ಮುಂಬರುವ ಚುನಾವಣೆಗಳ ಮೇಲೆ ಪಶ್ಚಿಮ ಬಂಗಾಳ ಫಲಿತಾಂಶ ಪರಿಣಾಮ: ಸಿನ್ಹಾ
ಹಜಾರಿಬಾಗ್, ಜಾರ್ಖಂಡ: ಪಶ್ಷಿಮ ಬಂಗಾಳ ವಿಧಾನಸಭೆ ಚುನಾವಣೆಯ ಫಲಿತಾಂಶ ಮುಂಬರುವ ಉತ್ತರ ಪ್ರದೇಶ ವಿಧಾಸಭೆ ಹಾಗೂ 2024ರ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ಯಶವಂತ ಸಿನ್ಹಾ ಭಾನುವಾರ ಹೇಳಿದರು.
‘ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಕಳಪೆ ಸಾಧನೆಯ ನೈತಿಕ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಲೇ ರಾಜೀನಾಮೆ ನೀಡಬೇಕು. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಹಾಗೂ ರಾಜ್ಯ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಸಹ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.
‘ದೇಶದ ಜನರು ಕೇಂದ್ರದಲ್ಲಿ ನಾಯಕತ್ವ ಬದಲಾವಣೆ ಬಯಸುತ್ತಿದ್ದಾರೆ’ ಎಂದೂ ಪ್ರತಿಪಾದಿಸಿದರು.
‘ಬಿಜೆಪಿ ನಾಯಕರು ಜಾರ್ಖಂಡ ಹಾಗೂ ಇತರ ರಾಜ್ಯಗಳಿಂದ ಭಾರಿ ಸಂಖ್ಯೆಯ ಜನರನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ, ಪ್ರಚಾರ ಸಭೆಗಳನ್ನು ನಡೆಸಿದರು. ತಮಗೆ ಭಾರಿ ಜನ ಬೆಂಬಲ ಇರುವುದಾಗಿ ಹೇಳಿಕೊಂಡರು. ಆದರೆ, ಮಮತಾ ಬ್ಯಾನರ್ಜಿ ಅವರಿಗೆ ಇರುವ ಜನಬೆಂಬಲ ಫಲಿತಾಂಶದಲ್ಲಿ ವ್ಯಕ್ತವಾಗಿದೆ’ ಎಂದರು.