ವೋಟರ್ ಐಡಿ ಹಗರಣ ಮರೆಮಾಚಲು 'ಕುಕ್ಕರ್ ಸ್ಫೋಟ ನಾಟಕ': ಡಿಕೆಶಿ
ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಳಂಕವಾಗಿರುವ ಮತದಾರರ ಪಟ್ಟಿ ಪರಿಷ್ಕರಣೆ ಹಗರಣವನ್ನು ಮರೆಮಾಚುವ ಸಲುವಾಗಿ ಮಂಗಳೂ ರಿನಲ್ಲಿ ಕುಕ್ಕರ್ ಸ್ಫೋಟ ನಾಟಕ ಹುಟ್ಟುಹಾಕಲಾಯಿತು ಎಂದು ಟೀಕಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುರುವಾರ ಬೆಂಗಳೂರು ಪ್ರೆಸ್ಕ್ಲಬ್ ಹಮ್ಮಿಕೊಂಡಿದ್ದ 'ಮಾಧ್ಯಮ ಸಂವಾದ'ವನ್ನುದ್ದೇಶಿಸಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಹಗರಣ ಬೆಳಕಿಗೆ ಬಂದ ಕೆಲವೇ ದಿನಗಳಲ್ಲಿ ದಿಢೀರ್ ಸ್ಫೋಟ ನಡೆಯಿತು. ಆನಂತರ ನಾಟಕೀಯ ಬೆಳವಣಿಗೆಯಂತೆ ಖುದ್ದು ರಾಜ್ಯ ಪೊಲೀಸ್ ಮಹಾನಿರ್ದೇಶಕರೇ ಹೋಗಿ ಪರಿಶೀಲನೆ ನಡೆಸಿದರು. ಆದರೆ, ಆ ಪ್ರಕರಣ ಯಾವ ಹಂತ ತಲುಪಿದೆ ಎಂದು ಪ್ರಶ್ನಿಸಿದರು.
ಮತ್ತೊಂದೆಡೆ ಪ್ರಕರಣದ ತನಿಖೆಗೂ ಮುನ್ನವೇ ಅಧಿಕಾರಿಗಳು ಇದನ್ನು ಭಯೋತ್ಪಾದಕ ಕೃತ್ಯ ಎಂದು ಹೇಗೆ ಘೋಷಿಸಿದರು. ಇದರ ಹಿಂದೆ ಯಾವ ಉಗ್ರ, ಯಾವ ಸಂಘಟನೆ ಇದೆ? ಯಾರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದಾರೆ ಎಂಬು ವುದನ್ನು ಸಾಬೀತುಪಡಿಸಲಿ ಎಂದು ಸವಾಲು ಹಾಕಿದರು.
ಅದು ಅಲ್ಲದೆ, ಮತ ಮಾಹಿತಿ ಕಳವು ಪ್ರಕರಣವನ್ನು ಮುಚ್ಚಿಹಾಕಲು ಈ ಷಡ್ಯಂತ್ರ ರೂಪಿಸಿದ್ದಾರೆ. ಮತದಾರನ ಹಕ್ಕು ಕಳವು ಇಡೀ ದೇಶದಲ್ಲಿ ಆಗಿರಲಿಲ್ಲ. ಈಗ ಇದನ್ನು ಮಾಡಿ ರಾಜ್ಯಕ್ಕೆ ಕಪ್ಪು ಚುಕ್ಕೆ ತಂದಿದ್ದಾರೆ ಎಂದು ಸರಕಾರದ ವಿರುದ್ಧ ಅವರು ವಾಗ್ದಾಳಿ ನಡೆಸಿದರು. ಮತದಾರರ ಮಾಹಿತಿ ಕಳವು ಮಾಡಲಾಗಿದೆ. ಮನೆಗಳಿಲ್ಲದಿದ್ದರೂ ಮನೆ ಇದೆ ಎಂದು ಮತದಾರರನ್ನು ಸೇರಿಸಿ ಕಾಂಗ್ರೆಸ್ ಮತದಾರರನ್ನು ತೆಗೆದು ಹಾಕಿದ್ದಾರೆ. 8.7 ಸಾವಿರ ಬಿಎಲ್ಒ ಸ್ಥಾನವನ್ನು ಖಾಸಗಿಯವರಿಗೆ ನೀಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ ಎಂದು ಆಪಾದಿಸಿದರು.
ಈ ರೀತಿ ಚುನಾವಣೆ ಗೆಲ್ಲಬೇಕಾ? ಬಂಧಿತ ಅಧಿಕಾರಿಗಳು, ಶಾಸಕರು ಹಾಗೂ ಮಂತ್ರಿಗಳ ಆದೇಶದಂತೆ ಕೆಲಸ ಮಾಡಿದ್ದಾರೆ. ಅವರ ಮೇಲೆ ಯಾರೂ ಪ್ರಕರಣ ದಾಖಲಿಸುತ್ತಿಲ್ಲ. ಮತ್ತೊಂದೆಡೆ ಸಿಎಸ್ಸಿ ಹೆಸರಲ್ಲಿ ಕೆಲವು ರೈತರ ಖಾತೆಗೆ ಕೇಂದ್ರ ಸರಕಾರದ ಹಣ ಹಾಕಿ ಅವರಿಂದ ಹಣ ಪಡೆಯಲಾಗುತ್ತಿದೆ. ಈ ಬಗ್ಗೆ ಮಾಧ್ಯಮಗಳು ಮೃಧು ಧೋರಣೆ ತೋರುತ್ತಿವೆ ಎಂದು ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು.