ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ಮತದಾನ ಪ್ರಕ್ರಿಯೆ ಮುಕ್ತಾಯಗೊಳ್ಳುವ ಹಂತದಲ್ಲಿ ಬಿಜೆಪಿ ಕಾರ್ಯಕರ್ತರ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಜೀವರಾಜ್ ಆಪ್ತರು ಎನ್ನಲಾದ ಇಬ್ಬರು ವ್ಯಕ್ತಿಗಳು ಶೃಂಗೇರಿ ಕ್ಷೇತ್ರ ವ್ಯಾಪ್ತಿಯ ಪ್ರಭಾವಿ ಬಿಜೆಪಿ ಹಾಗೂ ಬಜರಂಗದಳದ ಮುಖಂಡನ ಮೇಲೆ ರಾಡ್ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ವರದಿಯಾಗಿದೆ.
ಜಿಲ್ಲೆಯ ಶೃಂಗೇರಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಖಾಂಡ್ಯ ಹೋಬಳಿ ಉಜಿನಿ ಮತಗಟ್ಟೆ ಬಳಿ ಘಟನೆ ನಡೆದಿದ್ದು, ಬಜರಂಗದಳ ಹಾಗೂ ಬಿಜೆಪಿ ಮುಖಂಡ ಖಾಂಡ್ಯ ಪ್ರವೀಣ್ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ.
ಶೃಂಗೇರಿ ಕ್ಷೇತ್ರದ ಮಾಜಿ ಶಾಸಕ ಡಿ.ಎನ್.ಜೀವರಾಜ್ ಬೆಂಬಲಿಗರಾದ ವೆನಿಲ್ಲಾ ಪ್ರಭಾಕರ್, ಅರುಣ್ ಹಾಗೂ ಇನ್ನೂ ಕೆಲ ಮಂದಿ ಪ್ರವೀಣ್ ಮೇಲೆ ರಾಡ್ನಿಂದ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದ್ದು, ಘಟನೆಯಲ್ಲಿ ಪ್ರವೀಣ್ ತಲೆಗೆ ತೀವ್ರ ಗಾಯವಾಗಿದೆ.
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ಪ್ರವೀಣ್ ತಮ್ಮ ಬೆಂಬಲಿಗರೊಂದಿಗೆ ಶೃಂಗೇರಿ ಕ್ಷೇತ್ರ ವ್ಯಾಪ್ತಿಯ ವಿವಿಧ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಸಂಚಾರ ಮಾಡುತ್ತಿದ್ದರು. ಈ ವೇಳೆ ಅವರು ಮತದಾರರ ಬಳಿ ತೆರಳಿ ಮತದಾನಕ್ಕೆ ಮನವೊಲಿಸುವ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.