ಅಗರ್ತಲಾ: ಇಲ್ಲಿನ ಬಿಜೆಪಿ ನಾಯಕ ಬಿಸ್ವಜಿತ್ ಪಾಲ್ ಎಂಬವರನ್ನು ಶನಿವಾರ ಮಧ್ಯರಾತ್ರಿ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಶನಿವಾರ ಮಧ್ಯರಾತ್ರಿ ತಮ್ಮ ಕೆಲಸ ಮುಗಿಸಿ ವಾಪಸಾಗುತ್ತಿದ್ದ ಬಿಸ್ವಜಿತ್ರನ್ನು ಬದರ್ಘಾಟ್ ಎಂಬಲ್ಲಿ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಬಿಸ್ವಜಿತ್ ಅವರನ್ನು ಎದೆಗೆ ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಅವರ ಚೀಲ ಮತ್ತು ದ್ವಿಚಕ್ರ ವಾಹನ ಘಟನಾ ಸ್ಥಳದಲ್ಲಿ ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಈವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಕೆಲವು ದಿನಗಳಿಂದ ತನ್ನನ್ನು ಯಾರೋ ಹಿಂಬಾಲಿಸುತ್ತಿದ್ದಾರೆ ಎಂದು ಬಿಸ್ವಜಿತ್ ಹೇಳಿಕೊಂಡಿದ್ದರು ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಜಮೀನಿಗೆ ಸಂಬಂಧಿಸಿದ ವಿವಾದ ಈ ಹತ್ಯೆಗೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.