ಭಟ್ಕಳ : ಪಿ.ಯು.ಸಿ. ವಿಜ್ಞಾನ ವಿಭಾಗದಲ್ಲಿ ಓದುವ ತತ್ವ ಮತ್ತು ಸಿದ್ಧಾಂತಗಳನ್ನು ತಾರ್ಕಿಕವಾಗಿ ಕಾರ್ಯಾಚರಣೆಗಿಳಿಸುವ ಕಾರ್ಯವನ್ನು ಇಂಜಿನಿಯರಿಂಗ್ ಕಾಲೇಜುಗಳು ಮಾಡುತ್ತವೆ. ಆದರೆ ಇಂದಿನ ವಿದ್ಯಾರ್ಥಿಗಳು ಕೇವಲ ಪರೀಕ್ಷೆಗೆ ಸಿದ್ಧಪಡುವುದರಿಂದ ಕಲಿತ ವಿಷಯ ವಸ್ತುವನ್ನು ತಾರ್ಕಿಕವಾಗಿ ಬಳಸುವಲ್ಲಿ ಪಿ.ಯು. ಕಾಲೇಜುಗಳೊಂದಿಗೆ ಕೈಜೋಡಿಸಿ ವಿದ್ಯಾರ್ಥಿಗಳಿಗೆ ನೆರವಾಗಲು “ಕೌಶಲ್ಯ” ಎನ್ನುವ ಹೆಸರಿನಲ್ಲಿ ಕೌಶಲ್ಯಾಭಿವೃದ್ಧಿಯ ಕಾರ್ಯಕ್ರಮವನ್ನು ಆಯೋಜನೆ ಮಾಡುತ್ತಿದ್ದೇವೆ ಎಂದು ಮಂಗಳೂರಿನ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಡಾ. ಬಿ. ಕೃಷ್ಣ ಪ್ರಭು ಹೇಳಿದರು.
ಅವರು ಭಟ್ಕಳದ ದಿ ನ್ಯೂ ಇಂಗ್ಲೀಷ್ ಪಿ.ಯು. ಕಾಲೇಜಿನಲ್ಲಿ ಪಿ.ಯು. ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಯ “ಕೌಶಲ್ಯ” ಎನ್ನುವ ಕಾರ್ಯಕ್ರಮದ ಕರಪತ್ರವನ್ನು ಬಿಡುಗಡೆ ಮಾಡಿ ಮಾತನಾಡಿದರು.
ಕೆನರಾ ಇಂಜಿನಿಯರಿಂಗ್ ಕಾಲೇಜು ಪ್ರತಿಷ್ಠಿತ ಪದವಿ ಪೂರ್ವ ಕಾಲೇಜುಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಕೌಶಲ್ಯವನ್ನು ವಿವಿಧ ಚಟುವಟಿಕೆಗಳ ಮೂಲಕ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದು ಈ ವರ್ಷ ಭಟ್ಕಳದ ದಿ ನ್ಯೂ ಇಂಗ್ಲೀಷ್ ಪಿ.ಯು. ಕಾಲೇಜನ್ನು ಆಯ್ಕೆ ಮಾಡಿಕೊಂಡಿದ್ದಕ್ಕೆ ಹೆಮ್ಮೆ ಇದೆ ಎಂದು ಹೇಳಿದರು.
ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಭಟ್ಕಳ ಎಜ್ಯುಕೇಶನ ಟ್ರಸ್ಟನ ಅಧ್ಯಕ್ಷ ಡಾ. ಸುರೇಶ್ ನಾಯಕ, ಕೆನರಾ ಇಂಜಿನಿಯರಿಂಗ್ ಕಾಲೇಜಿನ ಸಹಯೋಗದೊಂದಿಗೆ ನಮ್ಮ ವಿದ್ಯಾರ್ಥಿಗಳಿಗೆ ಆಗುವ ಸದುಪಯೋಗಗಳನ್ನು ಎದುರು ನೋಡುತ್ತಿದ್ದು, ವಿದ್ಯಾರ್ಥಿಗಳು ಈ ಒಪ್ಪಂದದ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಬೇಕೆಂದು ಹೇಳಿದರು.
ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಸುಜಿತ್ ಪೈ ಮತ್ತು ಸಂದೀಪ ಪ್ರಭು ಉಪಸ್ಥಿತರಿದ್ದರು. ಪ್ರಾಂಶುಪಾಲ ಡಾ. ವಿರೇಂದ್ರ ವಿ. ಶಾನಬಾಗ ಸ್ವಾಗತಿಸಿದರು. ಉಪನ್ಯಾಸಕಿ ಶ್ಯಾಮಲ ಕಾಮತ್ ನಿರ್ವಹಿಸಿ ವಂದಿಸಿದರು.