ಧಾರವಾಡ : ಕರ್ನಾಟಕ ವಿಶ್ವವಿದ್ಯಾಲಯ ಆವರಣದಲ್ಲಿ ಕಾಮಗಾರಿ ಅರ್ಧಕ್ಕೆ ನಿಂತಿರುವ ಅಂತರಾಷ್ಟ್ರೀಯ ಕ್ರೀಡಾಂಗಣವನ್ನು ಜಾಗತಿಕ ಗುಣಮಟ್ಟದ ಕ್ರೀಡಾಂಗಣವಾಗಿ ರೂಪಿಸಲು ಕ್ರಮ ಕೈಗೊಳ್ಳಲಾಗುವದೆಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.
ಅವರ ಕವಿವಿ ಕ್ರೀಡಾಂಗಣ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂಧಿಗೆ ಮಾತನಾಡಿದರು. ಏಷ್ಯಾ ಖಂಡದಲ್ಲಿಯೇ ಅತ್ಯಂತ ದೊಡ್ಡದಾದ ಮತ್ತು ನೈಸರ್ಗಿಕವಾಗಿರುವ ಕ್ರೀಡಾಂಗಣ ನಿರ್ಮಿಸಲು 1996 ರಲ್ಲಿಯೇ ಕಾಮಗಾರಿ ಆರಂಭಸಲಾಗಿತ್ತು. ತಾಂತ್ರಿಕ ಕಾರಣಗಳಿಂದ ಕೆಲಸ ನಿಂತಿದೆ. ಈಗ ಪುನರ್ ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದರು.
ಮುಂದಿನ ಒಂದು ವಾರದಲ್ಲಿ ಜೆಸಿಬಿ ಮೂಲಕ ಕ್ರೀಡಾಂಗಣ ಸ್ವಚ್ಛತೆ ಕಾರ್ಯ ಕೈಗೊಳ್ಳಲಾಗುವುದು. ಕ್ರೀಡಾಂಗಣ ಸೌಂದರ್ಯಿಕರಣಕ್ಕೆ ಆದ್ಯತೆ ನೀಡಲಾಗುವುದು. ಬಹು ವಿದಧ ಕ್ರೀಡೆಗಳನ್ನು ಆಡಲು ಅನುಕೂಲವಾಗುವಂತೆ ಕ್ರೀಡಾಂಗಣ ರೂಪಿಸಲಾಗುವುದು. ಹೆಚ್ಚಿನ ಅನುದಾನಕ್ಕಾಗಿ ಸರಕಾರಕ್ಕೆ ಹೊಸ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದರು.
ಈ ಸಂದರ್ಭದಲ್ಲಿ ಕವಿವಿ ಕುಲಪತಿ ಪ್ರೊ.ಕೆ.ಬಿ.ಗುಡಸಿ, ಮೌಲ್ಯಮಾಪನ ಕುಲಸಚಿವ ಪ್ರೋ.ಎನ್.ವೈ.ಮಟ್ಟಿಹಾಳ, ಕವಿವಿ ಕ್ರೀಡಾ ವಿಭಾಗದ ಮಖ್ಯಸ್ಥ ಡಾ.ಬಿ.ಎಂ.ಪಾಟೀಲ, ಮಹಾನಗರ ಪಾಲಿಕೆ ಸದಸ್ಯ ಡಾ. ಮಯೂರ ಮೋರೆ ಸೇರಿದಂತೆ ಕವಿವಿ ಅಧಿಕಾರಿಗಳು, ಕ್ರೀಡಾಪಟುಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.