ಭಟ್ಕಳ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇದರ ವತಿಯಿಂದ ದಿನಾಂಕ ಸೆಪ್ಟಂಬರ್ 30ರಂದು ಮೆಗಾ ಲೋಕ್-ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಭಟ್ಕಳದ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಕೂಡಾ ಬ್ರಹತ್ ಲೋಕದಾಲತ್ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಲೋಕ್ ಅದಾಲತ್ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಇಚ್ಚಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇಲ್ಲವೇ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ಸಮಿತಿಗಳಿಗೆ ಆನ್ಲೈನ್ ಮೂಲಕ, ಈಮೇಲೆ ಮೂಲಕ ಇಲ್ಲವೇ ಖುದ್ದಾಗಿ ಹಾಜರಾಗಿ ಮಾಹಿತಿಯನ್ನು ಪಡೆದುಕೊಳ್ಳಬಹುದು. ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಕಾನೂನು ಸೇವೆಗಳ ಸಮಿತಿಯನ್ನು ಅಥವಾ ಖಾಯಂ ಜನತಾ ನ್ಯಾಯಾಲಯವನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಂಡು ಪ್ರಕರಣವನ್ನು ಬ್ರಹತ್ ಲೋಕ್ ಅದಾಲತ್ನಲ್ಲಿ ಇತ್ಯರ್ಥಪಡಿಸಿಕೊಳ್ಳಬಹುದು ಎಂದೂ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿ ಅಗತ್ಯವಾಗಿದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದು ಎಂದೂ ತಿಳಿಸಲಾಗಿದ್ದು ಸಹಾಯವಾಣಿ 1800 425 90900ಗೆ ಸಂಪರ್ಕಿಸಬಹುದು ಎಂದೂ ತಿಳಿಸಲಾಗಿದೆ.