ಬೆಂಗಳೂರು : ಕಲಿಕೆಯಿಂದ ಮಕ್ಕಳು ವಂಚಿತರಾಗಬಾರದೆಂಬ ಕಾರಣಕ್ಕೆ ಜಾರಿಗೆ ತಂದಿದ್ದ 'ವಿದ್ಯಾಗಮ' ಯೋಜನೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಸಚಿವ ಸುರೇಶಕುಮಾರ್ ಅವರು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ನಿರ್ದೇಶನ ನೀಡಿದ್ದಾರೆ.
ಕೋವಿಡ್-19 ನಿಂದ ಶಿಕ್ಷಕರು ಮತ್ತು ಮಕ್ಕಳ ಮೇಲೆ ಪರಿಣಾಮ ಬೀರುತ್ತಿದ್ದು, ಶಿಕ್ಷಕರ ಹಾಗೂ ಮಕ್ಕಳ ಜೀವ ಉಳಿಸಬೇಕೆಂಬ ಒತ್ತಾಯ ರಾಜ್ಯಾದ್ಯಂತ ವ್ಯಾಪಕವಾಗಿ ಕೇಳಿಬಂದಿತ್ತು. ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಕೂಡ ಬಹುತೇಕ ಅಸಮಾಧಾನ ಕೇಳಿಬಂದಿತ್ತು.
ಶಿಕ್ಷಕರು ಹಾಗೂ ಮಕ್ಕಳ ಜೀವ ಉಳಿಸಿ, ಪ್ರಾಣ ಮೊದಲು, ಕಲಿಕೆ ನಂತರ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಇದಕ್ಕೆ ವಿಪಕ್ಷಗಳ ಮತ್ತು ಆಡಳಿತ ಪಕ್ಷಗಳ ಮುಖಂಡರು ಕೂಡ ಪ್ರತಿಕ್ರೀಯಿಸಿದ್ದರು.
ಹೀಗಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ರಾಜ್ಯದಲ್ಲಿ ಜಾರಿಗೆ ತಂದಿರುವ 'ವಿದ್ಯಾಗಮ' ಕಾರ್ಯಕ್ರಮದ ಬಗ್ಗೆ ಕೆಲ ವಲಯಗಳಲ್ಲಿ ನಾನಾ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿದ್ದೇನೆ. ವಿದ್ಯಾಗಮ ಸಮಾಜ ಕೆಳಸ್ತರದ, ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ. ಆದರೆ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ-ಅಂಶಗಳ ಸ್ವೀಕಾರ ಹಾಗೂ ಅದರ ಸಮರ್ಪಕ ವಿಶ್ಲೇಷಣೆ ಪೂರ್ಣಗೊಳ್ಳುವವರೆಗೂ 'ವಿದ್ಯಾಗಮ' ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.