆಂಕಿ ನಿಯಂತ್ರಣಕ್ಕೆ ಬಂತು. ಸುಮಾರು ನಾಲ್ಕು ಗಂಟೆಗಳ ಕಾರ್ಯಾಚರಣೆಯಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.

ಸಾವಿರಾರು ಮಂದಿ ಜಮಾವಣೆ: ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಲೇ ಸಾವಿರಾರು ಮಂದಿ ಘಟನಾ ಸ್ಥಳಕ್ಕೆ ಆಗಮಿಸಿದರು. ಟ್ರಾಫಿಕ್ ಸಮಸ್ಯೆ ತಪ್ಪಿಸಲು ಮ್ಯಾಂಗನೀಸ್ ರಸ್ತೆ ಪ್ರವೇಶದಲ್ಲಿ ಬ್ಯಾರಿಕೇಡ್‌ಗಳನ್ನು ಅಳವಡಿಸಿ, ಪೊಲೀಸರನ್ನು ನಿಯೋಜಿಸಲಾಗಿತ್ತು.

ಸ್ಥಳಕ್ಕೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಡಿ, ಉಡುಪಿ ಶಾಸಕ ಯಶ್ವಾಲ್ ಸುವರ್ಣ ಭೇಟಿ ನೀಡಿ ಮೀನುಗಾರರಿರೊಂದಿಗೆ ಚರ್ಚೆ ನಡೆಸಿ ದುರಂತದ ಕುರಿತು ಮಾಹಿತಿ ಪಡೆದುಕೊಂಡರು.

ಅದೇರೀತಿ ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್., ಡಿವೈಎಸ್ಪಿ ಕೆ.ಯು.ಬೆಳ್ಳಿಯಪ್ಪ, ಬೈಂದೂರು ವೃತ್ತ ನಿರೀಕ್ಷಕ ಸವಿತ್ರ ತೇಜ್, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕಿ ಅಂಜನಾದೇವಿ, ಗಂಗೊಳ್ಳಿ ಠಾಣಾ ಪೊಲೀಸರು, ಕರಾವಳಿ ಕಾವಲು ಪಡೆ, ಕಂದಾಯ, ಮೆಸ್ಕಾಂ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದುರಂತದ ಬಗ್ಗೆ ತನಿಖೆ:
ಘಟನೆ ಬಗ್ಗೆ ಪೊಲೀಸ್ ಮತ್ತು ಮೀನುಗಾರಿಕೆ ಇಲಾಖೆ ಪ್ರತ್ಯೇಕ ತನಿಖೆ ನಡೆಸುತ್ತಿದೆ. ಸಾವಿರಾರು ಕೋಟಿ ರೂ. ಆಸ್ತಿ ಬಂದರು ಪ್ರದೇಶಗಳಲ್ಲಿ ಇರುವುದರಿಂದ ಬಂದರಿನಲ್ಲಿ ಇಲಾಖೆ ಅಥವಾ ವಿಮಾ ಕಂಪೆನಿ ಮೂಲಕ ಪಂಪ್ ಹೌಸ್ ನಿರ್ಮಾಣದ ಯೋಚನೆಮಾಡಿ ಕ್ರಮಕೈಗೊಳ್ಳಲಾಗುವುದು. ಬಂದರು ಪ್ರದೇಶವನ್ನು ಮೀನುಗಾರಿಕೆ ಮತ್ತು ಬಂದರು ಇಲಾಖೆ ನೋಡಿಕೊಳ್ಳಬೇಕಾಗಿದೆ. ಪಂಚಾಯತ್‌ಗೆ ಇದರಲ್ಲಿ ಯಾವುದೇ ಆದಾಯ ಇಲ್ಲ. ಪಂಚಾಯತ್ ವಸೂಲಿ ಮಾಡುತ್ತಿದ್ದರೆ ಅವರೇ ಹೊಣೆಗಾರರಾಗಿರುತ್ತಾರೆ. ಮುಂದಿನ ದಿನಗಳಲ್ಲಿ ಈ ವ್ಯವಸ್ಥೆಯನ್ನು ಸರಿಪಡಿಸುವ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ.
(ಮಂಕಾಳ ವೈದ್ಯ, ಬಂದರು ಹಾಗೂ ಮೀನುಗಾರಿಕಾ ಸಚಿವ)

Read These Next