ಬೆಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಅಧಿಕಾರಿಗಳು ಮತ್ತು ಸಿಸಿಬಿ ಪೊಲೀಸರು ಏನೇ ತಿಪ್ಪರಲಾಗ ಹಾಕಿದರೂ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿ ಪರಾರಿಯಾಗಿರುವ ಆರೋಪಿಯ ಸುಳಿವು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸೀದಾ ಬಿಎಂಟಿಸಿ ಬಸ್ ಹತ್ತಿ ರಾಜಾಜಿನಗರದ ಸುಜಾತ ಥಿಯೇಟರ್ ಬಸ್ಸ್ಟಾಂಡ್ಗೆ ಬಂದಿಳಿದು ಅಲ್ಲಿಂದ ಕೆಎಸ್ಆರ್ಟಿಸಿ ಬಸ್ ಹತ್ತಿ ತುಮಕೂರು, ಬಳ್ಳಾರಿ, ಬೀದರ್, ಗುಲ್ಬರ್ಗಾ, ರಾಯಚೂರು ತಲುಪಿದ್ದ ಬಾಂಬರ್ ನಂತರ ಎಲ್ಲಿಗೆ ಹೋಗಿದ್ದಾನೆ ಎಂಬುದು ಇನ್ನೂ ಪತ್ತೆಯಾಗಿಲ್ಲ.
ಹೀಗಾಗಿ ಹೈದರಾಬಾದ್ ಕರ್ನಾಟಕದಲ್ಲಿ ಬೀಡುಬಿಟ್ಟಿರುವ ಎನ್ಐಎ ಅಧಿಕಾರಿಗಳು ಅಲ್ಲಿನ ಗಲ್ಲಿ ಗಲ್ಲಿಗಳಲ್ಲೂ ಬಾಂಬರ್ಗಾಗಿ ಶೋಧ ನಡೆಸುತ್ತಿದ್ದಾರೆ. ಆದರೆ ಇದುವರೆಗೂ ಆತನ ಸುಳಿವು ಮಾತ್ರ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಆದರೂ ಪಟ್ಟುಬಿಡದ ಎನ್ಐಎ ಅಧಿಕಾರಿಗಳು ತಮ್ಮ ತಂತ್ರವನ್ನೆಲ್ಲಾ ಬಳಸಿ ಆರೋಪಿಗಾಗಿ ಶೋಧ ಮುಂದುವರೆಸಿದ್ದು ಆತನ ಬಂಧನಕ್ಕಾಗಿ ತೀವ್ರ ಕಾರ್ಯಚರಣೆ ನಡೆಸುತ್ತಿದ್ದಾರೆ. ಸುಜಾತ ಬಸ್ ನಿಲ್ದಾಣದಿಂದ ತುಮಕೂರಿಗೆ ಬಾಂಬರ್ ಹೋಗಿರುವುದು ಖಚಿತವಾಗುತ್ತಿದ್ದಂತೆ ಅಲ್ಲಿಗೆ ದೌಡಾಯಿಸಿದ್ದ ಪೊಲೀಸರು ತುಮಕೂರು ಮತ್ತು ಬಳ್ಳಾರಿಯ ಇಂಚಿಂಚು ಜಾಗವನ್ನು ಜಾಲಾಡಿದ್ದರೂ ಆತನ ಸುಳಿವು ಮಾತ್ರ ಪತ್ತೆಯಾಗಿರಲಿಲ್ಲ.