ಧಾರವಾಡ: ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಸ್ವಾತಂತ್ರೊö್ಯತ್ಸವ ಸಂದೇಶದಲ್ಲಿ ದೇಶದಾದ್ಯಂತ ಮರುಬಳಕೆಗೆ ಬಾರದ ಪ್ಲಾಸ್ಟಿಕ್ನ್ನು ಸಂಪೂರ್ಣವಾಗಿ ನಿಷೇಧಿಸಲು ಕರೆ ನೀಡಿರುವ ಹಿನ್ನೆಲೆಯಲ್ಲಿ ಬರುವ ಅಕ್ಟೊಬರ್ 1 ರಿಂದ ಜಿಲ್ಲೆಯಾದ್ಯಂತ ಪ್ಲಾಸ್ಟಿಕ್ ನಿಷೇಧ ಜಾರಿಗೊಳಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಪಣ ತೊಡಬೇಕು. ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ಕೈಬಿಟ್ಟು ಈ ಆಂದೋಲನಕ್ಕೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ಪೂರ್ವಭಾವಿ ಸಭೆ ಉದ್ದೆಶಿಸಿ ಅವರು ಮಾತನಾಡಿದರು. ಅಕ್ಟೊಬರ್ 1 ರಿಂದ ಕಡ್ಡಾಯವಾಗಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಕೈಬಿಡಬೇಕು. ಕುಡಿಯುವ ನೀರಿನ ಬಾಟಲ್ಗಳನ್ನು ಬಳಸದೇ ಸ್ಟಿಲ್ ಲೋಟಗಳು ಅಥವಾ ಕಾಗದದ ಲೋಟಗಳನ್ನು ಬಳಸಬೇಕು. ಹೂಗುಚ್ಚಗಳಿಗೆ ಪ್ಲಾಸ್ಟಿಕ್ ಹೊದಿಕೆ ಹಾಕಬಾರದು. ಕಚೇರಿಯ ಆವರಣಗಳನ್ನು ಸ್ವಚ್ಛವಾಗಿಟ್ಟುಕೊಂಡು ಸುಣ್ಣ ಬಣ್ಣ ಬಳಿಸಬೇಕು. ಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆಯ ಅಧಿಕಾರಿಗಳು ಅವಳಿ ನಗರದ ಹೋಟೆಲ್, ಕಲ್ಯಾಣಮಂಟಪಗಳ ಸಮೀಕ್ಷೆ ಮಾಡಿ ಅರಿವು ಮೂಡಿಸಬೇಕು. ಹಸಿ ಕಸ, ಒಣ ಕಸ ವಿಂಗಡಣೆ ಮಾಡಿ ತ್ಯಾಜ್ಯ ಸಂಗ್ರಹಿಸಬೇಕು. ಗ್ರಾಮಪಂಚಾಯತ್ ಮಟ್ಟದಲ್ಲಿಯೂ ಇದು ಜಾರಿಗೊಳ್ಳಬೇಕು ಎಂದರು.
ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಪ್ಲಾಸ್ಟಿಕ್ ನಿಷೇಧ ಕುರಿತು ಪ್ರತಿಜ್ಞಾವಿಧಿ ಸ್ವಿಕಾರ, ಪ್ರಬಂಧ, ಚರ್ಚಾ, ಚಿತ್ರಕಲೆ, ನಾಟಕ, ರಸಪ್ರಶ್ನೆ ಸ್ಪರ್ಧೆಗಳನ್ನು ಏರ್ಪಡಿಸಿ ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳ ಗುಂಪುಗಳನ್ನು ರಚಿಸಿ, ಸಾರ್ವಜನಿಕರ ಮನೆ ಮನೆಗೆ ತೆರಳಿ ಅರಿವು ಮೂಡಿಸಬೇಕು. ಸರ್ಕಾರೇತರ ಸಂಘ ಸಂಸ್ಥೆಗಳು ಹಾಗೂ ಆಶಾ ಕಾರ್ಯಕರ್ತೆಯರ ಸಹಕಾರದೊಂದಿಗೆ ತ್ಯಾಜ್ಯ ಸಂಗ್ರಹಿಸುತ್ತಾ ಜಾಥಾಗಳನ್ನು ಆಯೋಜಿಸಬೇಕು. ಪ್ಲಾಸ್ಟಿಕ ತ್ಯಾಜ್ಯ ವಿಲೇವಾರಿ ಮಾಡಲು ವಾಹನಗಳ ವ್ಯವಸ್ಥೆ ಮಾಡಬೇಕು. ಪ್ಲಾಸ್ಟಿಕ್ ಚೀಲಗಳ ಬದಲಿಗೆ ಬಟ್ಟೆಯ ಹಾಗೂ ನಾರಿನ ಚೀಲಗಳನ್ನು ಬಳಸಲು ಪ್ರೊತ್ಸಾಹಿಸಬೇಕು. ಉದ್ಯಾನವನ, ಕೆರೆ, ಇತರೆ ಜಲಮೂಲಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ ಮಾಡಬೇಕು. ಧಾರ್ಮಿಕ ಗುರುಗಳು ಹಾಗೂ ಗಣ್ಯ ವ್ಯಕ್ತಿಗಳಿಂದ ಸಾರ್ವಜನಿಕರಿಗೆ ಸಂದೇಶ ರವಾನಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಎಲ್ಲ ಸಿಬ್ಬಂದಿಗಳಿಂದ ಒಂದುಬಾರಿ ಬಳಕೆಯಾಗುವ ಪ್ಲಾಸ್ಟಿಕ್ನ್ನು ಕಡ್ಡಾಯವಾಗಿ ನಿಷೇಧಿಸಿರುವ ಕುರಿತು ಘೋಷಣಾ ಪತ್ರ ಪಡೆಯಬೇಕು.
ಅಕ್ಟೊಬರ್ ತಿಂಗಳಿನಲ್ಲಿ ನಿರಂತರವಾಗಿ ಎಲ್ಲಾ ಗ್ರಾಮಪಂಚಾಯಿತಿ, ತಾಲೂಕು ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಜಿಲ್ಲಾಮಟ್ಟದಲ್ಲಿ ವೈವಿಧ್ಯಮಯ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ ಜನಸಾಮಾನ್ಯರಲ್ಲಿ ಪ್ಲಾಸ್ಟಿಕ್ ಬಳಕೆ ಕೈಬಿಡಲು ಮನವರಿಕೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ: ಸುರೇಶ್ ಇಟ್ನಾಳ ಮಾತನಾಡಿ, ಅವಳಿ ನಗರದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ರೂಪು-ರೇಷೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದರು.
ಅಪರ ಜಿಲ್ಲಾಧಿಕಾರಿ ಇಬ್ರಾಹಿಂ ಮೈಗೂರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕ ವಿನಾಯಕ ಪಾಲನಕರ್ ಸೇರಿದಂತೆ ಜಿಲ್ಲೆಯ ಎಲ್ಲಾ ತಹಶೀಲ್ದಾರರು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.