ಭಟ್ಕಳ: ತಾಲೂಕಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಟ್ಕಳ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಶ್ಯಾಮಿಯಾನ ಸಹಿತ ಮೂಲಭೂತ ಸೌಕರ್ಯ ಮಾಡದೇ ಇರುವುದರಿಂದ ಕ್ರೀಡಾಕೂಟ ನೋಡಲು ಬಂದ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರದಂದು ನಡೆದಿದೆ.
ಇಂದಿನಿಂದ 2 ದಿನಗಳ ಕಾಲ ನಡೆಯಲಿರುವ ಭಟ್ಕಳ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಒಟ್ಟು 26 ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ಈ ಕ್ರೀಡಾ ಕೂಟದ ಉಸ್ತುವಾರಿಯನ್ನು ನವಾಯತ್ ಕಾಲೋನಿಯಲ್ಲಿರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಉರ್ದು ಶಾಲೆ ವಹಿಸಿಕೊಂಡಿದೆ. ಆದರೆ ಕ್ರೀಡಾಕೂಟದಲ್ಲಿ ಮಕ್ಕಳಿಗೆ ಸರಿಯಾದ ಸೌಲಭ್ಯವನ್ನು ಕಲ್ಪಿಸಿಲ್ಲ ಎಂದು ಕೆಲ ಪಾಲಕರು ಆಕ್ರೋಶ ವ್ಯಕ್ತಪಡಿಸಿದರು. ಬಿಸಿಲಿನ ಬೇಗೆಯಿಂದ ರಕ್ಷಿಸಿಕೊಳ್ಳಲು ಮಕ್ಕಳಿಗೆ ಸೂರಿನ ವ್ಯವಸ್ಥೆ ಮಾಡಿಲ್ಲ, ಸರಿಯಾದ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ ಎಂದು ಪಾಲಕರು ಆರೋಪಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಂಘಟಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಇಲಾಖೆಯಿಂದ ವಲಯ ಮಟ್ಟಕ್ಕೆ ಯಾವುದೇ ಹಣ ಬಿಡುಗಡೆ ಮಾಡಿಲ್ಲ. ಪ್ರತಿ ಶಾಲೆಗಳಿಂದ ೬೦೦ ರಂತೆ ದೇಣಿಗೆ ಸಂಗ್ರಹಿಸಿದ್ದು ಬಂದ ಹಣದಲ್ಲೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. ವೇದಿಕೆ ನಿರ್ಮಾಣ, ಮಕ್ಕಳಿಗೆ ಊಟದ ವ್ಯವಸ್ಥೆ ಸೇರಿದಂತೆ ಎಲ್ಲ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಿಳಿಸಿದ್ದು ಮೈದಾನದಲ್ಲಿ ಶಾಮಿಯಾನ ಹಾಕುವ ವ್ಯವಸ್ಥೆಯನ್ನು ಹಣಕಾಸಿನ ತೊಂದರೆಯಿಂದಾಗಿ ಮಾಡಲಾಗಿಲ್ಲ ಎಂದರು.
ಭಟ್ಕಳ ವಲಯಮಟ್ಟದ ಕ್ರೀಡಾ ಕೂಟದಲ್ಲಿ ೨೬ ಪ್ರಾಥಮಿಕ ಶಾಲೆಗಳು ಭಾಗವಹಿಸಿದ್ದವು. ವೈಯಕ್ತಿಕ ವಿಭಾಗದಲ್ಲಿ ೧೦೦, ೨೦೦,ಮೀ. ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ ಹಾಗೂ ಗುಂಪು ವಿಭಾಗದಲ್ಲಿ ಕಬ್ಬಡ್ಡಿ, ಖೋಖೊ, ವಾಲಿಬಾಲ್ ಮುಂತಾದ ಕ್ರೀಡೆಗಳು ಜರಗಿದವು.