ಬೆಂಗಳೂರು: ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಸೇರಿ ಮೂವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ: ಬೆಡ್ ಬ್ಲಾಕಿಂಗ್ ದಂಧೆ
ಬೆಂಗಳೂರು: ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ರೆಡ್ಡಿ ಆಪ್ತ ಬಾಬು ಸೇರಿ ಮೂವರು ಆರೋಪಿಗಳ ವಿರುದ್ಧ ಸಿಸಿಬಿ ಪೊಲೀಸರು ನಗರದ 1ನೇ ಎಸಿಎಂಎಂ ಕೋರ್ಟ್ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು, ರೋಹಿತ್ ಮತ್ತು ನೇತ್ರಾವತಿ ವಿರುದ್ದ ಸಿಸಿಬಿ ಪೊಲೀಸರು ಕೋರ್ಟ್ಗೆ 150 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಆರೋಪಿಗಳು ಕೊರೋನ ಸೋಂಕಿತರಿಗೆ ಮೀಸಲಿಟ್ಟಿದ್ದ ಆಸ್ಪತ್ರೆಯ ಬೆಡ್ ಗಳನ್ನು ಬ್ಲಾಕ್ ಮಾಡಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಸಾಕ್ಷಿ ಲಭ್ಯವಾಗಿದೆ. ಗೂಗಲ್ ಪೇ, ಫೋನ್ ಪೇ ಮೂಲಕ ಹಣದ ವರ್ಗಾವಣೆ ನಡೆದಿದ್ದು, ರೋಗಿಗಳಿಂದ 18 ಸಾವಿರ, 20, 25 ಸಾವಿರ ರೂ.ಯಂತೆ ಹಣ ಪಡೆದಿದ್ದಾರೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ.
ಹಣ ಕೊಟ್ಟವರಿಗೆ ಬಾಬು ವಾರ್ ರೂಮ್ ಸಂಪರ್ಕದಿಂದ ಕೋವಿಡ್ ಬೆಡ್ ಕೊಡಿಸುತ್ತಿದ್ದ ಎಂಬ ಸಂಗತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮತ್ತೊಂದು ಪ್ರಕರಣದಲ್ಲಿ ಕೆಲವು ಆಸ್ಪತ್ರೆ ಸೇರಿದಂತೆ ಎಂಟು ಮಂದಿ ವಿರುದ್ಧ ತನಿಖೆ ನಡೆಸಲಾಗುತ್ತಿದೆ.
ಬ್ಲಾಕಿಂಗ್ ಪ್ರಕರಣವನ್ನು ಹೊರಗೆಳೆಯುವ ಸಂದರ್ಭದಲ್ಲಿ ಸಂಸದ ತೇಜಸ್ವಿ ಸೂರ್ಯ ಕೋವಿಡ್ ವಾರ್ ರೂಮ್ ಗೆ ಭೇಟಿ ನೀಡಿ ಅಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯ ಪೈಕಿ ಮುಸ್ಲಿಮ್ ಸಿಬ್ಬಂದಿಯ ಹೆಸರನ್ನು ಪ್ರಸ್ತಾಪಿಸಿ ಪ್ರಕರಣಕ್ಕೆ ಕೋಮು ಬಣ್ಣ ನೀಡಲು ಪ್ರಯತ್ನಿಸಿ ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು. ತನಿಖೆಯ ವೇಳೆ ಬಿಜೆಪಿ ಕಾರ್ಯಕರ್ತರೇ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಪಾಲ್ಗೊಂಡಿದ್ದುದು ಬೆಳಕಿಗೆ ಬಂದಿತ್ತು.