ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್ ವಿ ಸಂಕನೂರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ನಾಲ್ಕನೇ ಹಾಗೂ ಅಂತಿಮ ಸುತ್ತಿನ ಮತಗಳ ಎಣಿಕೆ ಪೂರ್ಣಗೊಂಡಿದ್ದು ಬಿಜೆಪಿ ಅಭ್ಯರ್ಥಿ ಎಸ್ ವಿ ಸಂಕನೂರು ಅವರಿಗೆ - 23857 ಮತ ಬಿದ್ದರೇ, ಕಾಂಗ್ರೆಸ್ ಅಭ್ಯರ್ಥಿ ಆರ್ ಎಂ ಕುಬೇರಪ್ಪನವರು 6188 ಮತ ಪಡೆದಿದ್ದಾರೆ. ಇನ್ನೂ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರ 6188 ಪಡೆಯುವಲ್ಲಿ ಶಕ್ತರಾಗಿದ್ದಾರೆ. ಒಟ್ಟು 52041 ಮತಗಳು ಚಲಾವಣೆಯಾಗಿದ್ದು, 8772 ಮತಗಳು ಅಸಿಂಧುವಾಗಿದೆ.
ಕರ್ನಾಟಕ ವಿಧಾನಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರ ವಿಜೇತ ಅಭ್ಯರ್ಥಿ ಎಸ್.ವಿ.ಸಂಕನೂರ ಅವರಿಗೆ ಚುನಾವಣಾ ವೀಕ್ಷಕರಾಗಿರುವ , ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಚುನಾವಣಾಧಿಕಾರಿಯಾಗಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಪ್ರಮಾಣ ಪತ್ರ ನೀಡಿದರು.
ಸಹಾಯಕ ಚುನಾವಣಾಧಿಕಾರಿಗಳಾಗಿರುವ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ, ಹಾವೇರಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ್,ಗದಗ ಜಿಲ್ಲಾಧಿಕಾರಿ ಸುಂದರೇಶಬಾಬು, ಉತ್ತರ ಕನ್ನಡ ಜಿಲ್ಲಾಧಿಕಾರಿ ಹರೀಶಕುಮಾರ್ ಮತ್ತಿತರರು ಉಪಸ್ಥಿತರಿದ್ದರು.