ಮಂಡ್ಯ:ಮತದಾರರಲ್ಲಿ ಮತದಾನದ ಮಹತ್ವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹಮ್ಮಿಕೊಂಡ ಮತದಾನ ಜಾಗೃತಿ ಛಾಯಾಚಿತ್ರ ಪ್ರದರ್ಶನಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ಚಾಲನೆ ನೀಡಿದರು.
ನಗರದ ವಾರ್ತಾ ಮತ್ತು ಸಾರ್ವಜಿನಕ ಸಂಪರ್ಕ ಇಲಾಖೆ ಕಚೇರಿ ಆವರಣದಲ್ಲಿ ಹಮ್ಮಿಕೊಂಡ ಮತದಾರರಲ್ಲಿ ಜಾಗೃತಿ ಮೂಡಿಸುವ ಹಾಗೂ ಚುನಾವಣಾ ಸಮಗ್ರ ಮಾಹಿತಿ ಫಲಕಗಳನ್ನು ವೀಕ್ಷಿಸಿ ಮಾತನಾಡಿದ ಅವರು ಸಂವಿಧಾನಾತ್ಮಕವಾಗಿ ಪಡೆದಿರುವ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಎಲ್ಲರೂ ಮುಂದಾಗಬೇಕು ಎಂದು ತಿಳಿಸಿದರು.
ಚುನಾವಣೆಗೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನೀಡುವ ಸಲುವಾಗಿ ಹಾಗೂ ಮತದಾರರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಏಪ್ರಿಲ್ 2 ರಿಂದ 4ರ ವರೆಗೆ ಮೂರು ದಿನಗಳ ಕಾಲ ರಾಜ್ಯ ಚುನಾವಣಾ ಆಯೋಗ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಿರುವ ಛಾಯಾಚಿತ್ರ ಪ್ರದರ್ಶನದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಹೇಳಿದರು.
ಇದೇ ವೇಳೆ ಮೊಟ್ಟ ಮೊದಲ ಬಾರಿಗೆ ಚುನಾವಣಾ ಆಯೋಗ ರಚಿಸಿರುವ “ಸಿ-ವಿಜಲ್” ಆ್ಯಪ್ ಕುರಿತು ಮಾಹಿತಿ ನೀಡಿದ ಅವರು, ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಹಾಗೂ ಇತರೆ ಚುನಾವಣೆ ದೂರುಗಳನ್ನು “ಸಿ-ವಿಜಲ್” ಆ್ಯಪ್ ಮೂಲಕ ಸಲ್ಲಿಸಬಹುದು. “ಸಿ-ವಿಜಲ್” ಆ್ಯಪ್ ಮೂಲಕ ದೂರು ನೀಡುವ ಸಾರ್ವಜನಿಕರ ವಿವರವನ್ನು ಗೋಪ್ಯವಾಗಿ ಇಡಲಾಗುವುದು. ಹೀಗಾಗಿ ದೂರುದಾರರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ತಿಳಿಸಿದರು.
ಅಲ್ಲದೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ನೋಂದಣಿ, ಅರ್ಜಿಯ ಸ್ಥತಿಗತಿ, ಮತಗಟ್ಟೆಗಳ ವಿವರ ಹಾಗೂ ಸಂಬಂಧಿಸಿದ ಇತರೆ ಮಾಹಿತಿ ಬಗ್ಗೆ ತಿಳಿಯಲು ಉಚಿತ ಸಹಾಯವಾಣಿ ಸಂಖ್ಯೆ “1950” ಕರೆ ಮಾಡಬಹುದು ಎಂದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಮಹೇಶ್ ಎನ್.ಎಸ್, ಮಂಡ್ಯ ತಾಲ್ಲೂಕು ತಹಶೀಲ್ದಾರ್ ಎಲ್.ನಾಗೇಶ್, ಸಹಾಯಕ ವಾರ್ತಾಧಿಕಾರಿಗಳಾದ ಹರೀಶ್ ಟಿ.ಕೆ ಹಾಗೂ ಇತರರು ಉಪಸ್ಥಿತರಿದ್ದರು.